ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿರುವ ಹಿನ್ನೆಯಲ್ಲಿ ಹೊಸ ಆಧುನೀಕರಣಗೊಂಡ ರೈಲ್ವೆ ನಿಲ್ದಾಣವನ್ನು ಆರಂಭ ಮಾಡುವುದಾಗಿ ಕೇಂದ್ರ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಜೂನ್ 2021ಕ್ಕೆ ಈ ಆಧುನೀಕರಗೊಂಡ ನಿಲ್ದಾಣ ಕಾಮಗಾರಿ ಸಂಪೂರ್ಣಗೊಳಿಸಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಉತ್ತರ ರೈಲ್ವೆಯ ಜನರಲ್ ಮ್ಯಾನೇಜರ್ ರಾಜೀವ್ ಚೌಧರಿ, ರೈಲು ನಿಲ್ದಾಣದ 1, 2 ನೇ ಪ್ಲಾಟ್ಫಾರ್ಮ್, ವರಾಂಡ, ಮೆಟ್ಟಿಲು ಮತ್ತು ಪ್ಯಾಸೇಜ್ಗಳ ಕೆಲಸ ಈಗಾಗಲೇ ಮುಕ್ತಾಯವಾಗಿದೆ. 2017-18 ರಲ್ಲಿ ಈ ರೈಲು ನಿಲ್ದಾಣ ಕಾಮಗಾರಿಗೆ 104 ಕೋಟಿ ರೂ. ಅನುದಾನ ನೀಡಲಾಗಿದ್ದು, 2021 ಜೂನ್ ವೇಳೆಗೆ ಇದರ ಮೊದಲ ಹಂತದ ನಿರ್ಮಾಣ ಕಾಮಗಾರಿ ಸಂಪೂರ್ಣವಾಗಲಿದೆ ಎಂದೂ ತಿಳಿಸಿದ್ದಾರೆ.
ಈ ರೈಲ್ವೆ ನಿಲ್ದಾಣವು ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಳ್ಳಲಿದ್ದು, ರಾಮ ಮಂದಿರಕ್ಕೆ ಆಗಮಿಸುವ ಕೋಟ್ಯಂತರ ಭಕ್ತರಿಗೆ ಸಹಕಾರಿಯಾಗಲಿದೆ. ರಾಮ ಮಂದಿರದ ಮಹತ್ವ ಮತ್ತು ಭವಿಷ್ಯದ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಈ ನಿಲ್ದಾಣವನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ಮಹಿಳೆಯರು ಮತ್ತು ಪುರುಷರಿಗಾಗಿ ವಸತಿಗೃಹಗಳನ್ನು ನಿರ್ಮಾಣ ಮಾಡಲಾಗುವುದಾಗಿಯೂ ಚೌಧರಿ ಮಾಹಿತಿ ನೀಡಿದ್ದಾರೆ. ಎರಡನೇ ಹಂತದಲ್ಲಿ ಮತ್ತಷ್ಟು ಕಾಮಗಾರಿಗಳನ್ನು ನಡೆಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಇನ್ನು ಈ ಕುರಿತಂತೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್, ರಾಮ ಮಂದಿರಕ್ಕೆ ಆಗಮಿಸುವ ಕೋಟ್ಯಂತರ ಜನರಿಗೆ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸಿಕೊಡುವುದಕ್ಕೆ ಪೂರಕವಾಗಿ ಈ ನಿಲ್ದಾಣವನ್ನು ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪುನರ್ ವಿಕಾಸ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.