ಮಂಗಳೂರು: ಕೊರೋನಾ ಕಪಿಮುಷ್ಠಿಯಿಂದ ಬಳಲಿದ್ದ ಕರಾವಳಿಯ ಗಂಡು ಕಲೆ ಯಕ್ಷಗಾನ ನವೆಂಬರ್ನಿಂದ ಮತ್ತೆ ಸದ್ದು ಮಾಡಲಿದೆ. ಸೂಕ್ತ ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿಕೊಂಡು ಯಕ್ಷಗಾನ ಪ್ರದರ್ಶನ ನವೆಂಬರ್ ಅಂತ್ಯದ ವೇಳೆಗೆ ಮತ್ತೆ ಆರಂಭವಾಗಲಿದೆ ಎಂದು ಸಚಿವ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.
ಅವರು ನಗರದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಯಕ್ಷಗಾನ ಮೇಳಗಳ ಸಂಚಾಲಕರ ಜೊತೆಗೆ ಸಭೆ ನಡೆಸಿ, ಬಳಿಕ ಈ ಮಾಹಿತಿಯನ್ನು ನೀಡಿದ್ದಾರೆ.
ಕೊರೋನಾ ಬಂದಾಗಿನಿಂದ ಯಕ್ಷಗಾನ ಪ್ರದರ್ಶನಗಳು ಸ್ಥಗಿತವಾಗಿದೆ. ಇದರಿಂದ ಕಲಾವಿದರ ಬದುಕು ಸಂಕಷ್ಟಕ್ಕೆ ಈಡಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಯಕ್ಷಗಾನ ಕಲಾವಿದನಿಗೆ ಅನ್ಯಾಯವಾಗದಂತೆ ಸರ್ಕಾರದ ವತಿಯಿಂದ ನೆರವು ನೀಡಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಭರವಸೆಯನ್ನೂ ಸಚಿವರು ಈ ಸಂದರ್ಭದಲ್ಲಿ ನೀಡಿದ್ದಾರೆ.
ನವೆಂಬರ್ ಅಂತ್ಯದ ವೇಳೆಗೆ ಯಕ್ಷಗಾನ ಪ್ರದರ್ಶನಕ್ಕೂ ಅವಕಾಶ ನೀಡಲಾಗುವುದು. ಕಲಾವಿದರು ಕಡ್ಡಾಯವಾಗಿ ಕೊರೋನಾ ಟೆಸ್ಟ್ ಮಾಡಿಕೊಂಡು ಭಾಗವಹಿಸಬೇಕು. ಯಕ್ಷಗಾನ ಮೇಳಗಳಲ್ಲಿ ವಾರಕ್ಕೊಮ್ಮೆ ಕೊರೋನಾ ಟೆಸ್ಟ್ ನಡೆಸಬೇಕು ಎಂದೂ ಸಚಿವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ., ಕೊರೋನಾ ಮುನ್ನೆಚ್ಚರಿಕೆಯಾಗಿ 200 ಜನರಿಗೆ ವೀಕ್ಷಣೆಗೆ ಅವಕಾಶ ನೀಡಲಾಗುವುದು. ಯಕ್ಷಗಾನ ನಡೆಯುವ ಪ್ರದೇಶದ ಸುತ್ತಲೂ ಸ್ಯಾನಿಟೈಸಿಂಗ್, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮುಖ್ಯವಾಗಿದ್ದು ಇದಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆಯೂ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.