ಬೆಂಗಳೂರು: ಕೊರೋನಾ ತಡೆಗೆ ಲಾಕ್ಡೌನ್ ಒಂದೇ ಸರಿಯಾದ ಮದ್ದಲ್ಲ. ಸ್ವಯಂ ನಿಯಂತ್ರಣದಿಂದ ಮಾತ್ರವೇ ಕೊರೋನಾ ತಡೆಗಟ್ಟುವುದು ಸಾಧ್ಯ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಬೆಂಗಳೂರಿನಲ್ಲಿ ಯಾವುದೇ ರೀತಿಯ ಲಾಕ್ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಕಳೆದೊಂದು ವಾರದ ಹಿಂದೆ ಜಾರಿಗೊಳಿಸಲಾಗಿದ್ದಲಾಕ್ಡೌನ್ ಮುಕ್ತಾಯದ ಹಂತದಲ್ಲಿದ್ದು, ಆ ಬಳಿಕ ಬೆಂಗಳೂರಿನಲ್ಲಿ ಯಾವುದೇ ರೀತಿಯಲಾಕ್ಡೌನ್ ಇರುವುದಿಲ್ಲ. ಏಕೆಂದರೆ ರಾಜ್ಯದ ಪ್ರಗತಿಗೆ ಆರ್ಥಿಕತೆಯೂ ಮುಖ್ಯವಾಗಿದ್ದು, ಜನರಿಗೆ ಜೀವನ ನಡೆಸಲು ಕಷ್ಟವಾಗುವಂತಾಗಬಾರದು ಎಂಬ ಉದ್ದೇಶದಿಂದ ಈ ನಿರ್ಣಯ ತೆಗೆದುಕೊಳ್ಳುತ್ತಿರುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ.
ಕೊರೋನಾ ಸಂದರ್ಭದಲ್ಲಿ ಜನರು ತಮ್ಮನ್ನು ತಾವು ಕಾಪಾಡಿಕೊಳ್ಳುವುದರತ್ತ ಚಿತ್ತ ಹರಿಸಬೇಕು. ಸೋಂಕಿನಿಂದ ರಕ್ಷಿಸಿಕೊಳ್ಳಲು ಕಡ್ಡಾಯವಾಗಿ ಮಾಸ್ಕ್ ಧರಿಸುವುದನ್ನು ಅಭ್ಯಸಿಸಿಕೊಳ್ಳಬೇಕು. ಜೊತೆಗೆ ಇನ್ನಿತರ ನಿಯಂತ್ರಣ ಕ್ರಮಗಳನ್ನೂ ನಮಗೆ ನಾವೇ ಅಳವಡಿಸಿಕೊಳ್ಳುವ ಮೂಲಕವೇ ಸೋಂಕಿನಿಂದ ರಕ್ಷಿಸಿಕೊಳ್ಳುವುದು ಸಾಧ್ಯ. ಆದ್ದರಿಂದ ಜನರು ಎಚ್ಚೆತ್ತುಕೊಂಡು ಸ್ವಯಂ ನಿಯಂತ್ರಣ ಹೇರಿಕೊಳ್ಳುವಂತೆಯೂ ಸೂಚಿಸಿದ್ದಾರೆ. ಜೊತೆಗೆ ಹಿರಿಯ ನಾಗರಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವಂತೆಯೂ ಮನವಿ ಮಾಡಿದ್ದಾರೆ.
ಇನ್ನು ಕೊರೋನಾ ರೋಗಿಗಳ ಚಿಕಿತ್ಸೆಗೆ ರಾಜ್ಯ ಸರ್ಕಾರ ಪೂರಕ ಕ್ರಮಗಳನ್ನು ಸಮರ್ಪಕವಾಗಿ ಕೈಗೊಂಡಿದೆ. ರೋಗಿಗಳ ಚಿಕಿತ್ಸೆಗೆ ಅಗತ್ಯವಿರುವ ಹಾಸಿಗೆಗಳನ್ನೂ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ರಾಜ್ಯದಲ್ಲಿ ಅಗತ್ಯವಿರುವ ಆಂಬ್ಯುಲೆನ್ಸ್ ಗಳನ್ನೂ ವ್ಯವಸ್ಥೆ ಮಾಡಲಾಗಿದೆ. ಕೊರೋನಾ ರೋಗ ಲಕ್ಷಣವಿಲ್ಲದ ರೋಗಿಗಳಿಗೆ ಹೋಂ ಐಸೋಲೇಷನ್ ಅಥವಾ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಲಕ್ಷಣವಿರುವ ಮತ್ತು ಗಂಭೀರ ಪರಿಣಾಮಗಳನ್ನು ಎದುರಿಸುತ್ತಿರುವ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಎಲ್ಲಾ ವ್ಯವಸ್ಥೆಗಳನ್ನೂ ಕಲ್ಪಿಸಲಾಗಿದೆ. ಇದಕ್ಕೆ ಖಾಸಗಿ ವಲಯಗಳೂ ಸರ್ಕಾರದ ಜೊತೆಗೆ ಕೈ ಜೋಡಿಸಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಹಾಗೆಯೇ ಲ್ಯಾಬ್ ಗಳಲ್ಲಿ ಮಾದರಿ ಪರೀಕ್ಷೆ ನಡೆಸಿದ ಬಳಿಕ 24 ಗಂಟೆಗಳೊಳಗೆ ವರದಿ ನೀಡುವಂತೆಯೂ ಸೂಚಿಸಿರುವುದಾಗಿ ಅವರು ತಿಳಿಸಿದ್ದಾರೆ.
ಇನ್ನು ಕೊರೋನಾ ಚಿಕಿತ್ಸೆಗೆ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಸರ್ಕಾರ ಅಕ್ರಮವೆಸಗಿದೆ, ರೋಗಿಗಳಿಗೆ ಬಳಸಿದ ಹಾಸಿಗೆಗಳನ್ನು ಇನ್ನೆಲ್ಲೋ ಬಳಸಲಾಗುತ್ತಿದೆ ಎಂದೆಲ್ಲಾ ವಿರೋಧ ಪಕ್ಷದ ನಾಯಕರು ಆರೋಪ ಮಾಡುತ್ತಿದ್ದಾರೆ. ಈ ಕುರಿತಂತೆ ಸರ್ಕಾರ ಯಾವುದೇ ಅಕ್ರಮ ಎಸಗಿಲ್ಲ ಎಂಬುದಕ್ಕೆ ಪೂರಕವಾದ ಯಾವುದೇ ದಾಖಲೆಗಳನ್ನು ನೀಡಲು ಸಿದ್ಧವಿದ್ದು, ಸಂದೇಹವಿದ್ದವರು ದಾಖಲೆಗಳನ್ನು ಪರಿಶೀಲನೆ ಮಾಡಿ ಉತ್ತರ ಕಂಡುಕೊಳ್ಳುವಂತೆಯೂ ಸಿಎಂ ಸೂಚಿಸಿದ್ದಾರೆ. ಜೊತೆಗೆ ಇಂತಹ ಸುಳ್ಳು ಆರೋಪಗಳನ್ನು ಮಾಡುವುದರಲ್ಲೇ ಕಾಲಹರಣ ಮಾಡುವ ಬದಲು ಕೊರೋನಾ ನಿಯಂತ್ರಣ ವಿಚಾರದಲ್ಲಿ ಸರ್ಕಾರಕ್ಕೆ ಸಲಹೆ ಸೂಚನೆಗಳನ್ನು ನೀಡುವುದು, ಇನ್ನಿತರ ರೀತಿಯಲ್ಲಿ ಕೈಜೋಡಿಸುವ ಮೂಲಕ ಒಗ್ಗಟ್ಟಿನ ಹೋರಾಟಕ್ಕೆ ಬೆಂಬಲ ಸೂಚಿಸುವಂತೆಯೂ ಯಡಿಯೂರಪ್ಪ ಕಿವಿಮಾತು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.