ಬೆಂಗಳೂರು: ಕೊರೋನಾ ಸಂದರ್ಭದಲ್ಲಿ ಮಕ್ಕಳ ಕಲಿಕೆಯ ದೃಷ್ಟಿಯಿಂದ ಸರ್ಕಾರದ ಮಹತ್ವದ ವಿದ್ಯಾಗಮ ಯೋಜನೆ ಸುರಕ್ಷಿತವಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮಕ್ಕಳು ಮತ್ತು ಶಿಕ್ಷಕರ ನಡುವಿನ ನಿರಂತರ ಸಂಪರ್ಕ, ಮಕ್ಕಳಿಗೆ ಸ್ವಯಂ ಕಲಿಕೆಗೆ ಮಾರ್ಗದರ್ಶನ, ಪ್ರೋತ್ಸಾಹ, ಶಿಕ್ಷಕರ ಮೂಲಕ ಮಕ್ಕಳ ಮನೋಸ್ಥೈರ್ಯ ಹೆಚ್ಚಿಸುವುದು, ವಿದ್ಯಾರ್ಥಿಗಳು ಶಾಲೆಯಿಂದ ವಿಮುಖರಾಗದಂತೆ ಕ್ರಮ, ಶಿಕ್ಷಕರು, ಶಿಕ್ಷಣ ಸಂಸ್ಥೆಗಳು, ಮಕ್ಕಳು, ಪಾಲಕರ ಸಕ್ರಿಯ ತೊಡಗಿಸಿಕೊಳ್ಳುವಿಕೆಗೆ ಸಂಬಂಧಿಸಿದಂತೆ ಸರ್ಕಾರ ವಿದ್ಯಾಗಮ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯು ಸಂಪೂರ್ಣ ಸುರಕ್ಷಿತವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಕಲ್ಬುರ್ಗಿಯ ಅಫಜಲಪುರದ ಮಾಶಾಳದಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ವಿದ್ಯಾಗಮ ಯೋಜನೆಯ ವೈಫಲ್ಯ ಎಂದು ಬಿಂಬಿಸುವುದು ತಪ್ಪು. ಈ ಯೋಜನೆಯಲ್ಲಿ ಎಲ್ಲಾ ರೀತಿಯ ಸುರಕ್ಷತಾ ವಿಧಾನಗಳನ್ನು ಅನುಸರಿಸಿಕೊಂಡೇ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಅದರಂತೆ ವಿದ್ಯಾರ್ಥಿಗಳಿಗೆ ಯಾವ ಕ್ರಮದಲ್ಲಿ ಶಿಕ್ಷಣ ನೀಡಬೇಕು ಎನ್ನುವ ತರಬೇತಿಯನ್ನು ಶಿಕ್ಷಕರಿಗೆ ನೀಡಲಾಗಿದೆ. ರಾಜ್ಯದ 49.34 ಲಕ್ಷಕ್ಕೂ ಹೆಚ್ಚು ಸರ್ಕಾರಿ ಶಾಲಾ ಮಕ್ಕಳು ಈ ಯೋಜನೆಯಡಿ ಶಿಕ್ಷಣ ಪಡೆಯುತ್ತಿದ್ದಾರೆ. 2 ಲಕ್ಷಕ್ಕೂ ಹೆಚ್ಚು ಶಿಕ್ಷಕರು ಇದರಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದಾರೆ. ಹೀಗಿರುವಾಗ ವಿದ್ಯಾಗಮ ಯೋಜನೆಯಿಂದ ಕೊರೋನಾ ಹರಡಿದೆ ಎಂಬುದು ಈ ವರೆಗೂ ಸರ್ಕಾರದ ಗಮನಕ್ಕೆ ಬಂದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.