ಬೆಂಗಳೂರು: ಕೊರೋನಾ ಸೋಂಕು ತಗುಲಿ, ಸೂಕ್ತ ಚಿಕಿತ್ಸೆ ಪಡೆದು ಗುಣಮುಖರಾದವರು ಮತ್ತೆ ಕೆಲವರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವುದು ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗಳಲ್ಲಿ ಪೋಸ್ಟ್ ಕೋವಿಡ್ ಕೇಂದ್ರ, ಪುನರ್ವಸತಿ ಕೇಂದ್ರಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.
ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ, ಚಳಿಗಾಲ ಮತ್ತು ಹಬ್ಬಗಳ ಸಂದರ್ಭದಲ್ಲಿ ಕೊರೋನಾ ನಿಯಂತ್ರಣ ಹೇಗೆ ಎಂಬುದರ ಬಗ್ಗೆ ತಜ್ಞರು, ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ.
ಕೊರೋನಾದಿಂದ ಚೇತರಿಸಿಕೊಂಡವರು ಆ ಬಳಿಕವೂ ತಮ್ಮ ಆರೋಗ್ಯ ಕಾಳಜಿ ವಹಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪೋಸ್ಟ್ ಕೋವಿಡ್ ಕೇಂದ್ರ, ಪುನರ್ವಸತಿ ಕೇಂದ್ರ ಆರಂಭಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ, ವಿಕ್ಟೋರಿಯಾ, ಬೌರಿಂಗ್, ಕೆಸಿ ಜನರಲ್ ಆಸ್ಪತ್ರೆಯಲ್ಲಿ ಇಂತಹ ಕೇಂದ್ರ ಆರಂಭ ಮಾಡಲಾಗುತ್ತದೆ. ಜೊತೆಗೆ ಪ್ರತಿ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಗಳಲ್ಲಿಯೂ ಇಂತಹ ಕೇಂದ್ರ ಆರಂಭಿಸುವುದಾಗಿ ಸಚಿವರು ತಿಳಿಸಿದ್ದಾರೆ. ಈ ಕೇಂದ್ರಕ್ಕೆ ಬೇಕಾದ ಸಿಬ್ಬಂದಿ, ಅಗತ್ಯತೆಗಳ ಬಗ್ಗೆ ತಜ್ಞರು ವರದಿ ಸಲ್ಲಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈಗಾಗಲೇ ಕೆಲವು ಖಾಸಗಿ ಆಸ್ಪತ್ರೆಗಳು ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿದೆ. ಅಲ್ಲದೆ 100 ಕ್ಕೂ ಅಧಿಕ ಹಾಸಿಗೆಗಳಿರುವ ಖಾಸಗಿ ಆಸ್ಪತ್ರೆಗಳು ಇಂತಹ ಕೇಂದ್ರಗಳನ್ನು ಆರಂಭ ಮಾಡುವಂತೆಯೂ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಎರಡನೇ ಬಾರಿ ಕೊರೋನಾ ಸೋಂಕು ಬಾಧಿಸಿದರೆ ಅಪಾಯ ಹೆಚ್ಚು. ಈ ಹಿನ್ನೆಲೆಯಲ್ಲಿ ಗುಣಮುಖರಾದವರು ಕೊರೋನಾ ನಿಯಂತ್ರಣ ಕ್ರಮಗಳನ್ನು ಸರಿಯಾಗಿ ಪಾಲಿಸುವಂತೆ ಅವರು ಮನವಿ ಮಾಡಿದ್ದಾರೆ. ಜೊತೆಗೆ ಆರೋಗ್ಯ ಸಮಸ್ಯೆ ಕಾಡಿದಾಗ ನಿರ್ಲಕ್ಷ್ಯ ತೋರದೆ ಸೂಕ್ತ ಚಿಕಿತ್ಸೆ ಪಡೆಯುವಂತೆಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.