ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಈ ವರೆಗೂ ವಿರೋಧಿಸುತ್ತಲೇ ಬಂದಿದ್ದ ಕಾಂಗ್ರೆಸ್ ಇದೀಗ RSS ಮಾದರಿಯಲ್ಲಿ ತನ್ನ ಕಾರ್ಯಕರ್ತರಿಗೂ ವಸತಿ ಶಿಬಿರದ ಮೂಲಕ ತರಬೇತಿಯನ್ನು ನೀಡುವ ನಿಟ್ಟಿನಲ್ಲಿ ಕಾರ್ಯಯೋಜನೆ ಹಮ್ಮಿಕೊಳ್ಳುತ್ತಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಜವಾಬ್ದಾರಿ ಹೊತ್ತುಕೊಂಡ ಮೇಲೆ, ಕಾಂಗ್ರೆಸ್ ಪಕ್ಷವನ್ನು ತಳ ಮಟ್ಟದಿಂದ ಸದೃಢಗೊಳಿಸುವ ನಿಟ್ಟಿನಲ್ಲಿ ಈ ಪ್ರಯತ್ನ ನಡೆಸಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಇದಕ್ಕಾಗಿ ಕಾಂಗ್ರೆಸ್ ಸೇವಾ ದಳ ತಂಡವನ್ನು ರಚನೆ ಮಾಡಲಾಗಿದೆ. ಇದರ ಮೂಲಕ ವಾರದ ಮೂರು ದಿನಗಳ ಕಾಲ ತಾಲೂಕು ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರಿಗೆ ತರಬೇತಿ ಶಿಬಿರ ನಡೆಸಲು ಚಿಂತನೆ ನಡೆದಿದೆ.
ಈ ತರಬೇತಿಯಲ್ಲಿ ಸಂವಿಧಾನ ಮತ್ತು ಸಿದ್ಧಾಂತಗಳ ಬಗ್ಗೆ ತರಬೇತಿ ನೀಡುವುದಾಗಿಯೂ ಮೂಲಗಳು ತಿಳಿಸಿವೆ. ಕಾರ್ಯಕರ್ತರಿಗೆ ಸರಿ ತಪ್ಪುಗಳ ಬಗ್ಗೆ ಅರಿವು ಮೂಡಿಸಿ, ತಪ್ಪುಗಳನ್ನು ವಿರೋಧಿಸುವ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ತರಬೇತಿಗೆ ಮುಂದಾಗಿರುವುದಾಗಿಯೂ ಪಕ್ಷ ಹೇಳಿದೆ. ಹಾಸ್ಟೆಲ್, ಸಮುದಾಯ ಭವನಗಳಲ್ಲಿ ತರಬೇತಿ ಕಾರ್ಯಕ್ರಮ ನಡೆಸುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ. 150 ಜನರು ಸೇರುವುದಕ್ಕೆ ಅನುಕೂಲವಿರುವಲ್ಲಿ ತರಬೇತಿ ಆಯೋಜನೆ ಮಾಡುವುದಾಗಿಯೂ ತಿಳಿಸಿದ್ದಾರೆ.
ಒಟ್ಟಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಾದರಿಯನ್ನು ಅನುಸರಿಸುವ ಮೂಲಕ ತನ್ನ ಪಕ್ಷವನ್ನು ಮರು ಸಂಘಟಿಸಲು ಮುಂದಾಗಿರುವ ಕಾಂಗ್ರೆಸ್ ತನ್ನ ಕಾರ್ಯದಲ್ಲಿ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆ ಎಂಬುದನ್ನು ಕಾದು ನೋಡಬೇಕು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.