ಬೆಂಗಳೂರು: ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂತಹ ಕಠಿಣ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯುವ ಯಾವುದೇ ಇರಾದೆ ಸರ್ಕಾರಕ್ಕಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸರ್ಕಾರೇತರ ಸಂಸ್ಥೆಗಳ 35 ಕ್ಕೂ ಹೆಚ್ಚು ಪ್ರತಿನಿಧಿಗಳ ಜೊತೆಗೆ ತಂತ್ರಜ್ಞಾನ ಆಧಾರಿತ ಶಿಕ್ಷಣ ಮತ್ತು ಶಾಲಾ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿ, ಬಳಿಕ ಈ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ.
ಶಾಲೆಯನ್ನು ತೆರೆದು ಮಕ್ಕಳನ್ನು ಆಪತ್ತಿಗೆ ದೂಡುವ ಕೆಲಸವನ್ನು ಸರ್ಕಾರ ಮಾಡುವುದಿಲ್ಲ. ಬದಲಾಗಿ ತಂತ್ರಜ್ಞಾನ ಆಧಾರಿತ ಪದ್ದತಿ ಅನುಸರಿಸುವ ಮೂಲಕ ಮಕ್ಕಳಿಗೆ ಶಿಕ್ಷಣ ನೀಡುವತ್ತ ಗಮನ ಹರಿಸಲಾಗುತ್ತದೆ. ಮನೆ ಶಾಲೆ, ದೂರದರ್ಶ, ಖಾಸಗಿ ವಾಹಿನಿ, ಶಿಕ್ಷಣ ಇಲಾಖೆಯ ವಾಹಿನಿಗಳು, ಯೂಟ್ಯೂಬ್ ಮೊದಲಾದವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಮಕ್ಕಳಿಗೆ ಶಿಕ್ಷಣ ಒದಗಿಸುವತ್ತ ಚಿತ್ತ ಹರಿಸಲಾಗುತ್ತಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು, ಪ್ರಸ್ತುತ ಸಾಂಕ್ರಾಮಿಕ ಸೋಂಕಿನ ಅವಧಿಯಲ್ಲಿ ಮಕ್ಕಳಿಗೆ ಶಾಲಾರಂಭ ಮಾಡುವ ಬದಲು, ಇರುವ ಇತರ ಎಲ್ಲಾ ಸಾಧ್ಯತೆಗಳನ್ನು ಬಳಸಿಕೊಂಡು ಹೊಸ ಶಿಕ್ಷಣ ಕ್ರಮವನ್ನು ಜಾರಿಗೊಳಿಸುವುದು ಉತ್ತಮ. ಶಾಲಾರಂಭದ ಕುರಿತಂತೆ ತಜ್ಞರ ಅಭಿಪ್ರಾಯ ಏನೇ ಇದ್ದರೂ, ಮಕ್ಕಳ ಹಿತದೃಷ್ಟಿಯಿಂದ ಕಲಿಕೆಗೆ ಪೂರಕವಾದ ಕ್ರಮಗಳನ್ನು ಅನುಷ್ಠಾನ ಮಾಡುವುದು ಉತ್ತಮ. ತಂತ್ರಜ್ಞಾನ ಆಧಾರಿತ ಶಿಕ್ಷಣ ಕ್ರಮದ ಸಂದರ್ಭದಲ್ಲಿ ಎಲ್ಲಾ ಮಕ್ಕಳಿಗೂ ಈ ಅನುಕೂಲವನ್ನು ಪಡೆದುಕೊಳ್ಳಲೂ ಪೂರಕ ವಾತಾವರಣ ನಿರ್ಮಾಣವಾಗಿದೆಯೋ, ಇಲ್ಲವೋ ಎಂಬುದರ ಕುರಿತು ಗಮನ ಹರಿಸುವ ನಿಟ್ಟಿನಲ್ಲಿಯೂ ಪ್ರಯತ್ನಿಸಬೇಕು ಎಂದು ಸೂಚಿಸಿದರು.
ಎಲ್ಲರ ಸಲಹೆ ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಸಂದರ್ಭ ಮತ್ತು ಪ್ರದೇಶಕ್ಕನುಗುಣವಾಗಿ ಪೂರಕ ಕ್ರಮಗಳನ್ನು ಕೈಗೊಳ್ಳುವ ಭರವಸೆಯನ್ನೂ ಸಚಿವರು ಈ ಸಂದರ್ಭದಲ್ಲಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.