ಮಂಗಳೂರು: ರಾಜ್ಯದಲ್ಲಿ ಕೊರೋನಾ ಸಂಕಷ್ಟ ಹೆಚ್ಚುತ್ತಿರುವ ಸಂದರ್ಭದಲ್ಲಿ ಹಲವಾರು ಜಿಲ್ಲೆಗಳು ಸ್ವಯಂ ಪ್ರೇರಿತ ಲಾಕ್ಡೌನ್ ಕ್ರಮವನ್ನು ಅನುಸರಿಸಿವೆ. ಸದ್ಯ ದಕ್ಷಿಣ ಕನ್ನಡದಲ್ಲಿಯೂ ಕೊರೋನಾ ಲಾಕ್ಡೌನ್ ಕ್ರಮ ಜಾರಿಯಲ್ಲಿದೆ. ಈ ಸಂದರ್ಭವನ್ನು ಅರ್ಥಪೂರ್ಣವಾಗಿ ಬಳಕೆ ಮಾಡಿಕೊಂಡಿರುವ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬಿ. ಸಿ. ರೋಡ್ ನಲ್ಲಿನ ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಹೊಂಡ ಗುಂಡಿಗಳಿಗೆ ಮುಕ್ತಿ ನೀಡುವ ಮಾದರಿ ಕೆಲಸವನ್ನು ಮಾಡಿದ್ದಾರೆ.
ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ನಾಯಕತ್ವದಲ್ಲಿ ಯುವ ಮೋರ್ಚಾ ಕಾರ್ಯಕರ್ತರು ರಸ್ತೆಯಲ್ಲಿನ ಬೃಹತ್ ಗಾತ್ರದ ಹೊಂಡ ಗುಂಡಿಗಳನ್ನು ಮುಚ್ಚಿದ್ದಾರೆ. ರಸ್ತೆಯ ಹೊಂಡಗಳಿಗೆ ಕಾಂಕ್ರೀಟ್ ಹಾಕಿ ತೇಪೆ ಹಾಕುವ ಕೆಲಸವನ್ನು ಯುವ ಮೋರ್ಚಾ ಸದಸ್ಯರು ಮಾಡಿದ್ದು, ಆ ಮೂಲಕ ವಾಹನಗಳಿಗೆ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ.
ಲಾಕ್ಡೌನ್ ಸಂದರ್ಭದಲ್ಲಿ ಸಾರ್ವಜನಿಕ ರಸ್ತೆಯನ್ನು ದುರಸ್ಥಿಗೊಳಿಸುವ ಮೂಲಕ ಬಿಜೆಪಿ ಯುವ ಮೋರ್ಚಾ ಸದಸ್ಯರು ಮಾದರಿಗಳಾಗಿದ್ದಾರೆ. ಆ ಮೂಲಕ ಕಾಯಕ ಮಾಡುವ ಮನಸ್ಸು ಮತ್ತು ಸಂಘಟನಾತ್ಮಕ ಪ್ರಯತ್ನ ನಡೆಸಿದರೆ ಯಾವುದೂ ಅಸಾಧ್ಯವಲ್ಲ ಎಂಬುದನ್ನೂ ಈ ಕಾರ್ಯಕರ್ತರು ತಮ್ಮ ನಿಸ್ವಾರ್ಥ ಸೇವೆಯ ಮೂಲಕವೇ ಸಾಧಿಸಿ ತೋರಿಸಿದ್ದಾರೆ. ಈ ಶ್ರಮದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಬಂಟ್ವಾಳ ಯುವ ಮೋರ್ಚಾ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು ಸೇರಿದಂತೆ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.