ಬೆಂಗಳೂರು: ಅಕ್ಟೋಬರ್ ತಿಂಗಳಿನಲ್ಲಿಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಗೆ ಅನೇಕ ಮಂದಿ ಮನೆ ಮಠ ಕಳೆದುಕೊಂಡಿದ್ದಾರೆ. ಸಂತ್ರಸ್ಥ ಕುಟುಂಬಗಳಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ಸಂಪೂರ್ಣ ಹಾನಿಗೊಳಗಾದ ಮತ್ತು ಭಾಗಶಃ ಹಾನಿಯಾದ ಮನೆಗಳಿಗೆ ತಲಾ 5 ಲಕ್ಷ ರೂ. ಗಳ ಪರಿಹಾರವನ್ನು ಒದಗಿಸಿ ಕೊಡುವ ಭರವಸೆಯನ್ನು ನೀಡಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಅಕ್ಟೋಬರ್ ತಿಂಗಳಲ್ಲಿ ಸುರಿದ ಭೀಕರ ಮಳೆಗೆ ಪ್ರವಾಹಕ್ಕೆ ತುತ್ತಾದ ಕುಟುಂಬಗಳಿಗೆ ಈ ಪರಿಹಾರ ಧನ ಸಿಗಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಅದರಂತೆ ಉತ್ತರ ಕರ್ನಾಟಕ ಭಾಗದ ಮಣ್ಣಿನ ಮನೆಗಳ ಮರು ನಿರ್ಮಾಣ ಕಾರ್ಯ ನಡೆಸುವಂತೆಯೂ ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.
ಮಳೆ, ನೆರೆಯಿಂದ ಸಮಸ್ಯೆಗೆ ಸಿಲುಕಿರುವ ಪ್ರದೇಶಗಳ ಜನರಿಗೆ ಉಡುಗೆ-ತೊಡುಗೆ, ದಿನಬಳಕೆ ವಸ್ತುಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಸ್ಡಿಆರ್ಎಫ್/ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ಪ್ರತಿ ಕುಟುಂಬಕ್ಕೆ ತಲಾ 3,800ರೂ. ಗಳನ್ನು ನಿಗದಿ ಮಾಡಿದೆ. ಈ ಮೊತ್ತಕ್ಕೆ ರಾಜ್ಯ ಸರ್ಕಾರದ ವತಿಯಿಂದ 6,200 ರೂ. ಗಳನ್ನು ಸೇರಿಸಿ 10 ಸಾವಿರ ರೂ. ಗಳನ್ನು ಪ್ರತಿ ಕುಟುಂಬಕ್ಕೆ ನೀಡಲಾಗುತ್ತದೆ ಎಂದು ಸರ್ಕಾರ ಮಾಹಿತಿ ನೀಡಿದೆ.
75% ಕ್ಕಿಂತ ಅಧಿಕ ಪ್ರಮಾಣದಲ್ಲಿ ಹಾನಿಗೆ ತುತ್ತಾದ ಮನೆಗಳಿಗೆ (ಎ ವರ್ಗ) 5 ಲಕ್ಷ, 25%-75% ದಷ್ಟು ಹಾನಿಗೊಳಗಾದ (ಬಿ ವರ್ಗ)ದ ಮನೆಯ ಪುನರ್ ನಿರ್ಮಾಣಕ್ಕೆ 5 ಲಕ್ಷ ರೂ. , 25-75% ದಷ್ಟು ಹಾನಿಗೊಳಗಾದ ಮನೆಗಳ ದುರಸ್ಥಿಗೆ 3 ಲಕ್ಷ, ಅಲ್ಪಸ್ವಲ್ಪ ಹಾನಿಗೆ ತುತ್ತಾದ ಮನೆಗಳ ದುರಸ್ಥಿಗೆ 50 ಸಾವಿರ ರೂ. ಗಳ ಪರಿಹಾರ ನೀಡಲಾಗುತ್ತದೆ ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.