ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಅತಿವೃಷ್ಟಿ, ಪ್ರವಾಹ ಭೀತಿ ಎದುರಾಗಿದೆ. ಈಗಾಗಲೇ ಮಲೆನಾಡು, ಪಶ್ಚಿಮ ಘಟ್ಟ, ಕರಾವಳಿ ಪ್ರದೇಶಗಳಲ್ಲಿ ಅನಾಹುತಗಳೂ ಸಂಭವಿಸಿದ ಬಗ್ಗೆ ವರದಿಯಾಗಿವೆ. ಈ ಸಂಬಂಧ ರಾಜ್ಯದ 11 ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಗಳಂತೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಮಾಡಲಾಗುತ್ತದೆ ಎಂದು ಸಚಿವ ಅರ್. ಅಶೋಕ್ ಅವರು ಮಾಹಿತಿ ನೀಡಿದ್ದಾರೆ.
ಉಡುಪಿಯಲ್ಲಿ ಪ್ರವಾಹ ಪರಿಶೀಲನೆಯ ಬಳಿಕ ಮಾತನಾಡಿದ ಅವರು, ಈ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರ ಪೂರಕ ಕ್ರಮಗಳನ್ನು ಕೈಗೊಂಡಿದೆ. ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಹಾವೇರಿ, ದಕ್ಷಿಣ ಕನ್ನಡ, ಕೊಡಗು,ಮೈಸೂರು, ಚಾಮರಾಜನಗರ, ಧಾರವಾಡಗಳಿಗೆ ಮಳೆಹಾನಿ ಸಂಬಂಧ ಹೆಚ್ಚುವರಿ ಪರಿಹಾರ ಧನ ಬಿಡುಗಡೆ ಮಾಡಲಿರುವುದಾಗಿ ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಸಂಬಂಧಪಟ್ಟ ಅಧಿಕಾರಿ ವರ್ಗ, ಅಗ್ನಿಶಾಮಕ ಇಲಾಖೆ ತಕ್ಷಣದ ಕಾರ್ಯಾಚರಣೆಗೆ ಸಿದ್ಧವಾಗಿರುವಂತೆಯೂ ಅವರು ತಿಳಿಸಿದ್ದಾರೆ. ಅಲ್ಲದೆ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಅಗತ್ಯ ಸಲಕರಣೆಗಳ ಖರೀದಿಗೆ ರಾಜ್ಯ ಸರ್ಕಾರ ಅಗ್ನಿ ಶಾಮಕ ಮತ್ತು ತುರ್ತು ಸೇವಾ ಇಲಾಖೆಗೆ 20 ಕೋಟಿ ರೂ. ಮೀಸಲಿರಿಸಿದೆ ಎಂದು ತಿಳಿಸಿದ್ದಾರೆ. ಹಾಗೆಯೇ ಪ್ರವಾಹ ಭೀತಿಯ ಸ್ಥಳಗಳಿಂದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆಯೂ ಸರ್ಕಾರ ಮನವಿ ಮಾಡಿದೆ. ಅವರ ಆಶ್ರಯಕ್ಕಾಗಿ ಶಾಲಾ ಕಾಲೇಜುಗಳನ್ನು ಬಳಸಿ ಶಿಬಿರ ಆರಂಭಿಸಲಾಗಿರುವುದಾಗಿಯೂ ಅಶೋಕ್ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.