ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆಯೇ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳ ಉಪಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಕೊರೋನಾ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯಗಳು, ಚುನಾವಣೆಗೆ ಸಂಬಂಧಿಸಿದಂತೆ ಮತ್ತಿತರ ವಿಚಾರಗಳಲ್ಲಿಯೂ ಕೊಂಚ ಮಟ್ಟಿನ ಬದಲಾವಣೆಗಳಾಗಿವೆ. ಒಳಾಂಗಣ ಪ್ರಚಾರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಆಡಿಟೋರಿಯಂಗಳಲ್ಲಿ ಆಸನ ಸಾಮರ್ಥ್ಯವನ್ನು 50% ಗಳಿಗೆ ಸೀಮಿತ ಮಾಡಲಾಗಿದೆ. ಏಕಕಾಲಕ್ಕೆ 200 ಜನರು ಮಾತ್ರವೇ ಚುನಾವಣಾ ಪ್ರದೇಶದಲ್ಲಿ ಇರಬಹುದಾಗಿದೆ ಎಂದೂ ನೀತಿ ಸಂಹಿತೆಯಲ್ಲಿ ತಿಳಿಸಲಾಗಿದೆ.
ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು, ಅಭ್ಯರ್ಥಿಗಳು, ಬೆಂಬಲಿಗರು, ಹಾಗೆಯೇ ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸುವ ಜನರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಗಮನ ವಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿಂದೆ ಸಾರ್ವಜನಿಕ ಸಮಾವೇಶಗಳಿಗೆ 50 ಜನರಿಗೆ ಮಾತ್ರವೇ ಭಾಗವಹಿಸಲು ಅವಕಾಶ ನೀಡಲಾಗಿತ್ತು. ಇದೀಗ ಈ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ. ಒಳಾಂಗಣ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಹೊಸ ಚಿತ್ರಮಂದಿರಗಳಲ್ಲಿ ಇರುವಂತೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗುವುದು ಎಂದು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.
ಈ ಬಾರಿ ಮೊದಲಿನಂತೆ ಬೆಂಬಲಿಗರ ಜೊತೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಕೆಗೆ ಅವಕಾಶ ಇಲ್ಲ. ಜೊತೆಗೆ ಜಿಲ್ಲಾಧಿಕಾರಿಗಳು ಸಾರ್ವಜನಿಕ ಭಾಷಣಗಳಿಗೆ ಸಂಬಂಧಿಸಿದಂತೆ ಸ್ಥಳ ಗುರುತಿಸಲು ಆರಂಭ ಮಾಡಿದ್ದಾರೆ. ಗುರುತಿಸಲ್ಪಡುವ ಪ್ರದೇಶಗಳಲ್ಲಿ ಸಾರ್ವಜನಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಗೆರೆ ಎಳೆದು ಗುರುತು ಮಾಡಲಾಗುತ್ತದೆ. ಇದೇ ಮೊದಲ ಬಾರಿಗೆ ಅಶಕ್ತ ಮತದಾರರಿಗೆ ಅಂಚೆ ಮತದಾನ ವ್ಯವಸ್ಥೆ ಕಲ್ಪಿಸಲಾಗಿದೆ. ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳು ಎಂಬತ್ತು ವರ್ಷ ಮೇಲ್ಪಟ್ಟ ಮತದಾರರ ಮನೆಗೆ ವೈಯಕ್ತಿಕವಾಗಿ ಭೇಟಿ ನೀಡಲಿದ್ದಾರೆ. ಆ ಮೂಲಕ ಅವರಿಗೆ ಚುನಾವಣಾ ಫಾರ್ಮ್ಗಳನ್ನು ನೀಡುವುದು ಮಾಡಲಿದ್ದಾರೆ. ಅಂಚೆ ಮತದಾನದ ಆಯ್ಕೆ ಮತದಾರರಿಗೇ ಬಿಟ್ಟದ್ದು. ಜೊತೆಗೆ ಅವರಿಗೆ ಮತಗಟ್ಟೆಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಗಳಾಗಲೂ ಅವಕಾಶವಿದೆ ಎಂದು ಸಂಜೀವ್ ಕುಮಾರ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.