ಬೆಂಗಳೂರು: ಕೆಲ ಸಮಯದ ಹಿಂದೆ ಏರುಗತಿಯಲ್ಲಿ ಸಾಗುತ್ತಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಕಳೆದ ಎರಡು ವಾರದಿಂದೀಚೆಗೆ ಇಳಿಮುಖವಾಗುತ್ತಿದೆ. ಈ ತಿಂಗಳ ಆರಂಭದ ಸಂದರ್ಭದಲ್ಲಿ ದಿನಕ್ಕೆ 10 ಸಾವಿರ ದಾಟುತ್ತಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಪ್ರಸ್ತುತ ದಿನಕ್ಕೆ 3 ಸಾವಿರಗಳಿಗೆ ಇಳಿದಿದ್ದು ಕೊರೋನಾ ನಿಯಂತ್ರಣ ವಿಚಾರದಲ್ಲಿ ಹೊಸ ಭರವಸೆಯೊಂದನ್ನು ಹುಟ್ಟಿಸಿದೆ.
ಈ ಸಂಬಂಧ ಅಭಿಪ್ರಾಯ ವ್ಯಕ್ತಪಡಿಸಿರುವ ಆರೋಗ್ಯ ತಜ್ಞರು, ರಾಜ್ಯದಲ್ಲಿ ಮುಂದಿನ ಎರಡು ತಿಂಗಳುಗಳ ಕಾಲ ಸಾರ್ವಜನಿಕರು ಕಟ್ಟುನಿಟ್ಟಾಗಿ ನಿಯಮಗಳನ್ನು ಪಾಲನೆ ಮಾಡಿದಲ್ಲಿ, ಆರೋಗ್ಯದ ಬಗ್ಗೆ ಅಗತ್ಯ ಎಚ್ಚರಿಕೆ ವಹಿಸಿದಲ್ಲಿ ಸೋಂಕು ನಿಯಂತ್ರಣದಲ್ಲಿ ನಾವು ಸಂಪೂರ್ಣ ಯಶಸ್ಸು ಗಳಿಸಲಿದ್ದೇವೆ ಎಂದು ಹೇಳಿದ್ದಾರೆ.
ಕಳೆದ 15 ದಿನಗಳಿಂದೀಚೆಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಮುಖವಾಗಿದೆ. ಜೊತೆಗೆ ಕೊರೋನಾ ಸೋಂಕಿತರು ಚೇತರಿಸಿಕೊಳ್ಳುತ್ತಿರುವ ಸಂಖ್ಯೆ ಸಹ ಹೆಚ್ಚಳವಾಗುತ್ತಿದೆ ಎಂದು ತಿಳಿಸಿದ್ದು ಇದೊಂದು ಸಮಾಧಾನಕಾರಿ ವಿಚಾರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜೊತೆಗೆ ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಕೊರೋನಾ ಮಾದರಿ ಪರೀಕ್ಷೆಗಳ ಸಂಖ್ಯೆಯನ್ನೂ ಹೆಚ್ಚಳ ಮಾಡಲಾಗಿದೆ. ದಿನಕ್ಕೆ 80 ಸಾವಿರಕ್ಕೂ ಅಧಿಕ ಕೊರೋನಾ ಪರೀಕ್ಷೆ ನಡೆಸುವಲ್ಲಿ ರಾಜ್ಯ ಶಕ್ತವಾಗಿದೆ. ಸೂಕ್ತ ಚಿಕಿತ್ಸೆ ಸಹ ಸೋಂಕಿತರಿಗೆ ದೊರೆಯುತ್ತಿದ್ದು, ಗುಣಮುಖರಾಗುವವರ ಪ್ರಮಾಣ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಕೆಲವು ದಿನಗಳು ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಿರ್ಣಾಯಕ ದಿನಗಳಾಗಿದ್ದು, ಜನರು ತೀರಾ ಎಚ್ಚರ ವಹಿಸುವುದು ಅಗತ್ಯ. ಹೀಗಾದಲ್ಲಿ ಮುಂದಿನ ಮೂರು ತಿಂಗಳಲ್ಲಿ ಸೋಂಕು ಹರಡುವುದು ನಿಯಂತ್ರಣಕ್ಕೆ ಬರಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಸದ್ಯ ಪ್ರಕರಣಗಳ ಸಂಖ್ಯೆ ಇಳಿಯುತ್ತಿದೆ. ಈ ಸಂದರ್ಭದಲ್ಲಿ ಕೊರೋನಾ ನಿಯಂತ್ರಣ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿದಲ್ಲಿ ಕೊರೋನಾ ಹತೋಟಿಗೆ ಬರಲಿದೆ ಎಂದು ಆರೋಗ್ಯ ತಜ್ಞರ ಅಭಿಪ್ರಾಯ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.