ಬೆಂಗಳೂರು: ‘ಬಿಯಾಂಡ್ ಬೆಂಗಳೂರು’ ಅಂದರೆ ಬೆಂಗಳೂರಿಗಿಂತ ಹೊರತಾದಂತೆ ರಾಜ್ಯದ ಉಳಿದ ಪ್ರದೇಶಗಳಲ್ಲಿ ಐಟಿ/ಐಟಿಇಎಸ್, ಬಿಪಿಒ, ಎಲೆಕ್ಟ್ರಾನಿಕ್ ಸಿಸ್ಟಂ ಡಿವೈಸ್ ಮ್ಯಾನ್ಯುಫ್ಯಾಕ್ಚರಿಂಗ್ ಮತ್ತು ಮಂಗಳೂರು, ಧಾರವಾಡ, ಹುಬ್ಬಳ್ಳಿ, ಮೈಸೂರು ಗಳಲ್ಲಿರುವ ಟೆಲಿಕಾಂ ಉದ್ಯಮಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ನಾವಿನ್ಯತೆ, ಕೈಗಾರಿಕೋದ್ಯಮಗಳ ಉತ್ತೇಜನಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ಹೊಸ ಹೆಜ್ಜೆಯೊಂದನ್ನು ಇರಿಸಿದೆ.
ನೂತನ ಐಟಿ ನೀತಿ 2020-25ಗೆ ಸಂಬಂಧಿಸಿದಂತೆ ಈ ಪರಿಸರಸ್ನೇಹಿ ಹೊಸ ಉಪಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಅವರು ತಿಳಿಸಿದ್ದಾರೆ.
ಕೊರೋನಾ ಸೋಂಕಿನ ಸಂಕಷ್ಟದ ಈ ಅವಧಿಯಲ್ಲಿ ಜನರಿಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಅಥವಾ ತಾವು ಬಯಸಿದಲ್ಲಿಂದಲೇ ಕಾರ್ಯ ನಿರ್ವಹಿಸಲು ಅನುಕೂಲವಾಗುವಂತೆ ರಾಜ್ಯದ ಪ್ರತಿಭೆಗಳನ್ನು ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ‘ಬಿಯಾಂಡ್ ಬೆಂಗಳೂರು’ (ಬೆಂಗಳೂರಿನಿಂದ ಹೊರತಾಗಿ) ಎಂಬ ಉಪಕ್ರಮವನ್ನು ಸರ್ಕಾರ ಕೈಗೊಂಡಿದೆ. ಆ ಮೂಲಕ ರಾಜ್ಯದ ಕೌಶಲಗಳ ಪರಿಣಾಮಕಾರಿ ಬಳಕೆ ಹಾಗೂ ನಿಯಂತ್ರಣಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಈ ಕ್ರಮ ಹೆಚ್ಚು ಉಪಯುಕ್ತವಾಗಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಬೆಂಗಳೂರಿನ ಹೊರತಾದಂತೆ ರಾಜ್ಯದ ಇತರ ಪ್ರದೇಶಗಳಲ್ಲಿಯೂ ಹೂಡಿಕೆಗೆ ಅವಕಾಶ ಮತ್ತು ಉದ್ಯೋಗಾವಕಾಶಗಳ ಸೃಷ್ಟಿಗೆ ಇದು ಸಹಕಾರಿಯಾಗಿರಲಿದೆ. ಅದರೊಂದಿಗೆ ಶಿಕ್ಷಣ, ಮೂಲಸೌಕರ್ಯಗಳ ಅಭಿವೃದ್ಧಿಗೂ ಇದರಲ್ಲಿ ಹೆಚ್ಚಿನ ಪ್ರಾಶಸ್ತ್ಯ ನೀಡಲು ಸರ್ಕಾರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಈ ನೀತಿಯಂತೆ ಬೆಂಗಳೂರು ಹೊರತು ಪಡಿಸಿದಂತೆ ರಾಜ್ಯದ ಇತರ ನಗರಗಳಲ್ಲಿಯೂ ಕೈಗಾರಿಕೆಗಳ ಅಭಿವೃದ್ಧಿ, ಉದ್ಯೋಗಾವಕಾಶಗಳ ಹೆಚ್ಚಳವಾಗುವಂತೆ ಕ್ರಮ ಕೈಗೊಳ್ಳುವ ಮೂಲಕ ಈ ಹೊಸ ನೀತಿಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮತ್ತು ಮಾದರಿಯಾಗುವಂತೆ ಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.
ಬಿಯಾಂಡ್ ಬೆಂಗಳೂರು ಯೋಜನೆಗೆ ಸಂಬಂಧಿಸಿದಂತೆ ಇರುವ ಆದೇಶ ಪ್ರತಿಯಲ್ಲಿ ಇದರಲ್ಲಿ ಸರ್ಕಾರ ಕೈಗೊಳ್ಳಲಿರುವ ಪರಿಣಾಮಕಾರಿ ಕ್ರಮಗಳ ಬಗೆಗೂ ಮಾಹಿತಿ ನೀಡಲಾಗಿದೆ. ರಾಜ್ಯಾದ್ಯಂತ ಐಟಿ ಉದ್ಯೋಗಗಳನ್ನು ಆರಂಭ ಮಾಡುವ ,ಪರಿಚಯಿಸುವ ಹಿನ್ನೆಲೆಯಲ್ಲಿ ಸರ್ಕಾರ ಕೈಗೊಂಡಿರುವ ದಿಟ್ಟ ಕ್ರಮ ಇದಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರ ಭಾಗಗಳಲ್ಲಿಯೂ ಬೆಳವಣಿಗೆ, ಅಭಿವೃದ್ಧಿಯನ್ನು ಉತ್ತೇಜಿಸುವ, ಸುಸ್ಥಿರವಾದ ಅಭಿವೃದ್ಧಿ ಸಾಧಿಸುವ ಗುರಿಯೊಂದಿಗೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ಅಶ್ವತ್ಥ್ ನಾರಾಯಣ್ ಮಾಹಿತಿ ನೀಡಿದ್ದಾರೆ.
ಹೊಸ ಆರ್ಥಿಕ ಪ್ರದೇಶಗಳಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ, ಮೂಲಸೌಕರ್ಯ ಅಭಿವೃದ್ಧಿ, ನಾವಿನ್ಯತೆಯಿಂದ ಕೂಡಿದ ಪರಿಸರಸ್ನೇಹಿ ಉದ್ದಿಮೆಗಳ ಆರಂಭ, ಉದ್ಯೋಗಾವಕಾಶ ಸೃಷ್ಟಿ, ಶಿಕ್ಷಣ, ವಿದ್ಯುತ್ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ವಿಕಾಸವನ್ನು ಮಾಡುವ ಉದ್ದೇಶ ಸರ್ಕಾರ ಹೊಂದಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು, ಹುಬ್ಬಳ್ಳಿ, ಧಾರವಾಡ, ಮೈಸೂರು ಸೇರಿದಂತೆ ರಾಜ್ಯದ ಇನ್ನೂ ಹಲವಾರು ಪ್ರದೇಶಗಳಿಂದ ಪೂರಕ ಬೆಂಬಲ ದೊರೆಯುವ ವಿಶ್ವಾಸವನ್ನು ಸಹ ಸರ್ಕಾರದ ಪರವಾಗಿ ಅಶ್ವತ್ಥ್ ನಾರಾಯಣ್ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.