ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ಬಾರಿ ವರುಣನ ಆರ್ಭಟ ಹೆಚ್ಚಾಗಿದ್ದು, ಪ್ರವಾಹಕ್ಕೆ ಸಿಲುಕಿ ನಲುಗಿದ್ದವು. ಈ ಸಂಬಂಧ ಪ್ರವಾಹದಿಂದಾಗಿ ಬಂದೊದಗಿರುವ ಪರಿಸ್ಥಿತಿ ನಿರ್ವಹಣೆ, ನಷ್ಟದ ಲೆಕ್ಕಾಚಾರ, ಸ್ಥಿತಿಗತಿಗಳ ಅಧ್ಯಯನ ನಡೆಸಲು ಸೆ.7ರಂದು ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಸೆ. 7 ರಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿ ಕೆ.ವಿ. ಪ್ರತಾಪ್ ಅವರ ನಾಯಕತ್ವದಲ್ಲಿ ಆರು ಮಂದಿ ಅಧಿಕಾರಿಗಳ ತಂಡ ರಾಜ್ಯಕ್ಕೆ ಆಗಮಿಸಲಿದೆ. ಹಾಗೆಯೇ ಅದೇ ದಿನದಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆಗೂ ಸಮಾಲೋಚನೆ ನಡೆಸಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಸೆ. 8 ರಂದು ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಲಿದ್ದಾರೆ. ಹಾಗೆಯೇ ಸೆ. 9 ರಂದು ರಾಜ್ಯದ ಸಚಿವರು ಈ ತಂಡವನ್ನು ಭೇಟಿ ಮಾಡಿ ಪರಿಹಾರವಾಗಿ 4800 ಕೋಟಿ ರೂ. ಗಳನ್ನು ರಾಜ್ಯಕ್ಕೆ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಈ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ಪರಿಸ್ಥಿತಿಯನ್ನು ಅವಲೋಕಿಸಿದ್ದರು. ಆ ಬಳಿಕ ಕೇಂದ್ರದ ತಂಡವನ್ನು ಸಮೀಕ್ಷೆ ನಡೆಸಲು ಕಳುಹಿಸಿಕೊಡುವಂತೆಯೂ ಮನವಿ ಮಾಡಲಾಗಿತ್ತು. ರಾಜ್ಯದ ಈ ಮನವಿಯನ್ನು ಪುರಸ್ಕರಿಸಿ ಕೇಂದ್ರ ಸರ್ಕಾರ ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕೆ ಅಧಿಕಾರಿಗಳ ತಂಡವನ್ನು ಕಳುಹಿಸಿದೆ ಎಂದು ಅವರು ಹೇಳಿದ್ದಾರೆ.
ಜೊತೆಗೆ ರಾಜ್ಯದ ಮನವಿಗೆ ತುರ್ತು ಸ್ಪಂದನೆ ನೀಡಿರುವ ಕೇಂದ್ರ ಸರ್ಕಾರ 395 ಕೋಟಿ ರೂ.ಗಳನ್ನು ಪರಿಹಾರವಾಗಿ ನೀಡಿದೆ. ಹಾಗೆಯೇ ಎನ್ಡಿಆರ್ಎಫ್ ತಂಡಗಳನ್ನು ಈಗಾಗಲೇ ಕಳುಹಿಸಿ ಕೊಟ್ಟಿದೆ ಎಂದು ಅಶೋಕ್ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.