ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ವಿಜಯೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ್ದು, ಈ ವೇಳೆ ಕುಟುಂಬ ರಾಜಕಾರಣದ ವಿರುದ್ಧ ಕಿಡಿಕಾರಿದ್ದಾರೆ. ಇಂತಹ ರಾಜಕಾರಣ ಪ್ರಜಾಪ್ರಭುತ್ವಕ್ಕೆ ದೊಡ್ಡ ಮಾರಕವಾಗಿದೆ ಮತ್ತು ಒಂದು ರಾಷ್ಟ್ರೀಯ ಪಕ್ಷ ಕೂಡ ಈ ರೀತಿ ರಾಜಕಾರಣದಲ್ಲಿ ತೊಡಗಿರುವುದು ದುರಾದೃಷ್ಟಕರ ಎಂದಿದ್ದಾರೆ.
ಬಿಜೆಪಿಯ ಗೆಲುವಿಗೆ ಕಾರಣವಾಗಿದ್ದು ಒಂದೇ ಮಂತ್ರ, ಅದುವೇ “ಎಲ್ಲರೊಂದಿಗೆ ಎಲ್ಲರ ವಿಕಾಸ ಮತ್ತು ಎಲ್ಲರ ವಿಶ್ವಾಸ” ಎಂದಿರುವ ಮೋದಿ, ಬಿಹಾರ ವಿಧಾನಸಭಾ ಚುನಾವಣೆ ಮತ್ತು ದೇಶದಾದ್ಯಂತ ನಡೆದ ಉಪಚುನಾವಣೆಯ ಫಲಿತಾಂಶಗಳು ಅಭಿವೃದ್ಧಿಯತ್ತ ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಮಾತ್ರ ಜನರ ಬೆಂಬಲ ಇರುವುದನ್ನು ಸ್ಪಷ್ಟಪಡಿಸಿವೆ ಎಂದಿದ್ದಾರೆ.
ಬಿಜೆಪಿಯ ಮೇಲೆ ನಂಬಿಕೆ ಇಟ್ಟ ಜನರಿಗೆ ಧನ್ಯವಾದಗಳನ್ನು ಅರ್ಪಿಸಿದ ಅವರು, ಶಾಂತಿಯುತವಾಗಿ ಚುನಾವಣೆ ನಡೆಸಲು ಪ್ರಮುಖ ಕಾರಣರಾದ ಚುನಾವಣಾ ಆಯೋಗ, ಭದ್ರತಾ ಪಡೆಗಳು ಮತ್ತು ಆಡಳಿತಗಳಿಗೆ ಧನ್ಯವಾದಗಳನ್ನು ಅರ್ಪಿಸಿದರು.
ಈ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆಗೆ ಸಿದ್ಧವಾಗುತ್ತಿರುವ ಪಶ್ಚಿಮ ಬಂಗಾಳಕ್ಕೆ ಸಂದೇಶವನ್ನು ನೀಡಿದ ಅವರು, ಅಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕರ್ತರ ಹತ್ಯೆ ಬಗ್ಗೆ ಉಲ್ಲೇಖ ಮಾಡಿದರು. “ಪ್ರಜಾಪ್ರಭುತ್ವದ ದಾರಿಯಲ್ಲಿ ನಮ್ಮನ್ನು ಎದುರಿಸಲು ಸಾಧ್ಯವಿಲ್ಲದವರು ಹಿಂಸಾತ್ಮಕ ರೂಪದಲ್ಲಿ ಬಿಜೆಪಿ ಕಾರ್ಯಕರ್ತರನ್ನು ನಿರ್ಮೂಲನೆ ಮಾಡಲು ಮುಂದಾಗಿದ್ದಾರೆ. ಒಂದು ವೇಳೆ ತಮ್ಮ ಕನಸನ್ನು ನನಸಾಗಿಸುತ್ತೇವೆ ಎಂದು ಅವರು ಅಂದುಕೊಂಡಿದ್ದರೆ, ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ಚುನಾವಣೆಗಳು ಬರುತ್ತವೆ ಹೋಗುತ್ತವೆ. ಆದರೆ ಸಾವಿನೊಂದಿಗೆ ಆಟವಾಡಬಾರದು” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.