ನವದೆಹಲಿ: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯನ್ನು ಕೆಲವೇ ಪ್ರಮುಖರ ಉಪಸ್ಥಿತಿಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ.
ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಗೆ ಕೇವಲ 250 ಜನರನ್ನು ಮಾತ್ರ ಆಹ್ವಾನಿಸುವುದಾಗಿ ತಿಳಿದು ಬಂದಿದ್ದು, ಅದಕ್ಕಾಗಿ ಪಟ್ಟಿಯನ್ನೂ ಸಿದ್ಧಪಡಿಸಲಾಗುತ್ತಿದೆ. ಜೊತೆಗೆ ಈ ಸಮಾರಂಭದಲ್ಲಿ ಶಾಲಾ ಮಕ್ಕಳ ಭಾಗವಹಿಸುವಿಕೆಯೂ ಇಲ್ಲ ಎಂದು ಮಾಹಿತಿ ಇದೆ. ಜೊತೆಗೆ ರಕ್ಷಣಾ ವ್ಯವಸ್ಥೆ ಕಲ್ಪಿಸುವ ಪೊಲೀಸರು ಪಿಪಿಇ ಕಿಟ್ ಗಳನ್ನು ಧರಿಸಿ ಕರ್ತವ್ಯ ನಿರ್ವಹಿಸಲಿರುವುದಾಗಿಯೂ ಅಧಿಕಾರಿಗಳು ಹೇಳಿದ್ದಾರೆ. ಕುಳಿತುಕೊಳ್ಳುವುದಕ್ಕೆ ಬಳಸುತ್ತಿದ್ದ ಕಂಬಳಿಗಳ ಬದಲಾಗಿ ಹೆಚ್ಚುವರಿ ಕುರ್ಚಿಗಳನ್ನು ಬಳಕೆ ಮಾಡಲಾಗುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಶಾಲೆಗಳಿಗೆ ಸಂಬಂಧಿಸಿದಂತೆ ಕೇವಲ ಎನ್ ಸಿ ಸಿ ವಿದ್ಯಾರ್ಥಿಗಳು ಮಾತ್ರವೇ ಭಾಗವಹಿಸಲು ಅವಕಾಶ ನೀಡಲಾಗಿದೆ. ಜೊತೆಗೆ ಮಧ್ಯಾಹ್ನದ ವೇಳೆ ರಾಷ್ಟ್ರಪತಿ ಭವನದಲ್ಲಿ ನಡೆಯುವಕಾರ್ಯಕ್ರಮದಲ್ಲಿ ಕೊರೋನಾ ವಾರಿಯರ್ಸ್ ಭಾಗವಹಿಸಲಿದ್ದಾರೆ. ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರಪತಿ ಭವನದ ಸಮಾರಂಭ ನಡೆಯಲಿದೆ.
ಪ್ರಧಾನಿ ಮೋದಿ ಭಾಷಣದಲ್ಲಿಯೂ ಕೇವಲ 250 ಜನರಷ್ಟೇ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೊರೋನಾ ನಿಯಂತ್ರಣ ಕ್ರಮಗಳಾದ ಮಾಸ್ಕ್ ಧಾರಣೆ, ಸ್ಯಾನಿಟೈಸೇಶನ್, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಇನ್ನಿತರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದೂ ಅಧಿಕೃತ ಮೂಲಗಳು ತಿಳಿಸಿವೆ.
ಸ್ವಾತಂತ್ರ್ಯ ದಿನಾಚರಣೆಗೆ ಕೇಂದ್ರ ಗೃಹ ಸಚಿವಾಲಯದಿಂದ ಮಾರ್ಗಸೂಚಿ:
ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದಂತೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೂ ಕೇಂದ್ರ ಗೃಹ ಸಚಿವಾಲಯ, ಕೊರೋನಾ ನಿಯಂತ್ರಣ ಮಾನದಂಡಗಳನ್ನು ಗಮನದಲ್ಲಿಟ್ಟುಕೊಂಡೇ ಕಾರ್ಯಕ್ರಮಗಳನ್ನು ನಡೆಸುವಂತೆಯೂ ಸೂಚಿಸಿದೆ. ಡಿಜಿಟಲ್ ತಂತ್ರಜ್ಞಾನ ಬಳಕೆಯ ಮೂಲಕ ಕಾರ್ಯಕ್ರಮದಲ್ಲಿ ಹೆಚ್ಚು ಜನರು ಭಾಗಿಗಳಾಗದಂತೆಯೂ ಗಮನವಹಿಸಲು ತಿಳಿಸಿದೆ. ಜೊತೆಗೆ ರಾಜ್ಯಗಳ ಜಿಲ್ಲೆ, ತಾಲೂಕು, ಗ್ರಾಮಗಳಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ದೊಡ್ಡ ಮಟ್ಟದ ಕಾರ್ಯಕ್ರಮಗಳನ್ನು ನಡೆಸದಂತೆಯೂ ಕೇಂದ್ರ ಗೃಹ ಇಲಾಖೆ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ.
ಜೊತೆಗೆ ಆತ್ಮನಿರ್ಭರ ಭಾರತಕ್ಕೆ ಪೂರಕವಾಗುವಂತಹ ಸ್ವಾವಲಂಬನೆಗೆ ಸಂಬಂಧಿಸಿದಂತೆ ಕಾರ್ಯಕ್ರಮಗಳನ್ನು ನಡೆಸುವಂತೆಯೂ ಗೃಹ ಇಲಾಖೆ ಮಾರ್ಗಸೂಚಿಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.