ತಮಿಳುನಾಡು: ತಮ್ಮ 35 ನೇ ವಯಸ್ಸಿನಲ್ಲಿ ಭಾರತೀಯ ಪೊಲೀಸ್ ಸೇವೆ(ಐಪಿಎಸ್) ತ್ಯಜಿಸಿದ್ದ ಕರ್ನಾಟಕದ ಸಿಂಗಂ ಎಂದೇ ಹೆಸರು ಗಳಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಇಂದು ನವದೆಹಲಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರುವ ಮೂಲಕ ಅಧಿಕೃತವಾಗಿ ರಾಜಕೀಯ ಜೀವನವನ್ನು ಆರಂಭಿಸಿದ್ದಾರೆ.
ದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಅವರು ಇಂದು ಮುಖಂಡರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿ ಅಪರಾಧಿಗಳ ಹೆಡೆಮುರಿ ಕಟ್ಟಿ ಜನರ ಮನಸ್ಸು ಗೆದ್ದಿದ್ದ ಅಣ್ಣಾಮಲೈ ಬಳಿಕ 2019 ರಲ್ಲಿ ವೃತ್ತಿ ಜೀವನಕ್ಕೆ ರಾಜೀನಾಮೆ ನೀಡಿ ತಮಿಳುನಾಡಿಗೆ ತೆರಳಿದ್ದರು. ಅಣ್ಣಾಮಲೈ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿಯೂ ಹೌದು.
ಈ ಸಂಬಂಧ ಮಾತನಾಡಿರುವ ಅಣ್ಣಾಮಲೈ, ಬಿಜೆಪಿ ಪಕ್ಷದಲ್ಲಿ ಸ್ವಜನ ಪಕ್ಷಪಾತ ಎಂಬುದಿಲ್ಲ. ಬಿಜೆಪಿ ರಾಷ್ಟ್ರೀಯವಾದಿ ಪಕ್ಷ. ನಾನು ರಾಷ್ಟ್ರೀಯವಾದಿ ವ್ಯಕ್ತಿ. ದೇಶದ ಭದ್ರತಾ ನೆಲೆಯಿಂದ ಐಪಿಎಸ್ ಅಧಿಕಾರಿಯಾಗಿ ಕೆಲಸ ಮಾಡಿದ್ದೆ. ಈಗ ತಮಿಳುನಾಡಿಗೆ ಒಂದು ಪರ್ಯಾಯ ಆಡಳಿತದ ಅವಶ್ಯಕತೆ ಇದೆ. ಈ ಅವಶ್ಯಕತೆಯನ್ನು ಬಿಜೆಪಿ ಸಂಪೂರ್ಣ ಮಾಡಬಲ್ಲದು ಎಂಬ ನಂಬಿಕೆ ಇದೆ. ಆದ್ದರಿಂದ ತಾನು ಬಿಜೆಪಿ ಸೇರುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ತಮ್ಮ ಕೈಲಾಸ, ಮಾನಸ ಸರೋವರ ಯಾತ್ರೆಯಿಂದ ಪ್ರೇರಣೆ ಪಡೆದು ತಾವು ವೃತ್ತಿ ಜೀವನಕ್ಕೆ ರಾಜೀನಾಮೆ ನೀಡಿರುವುದಾಗಿಯೂ ಸಿಂಗಂ ತಿಳಿಸಿದ್ದಾರೆ. ಅಲ್ಲದೆ ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ಅವರ ಸಾವು ಸಹ ಬದುಕನ್ನು ಮತ್ತೊಮ್ಮೆ ಪರಿಶೀಲನೆ ನಡೆಸುವಂತೆ ಮಾಡಿತು. ಈ ಎಲ್ಲವುಗಳಿಂದಾಗಿ ತಾನು ವೃತ್ತಿ ಜೀವನಕ್ಕೆ ರಾಜೀನಾಮೆ ನೀಡಿರುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ.
ಅಣ್ಣಾಮಲೈ ಎಂತಹ ಅಪರಾಧಗಳನ್ನಾದರೂ ಸುಲಭವಾಗಿ ಬಗೆಹರಿಸುವ ಚಾಕಚಕ್ಯತೆ ಹೊಂದಿದ್ದರು. ಜೊತೆಗೆ ತಮ್ಮ ವೃತ್ತಿ ಜೀವನದಲ್ಲಿಯೂ ಯಾವುದೇ ರೀತಿಯ ಕಪ್ಪು ಚುಕ್ಕೆ ಹೊಂದಿರಲಿಲ್ಲ. ಒಬ್ಬ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಹೆಸರು ಮಾಡಿದ್ದ ಅಣ್ಣಾಮಲೈ ಅವರ ರಾಜಕೀಯ ಜೀವನದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುವಂತಾಗಲಿ ಎಂಬ ಆಶಯ ಅಭಿಮಾನಿಗಳದ್ದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.