ಬೆಂಗಳೂರು: ದೇಶದ 74 ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಧ್ವಜಾರೋಹಣ ನೆರವೇರಿಸಿ, ಶುಭಾಶಯಗಳನ್ನು ತಿಳಿಸಿದ್ದಾರೆ.
ಬಳಿಕ ಮಾತನಾಡಿದ ಅವರು, ಈ ಸಂದರ್ಭದಲ್ಲಿ ಸರ್ಕಾರ ಹಲವಾರು ಸವಾಲುಗಳನ್ನು ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದನ್ನೆಲ್ಲಾ ಸಮರ್ಥವಾಗಿ ಎದುರಿಸಲು ಸರ್ಕಾರ ಬದ್ಧವಾಗಿದೆ. ಕೊರೋನಾ ಸಂದರ್ಭದಲ್ಲಿಯೂ ಕೇಂದ್ರದ ಸಹಕಾರದ ಜೊತೆಗೆ ರಾಜ್ಯ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿರುವುದಾಗಿಯೂ ಅವರು ತಿಳಿಸಿದ್ದಾರೆ.
ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬಂತೆ ಕಲ್ಯಾಣ ರಾಜ್ಯ ನಿರ್ಮಾಣದ ಗುರಿಯನ್ನು ನಾವು ಹೊಂದಿದ್ದೇವೆ. ಇದಕ್ಕಾಗಿ ರಾಜ್ಯಕ್ಕೆ ಕೇಂದ್ರದ ಮೋದಿ ನೇತೃತ್ವದ ಸರ್ಕಾರವೂ ಸಂಪೂರ್ಣ ಸಹಕಾರ ನೀಡುತ್ತಿದೆ. ಪ್ರಸ್ತುತ ಕೇಂದ್ರ ಸರ್ಕಾರ ಸ್ವಾವಲಂಬನೆಯ ಪರಿಕಲ್ಪನೆಯನ್ನಿಟ್ಟುಕೊಂಡು ಆತ್ಮನಿರ್ಭರ ಭಾರತದ ಕನಸಿನೊಂದಿಗೆ ಅಭಿವೃದ್ಧಿಯತ್ತ ಸಾಗಲಾರಂಭಿಸಿದೆ. ಇದು ದೇಶಕ್ಕೆ ಆಶಾಕಿರಣವಾಗಿದೆ ಎಂದು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯವೂ ಸವಾಲುಗಳನ್ನು ಅವಕಾಶವನ್ನಾಗಿ ಪರಿವರ್ತನೆ ಮಾಡಿಕೊಂಡು ಮುಂದಡಿಯಿಡಲು ಶಕ್ತವಾಗಿದೆ ಎಂದು ಅವರು ಹೇಳಿದ್ದಾರೆ.
ಆರೋಗ್ಯ, ವಿದ್ಯುತ್, ಅಟೋಮೊಬೈಲ್ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ವಾಭಿಮಾನದ ಸ್ವಾವಲಂಬಿ ಹೆಜ್ಜೆ ಇಡುವಲ್ಲಿ ಪೂರಕ ಕೆಲಸ ಮಾಡಲಾಗುತ್ತಿದೆ. ನೆರೆ ಹಾನಿ, ಅತಿವೃಷ್ಟಿ ಅನಾವೃಷ್ಟಿಗೆ ತುತ್ತಾದ ಜನರಿಗೂ ಸರ್ಕಾರ ಭರವಸೆ ನೀಡಿದೆ. ಸಹಾಯ ನೀಡಿದೆ. ರಾಜ್ಯದ ಎಲ್ಲಾ ಜನರ ಅಭಿವೃದ್ಧಿಯ ಮಹತ್ವಾಕಾಂಕ್ಷೆಯ ಜೊತೆಗೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆಗಳನ್ನಿಡುತ್ತಿದೆ ಎಂದೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.