ನವದೆಹಲಿ: ಬಿದಿರಿನ ಬುಟ್ಟಿಗಳು, ಅಗರಬತ್ತಿ ಮತ್ತು ಬಿದಿರಿನಿಂದ ಚಾರ್ಕೋಲ್ ತಯಾರಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಜಮ್ಮು, ಕಾತ್ರ ಮತ್ತು ಸಾಂಬಾ ಪ್ರದೇಶಗಳಲ್ಲಿ ಬಿದಿರಿನ ಕ್ಲಸ್ಟರ್ಗಳನ್ನು ಅಭಿವೃದ್ಧಿ ಮಾಡಲಾಗುವುದಾಗಿ ಈಶಾನ್ಯ ಪ್ರದೇಶಗಳ ಅಭಿವೃದ್ಧಿ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ತಿಳಿಸಿದ್ದಾರೆ.
ಅವರು ಸಚಿವಾಲಯದ ಪರಿಶೀಲನಾ ಸಭೆಯ ಸಂದರ್ಭದಲ್ಲಿ ಜಮ್ಮುವಿಗೆ ಸಂಬಂಧಿಸಿದಂತೆ ಬಿದಿರಿನ ವಲಯದ ಮೂಲಸೌಕರ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆಯ ಉತ್ತೇಜನಕ್ಕೆ ಸಂಬಂಧಿಸಿದಂತೆ ಕಡತಕ್ಕೆ ಸಹಿ ಹಾಕಿ ಬಳಿಕ ಮಾತನಾಡಿದರು.
ಈ ಕ್ಲಸ್ಟರ್ ಅಭಿವೃದ್ಧಿಯಾದಲ್ಲಿ ಇದರಿಂದ ಸುಮಾರು 25 ಸಾವಿರ ಜನರಿಗೆ ಉದ್ಯೋಗಾವಕಾಶ ದೊರೆಯುವ ಅವಕಾಶ ಸೃಷ್ಟಿಯಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಈ ಕ್ಲಸ್ಟರ್ಗಳ ಜೊತೆಗೆ ಜಮ್ಮುವಿನ ಘಾಟಿ ಪ್ರದೇಶದಲ್ಲಿ ಮೆಗಾ ಬ್ಯಾಂಬೂ ಇಂಡಸ್ಟ್ರಿಯಲ್ ಪಾರ್ಕ್ ಮತ್ತು ಬ್ಯಾಂಬೂ ಟೆಕ್ನಾಲಜಿ ಟ್ರೈನಿಂಗ್ ಸೆಂಟರ್ ಗಳನ್ನು ಆರಂಭ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವಾಲಯದ ಅಧಿಕಾರಿಗಳ ತಂಡ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿದೆ. ಅಲ್ಲಿ ಬಿದಿರು ಕೃಷಿಗೆ ಸಂಬಂಧಿಸಿದಂತೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಜೊತೆಗೆ ಕಡಿಮೆ ವೆಚ್ಚದಲ್ಲಿ ನಿರ್ಮಾಣ ಕಾರ್ಯ ಮಾಡುವವರಿಗೆ ಬಿದಿರು ಉಪಯೋಗಕಾರಿಯಾಗಿದ್ದು, ಮುಂದಿನ ದಿನಗಳಲ್ಲಿ ದೇಶದಾದ್ಯಂತ ಬಿದಿರಿನ ಕುರಿತಾಗಿ ಜಾಗೃತಿ ಶಿಬಿರಗಳನ್ನು ನಡೆಸಲು ಕಾರ್ಯಸೂಚಿಗಳನ್ನು ಹಾಕಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.