ತಿರುವನಂತಪುರಂ: ಕೇರಳ ಸೆಕ್ರೆಟರಿಯೇಟ್ನಲ್ಲಿ ಮಂಗಳವಾರ ಸಂಜೆ ಅಗ್ನಿ ಅವಘಡ ಸಂಭವಿಸಿದೆ. ಆದರೆ ಇದು ಆಕಸ್ಮಿಕವಾಗಿ ಸಂಭವಿಸಿದ ದುರ್ಘಟನೆ ಅಲ್ಲ, ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಅವರ ಸರಕಾರವನ್ನು ರಕ್ಷಣೆ ಮಾಡುವ ಸಲುವಾಗಿ ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ಬೆಂಕಿ ಹತ್ತಿಸಲಾಗಿದೆ ಎಂದು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಆರೋಪ ಮಾಡಿವೆ.
ಬೆಂಕಿ ಅವಘಡ ಸಂಭವಿಸಿದ ಕಟ್ಟಡಕ್ಕೆ ಮಾಧ್ಯಮದವರು ಮತ್ತು ರಾಜಕಾರಣಿಗಳನ್ನು ತೆರಳದಂತೆ ಕೇರಳ ಮುಖ್ಯಕಾರ್ಯದರ್ಶಿ ವಿಶ್ವಾಸ್ ಮೆಹ್ತಾ ನಿರ್ಬಂಧ ಹಾಕಿದ್ದರು. ಇದನ್ನು ಖಂಡಿಸಿ ಸ್ಥಳದಲ್ಲಿ ಕೇರಳ ಬಿಜೆಪಿ ಮುಖಂಡರಾದ ಕೆ.ಸುರೇಂದ್ರನ್, ಮುರಳೀಧರನ್ ಮುಂತಾದವರು ಪ್ರತಿಭಟನೆ ನಡೆಸಿದರು. ಇವರನ್ನು ಪೊಲೀಸರು ವಶಕ್ಕೆ ಪಡೆದ ಕಾರಣ ಕೆಲಕ್ಷಣ ಕೋಲಾಹಲದ ಸನ್ನಿವೇಶ ಸೃಷ್ಟಿಯಾಯಿತು.
ಕಾಂಗ್ರೆಸ್ ಪಕ್ಷದ ರಮೇಶ್ ಚೆನ್ನಿತಲ ಅವರಿಗೆ ಪ್ರತಿಭಟನೆಗೆ ಮಣಿದು ಅಗ್ನಿ ಆಕಸ್ಮಿಕ ಸಂಭವಿಸಿದ ಪ್ರದೇಶಕ್ಕೆ ತೆರಳಲು ಅನುಮತಿ ನೀಡಲಾಗಿದೆ. ಅಲ್ಲಿಗೆ ತೆರಳಿ ಬಳಿಕ ಮಾತನಾಡಿದ ಅವರು, “ಅಗ್ನಿ ಆಕಸ್ಮಿಕದಲ್ಲಿ ವಿದೇಶ ಪ್ರಯಾಣ ಮತ್ತು ಗಣ್ಯವ್ಯಕ್ತಿಗಳಿಗೆ ಸಂಬಂಧಿಸಿದ ಕಡತಗಳು ಹಾನಿಗೊಳಗಾಗಿವೆ ಎಂಬುದು ಹಿರಿಯ ಅಧಿಕಾರಿಗಳ ಮಾಹಿತಿಯಿಂದ ತಿಳಿದು ಬಂದಿದೆ. ಹೀಗಾಗಿ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳನ್ನು ನಾಶ ಮಾಡುವ ಉದ್ದೇಶದಿಂದಲೇ ವ್ಯವಸ್ಥಿತವಾಗಿ ಬೆಂಕಿ ಹಚ್ಚಲಾಗಿದೆ” ಎಂದಿದ್ದಾರೆ.
ಪ್ರಧಾನ ಆಡಳಿತ ಕಚೇರಿಯ ರಾಜಕೀಯ ವಿಭಾಗದಲ್ಲಿ ಸಂಜೆಯ ವೇಳೆಗೆ ಬೆಂಕಿ ಆಕಸ್ಮಿಕ ಸಂಭವಿಸಿದೆ.
ಜುಲೈನಲ್ಲಿ ದುಬೈನಿಂದ ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ 30 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣದಲ್ಲಿ ಆರೋಪಿಗಳೊಂದಿಗಿನ ಸಂಪರ್ಕದ ಆರೋಪದ ಮೇಲೆ ಐಎಎಸ್ ಅಧಿಕಾರಿ ಎಂ.ಶಿವಶಂಕರ್ ಅವರನ್ನು ಮುಖ್ಯಮಂತ್ರಿ ಕಚೇರಿಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತೆಗೆದುಹಾಕಲಾಯಿಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.