ಲಕ್ನೋ: ದೇಶದಲ್ಲಿ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಲು ಉಗ್ರ ಸಂಘಟನೆಗಳು ಕೆಲವು ಸಮಯಗಳಿಂದ ತಮ್ಮ ಪ್ರಯತ್ನಗಳನ್ನು ಹೆಚ್ಚಿಸುತ್ತಲೇ ಬಂದಿವೆ. ಸದ್ಯ ಉತ್ತರ ಪ್ರದೇಶದ ಬಲರಾಮಪುರದ ಉಗ್ರ ಮುಸ್ತಕೀಂ ಖಾನ್ ಎಂಬಾತನ ಮನೆಯಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಬಾವುಟ, ಭಾರೀ ಪ್ರಮಾಣದ ಸ್ಫೋಟಕಗಳನ್ನು ದೆಹಲಿಯ ಪೊಲೀಸ್ ಸಿಬ್ಬಂದಿ ಪತ್ತೆಹಚ್ಚಿದ್ದಾರೆ.
ಆರೋಪಿ ಮುಸ್ತಕೀಂ ನನ್ನ ಬಂಧಿಸಿರುವ ಪೊಲೀಸರು ಆತನಿಂದ ಶಸ್ತ್ರಾಸ್ತ್ರಗಳು ಮತ್ತು ಎರಡು ಪ್ರೆಶರ್ ಕುಕ್ಕರ್ಗಳಲ್ಲಿ ಅಳವಡಿಸಲಾಗಿದ್ದ ಸುಧಾರಿತ ಸ್ಫೋಟಕ ವಸ್ತುಗಳನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಆತನ ಸ್ವಗ್ರಾಮ ಬಡಿಯಾ ಬೈಶಾಹಿಗೂ ಕರೆದೊಯ್ದು ಪರಿಶೀಲನೆ ನಡೆಸಲಾಗಿದ್ದು, ಈ ಸಂದರ್ಭದಲ್ಲಿ ಭಾರೀ ಪ್ರಮಾಣದ ಏಳು ಸ್ಪೋಟಕ ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಗ್ರಾಮದ ಅನೇಕ ಪ್ರದೇಶಗಳಲ್ಲಿಯೂ ಪರಿಶೀಲನೆ ಮಾಡಲಾಗಿದ್ದು, ಹಲವು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಯನ್ನು ಅಧಿಕಾರಿಗಳು ನಡೆಸಿದ್ದಾರೆ. ಆರೋಪಿ ಮುಸ್ತಕೀಂ ಖಾನ್ ಸ್ವಾತಂತ್ರ್ಯ ದಿನದಂದೇ ಸ್ಫೋಟ ನಡೆಸಲು ಸಂಚು ಹೂಡಿದ್ದ. ಆದರೆ ಭದ್ರತೆ ಹೆಚ್ಚಾಗಿದ್ದ ಕಾರಣದಿಂದ ತನ್ನ ಯೋಜನೆಯನ್ನು ಮುಂದೂಡಿದ್ದ ಎಂದೂ ವಿಚಾರಣೆಯ ವೇಳೆ ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈತ ಇಸ್ಲಾಮಿಕ್ ಭಾಷಣಕಾರ ಝಾಕೀರ್ ನಾಯ್ಕ್ನ ಭಾಷಣಗಳಿಂದ ಪ್ರಭಾವಿತನಾಗಿದ್ದ. ಅಲ್ಲದೆ ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಸಂಚು ಹೂಡುತ್ತಿರುವ ಐಸಿಸ್ ಜೊತೆಗೂ ಉತ್ತಮ ಬಾಂಧವ್ಯ ಹೊಂದಿದ್ದ. ತನ್ನ ಹೆಂಡತಿ ಮತ್ತು ನಾಲ್ವರು ಮಕ್ಕಳ ಹೆಸರಿನಲ್ಲಿ ಪಾಸ್ಪೋರ್ಟ್ ಮಾಡಿಸಿದ್ದ. ಕಳೆದ ವರ್ಷದಿಂದಲೇ ಈತನ ಚಲನವಲನಗಳ ಮೇಲೆ ಕಣ್ಣಿಡಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.