ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡವರ ಪ್ರಮಾಣ 83.53% ಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತನ್ನ ವರದಿಯಲ್ಲಿ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಸುಮಾರು 85 ಸಾವಿರಕ್ಕೂ ಅಧಿಕ ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿದ್ದಾರೆ. ಆ ಮೂಲಕ ಈ ವರೆಗೆ ಸುಮಾರು 52. 73 ಲಕ್ಷಕ್ಕೂ ಅಧಿಕ ಮಂದಿ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ. ಸದ್ಯ ದೇಶದಲ್ಲಿ 14.90% ದಷ್ಟು ಸಕ್ರಿಯ ಪ್ರಕರಣಗಳಿವೆ ಎಂದೂ ಈ ವರದಿ ಮಾಹಿತಿ ನೀಡಿದೆ. ಆ ಮೂಲಕ ದೇಶದಲ್ಲಿ ಸಕ್ರಿಯ ಕೊರೋನಾ ಸೋಂಕಿತರ ಪ್ರಮಾಣದಲ್ಲಿ ಇಳಿಕೆಯಾದಂತಾಗಿದೆ ಎಂದೂ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಈ ವರೆಗೆ ಒಟ್ಟು 63 ಲಕ್ಷಕ್ಕೂ ಅಧಿಕ ಮಂದಿ ಸೋಂಕಿಗೊಳಗಾಗಿದ್ದಾರೆ. ಇದರಲ್ಲಿ 52.73 ಲಕ್ಷಕ್ಕೂ ಅಧಿಕ ಮಂದಿ ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ಕಳೆದ ಒಂದೇ ದಿನದಲ್ಲಿ 86,821 ಜನರಿಗೆ ಸೋಂಕು ತಗುಲಿರುವ ಬಗ್ಗೆ ವರದಿಯಾಗಿದೆ. ಪ್ರಸ್ತುತ ದೇಶದಲ್ಲಿ 9 ಲಕ್ಷ 40 ಸಾವಿರ ಸಕ್ರಿಯ ಪ್ರಕರಣಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇಶದಲ್ಲಿ ಪರಿಣಾಮಕಾರಿಯಾಗಿ ಕೊರೋನಾ ಟೆಸ್ಟ್, ಚಿಕಿತ್ಸೆಗಳನ್ನು ನೀಡಲಾಗುತ್ತಿದ್ದು ಚೇತರಿಕೆಯ ಪ್ರಮಾಣ ಹೆಚ್ಚುತ್ತಿದೆ. ಸಾವಿನ ಪ್ರಮಾಣ ಕಡಿಮೆ ಆಗಿದೆ ಎಂದೂ ಸಚಿವಾಲಯ ಈ ವರದಿಯಲ್ಲಿ ತಿಳಿಸಿದೆ. ಪ್ರಸ್ತುತ ದೇಶದಲ್ಲಿ 1.56% ದಷ್ಟು ಸಾವಿನ ಪ್ರಮಾಣ ವರದಿಯಾಗಿದೆ. ಇದು ಜಾಗತಿಕ ಮಟ್ಟದಲ್ಲಿ ಹೇಳುವುದಾದರೆ ಕಡಿಮೆ ಪ್ರಮಾಣವಾಗಿದೆ ಎಂದೂ ಸಚಿವಾಲಯ ಹೇಳಿದೆ. ಕಳೆದ 24 ಗಂಟೆಗಳಲ್ಲಿ 14.23 ಲಕ್ಷಕ್ಕೂ ಅಧಿಕ ಕೊರೋನಾ ಪರೀಕ್ಷೆಗಳನ್ನು ದೇಶದಲ್ಲಿ ನಡೆಸಲಾಗಿದೆ. ಈ ವರೆಗೆ ದೇಶದಲ್ಲಿ 7 ಕೋಟಿಗೂ ಅಧಿಕ ಜನರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ ಎಂದು ಸಚಿವಾಲಯ ತನ್ನ ವರದಿಯಲ್ಲಿ ತಿಳಿಸಿದೆ. ಕೊರೋನಾ ನಿಯಂತ್ರಣಕ್ಕೆ ಸರ್ಕಾರ, ಆರೋಗ್ಯ ಇಲಾಖೆಗಳು ತೆಗೆದುಕೊಂಡಿರುವ ಪರಿಣಾಮಕಾರಿ ಕ್ರಮಗಳಿಂದ ಚೇತರಿಕೆಯ ಪ್ರಮಾಣ ಹೆಚ್ಚಾಗಿದೆ ಎಂದೂ ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.