ಶಿವಮೊಗ್ಗ: ಜಿಲ್ಲೆಯ ಕುವೆಂಪು ವಿವಿ ಆವರಣದಲ್ಲಿ ಡಿಆರ್ಡಿಒ ಸಂಶೋಧನಾ ಸಂಸ್ಥೆ ಆರಂಭ ಸೇರಿದಂತೆ ಜಿಲ್ಲೆಯ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಅನೇಕ ಮಹತ್ವಾಕಾಂಕ್ಷೆಯ ಯೋಜನೆಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ.
ಈ ಪ್ರಸ್ತಾವನೆಗಳಿಗೆ ಸಂಬಂಧಿಸಿದಂತೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂಬುದಾಗಿಯೂ ಅವರು ತಿಳಿಸಿದ್ದಾರೆ. ಕುವೆಂಪು ವಿವಿಯಲ್ಲಿ ಸಂಶೋಧನಾ ಕೇಂದ್ರ ಆರಂಭಕ್ಕೆ ಸಂಬಂಧಿಸಿದಂತೆ ಕೇಂದ್ರದ ತಂಡ ಭೇಟಿ ನೀಡಿ ಪರಿಶೀಲಿಸಲಿದೆ. ಸಂಶೋಧನಾ ಕೇಂದ್ರ ಆರಂಭವಾದಲ್ಲಿ ಸೇನೆಗೆ ಸಂಬಂಧಿಸಿದ ಮತ್ತು ಬಯೋ ಮೆಡಿಕಲ್ಗೆ ಸಂಬಂಧಿಸಿದಂತೆ ಸಂಶೋಧನೆಗೆ ಅನುಕೂಲವಾಗಲಿದೆ ಎಂದು ರಾಘವೇಂದ್ರ ತಿಳಿಸಿದ್ದಾರೆ.
ಜೊತೆಗೆ ಜಿಲ್ಲೆಯಲ್ಲಿ ಸುಮಾರು 17 ಕೋಟಿ ರೂ. ವೆಚ್ಚದಲ್ಲಿ ಕೇಂದ್ರ ಸರ್ಕಾರದ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಇನ್ನೇನು ಕೆಲವೇ ಸಮಯದಲ್ಲಿ ಮಂಜೂರಾಗಲಿದೆ. ಇದನ್ನು ರಾಗಿಗುಡ್ಡದಲ್ಲಿ ನಿರ್ಮಿಸಲು 7 ಎಕರೆ ಪ್ರದೇಶವನ್ನು ಮೀಸಲಿಡಲಾಗಿದೆ. ತಮ್ಮಡಿಹಳ್ಳಿ ಮತ್ತು ತೀರ್ಥಹಳ್ಳಿಯಲ್ಲಿ ವಾಜಪೇಯಿ ಶಾಲೆ ಮತ್ತು ಶಿಕಾರಿಪುರದಲ್ಲಿ ಏಕಲವ್ಯ ಶಾಲೆ ಆರಂಭಕ್ಕೆ ನಿರ್ಧರಿಸಲಾಗಿದೆ ಎಂದೂ ಸಂಸದರು ಮಾಹಿತಿ ನೀಡಿದ್ದಾರೆ.
ಜೊತೆಗೆ ಶಿವಮೊಗ್ಗ-ಬೆಂಗಳೂರು-ಮುಂಬೈ ಕೈಗಾರಿಕಾ ಕಾರಿಡಾರ್ಗೆ ಸಂಬಂಧಿಸಿದಂತೆ ಸಚಿವ ಜಗದೀಶ್ ಶೆಟ್ಟರ್ ಅವರೊಂದಿಗೂ ಮಾತುಕತೆ ನಡೆಸಲಾಗಿದೆ. ಇದಕ್ಕಾಗಿ ಜಿಲ್ಲೆಯಲ್ಲಿ ಎರಡರಿಂದ ನಾಲ್ಕು ಎಕರೆಗಳಷ್ಟು ಪ್ರದೇಶದ ಅನ್ವೇಷಣೆ ಮಾಡಲಾಗುತ್ತಿದೆ. ಇದು ಸಾಧ್ಯವಾದಲ್ಲಿ ಜಿಲ್ಲೆ ಕೈಗಾರಿಕಾ ಹಬ್ ಆಗಿ ಹೆಸರು ಪಡೆಯಲಿದೆ ಎಂದು ಸಂಸದರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.