ಬೆಂಗಳೂರು: ಇಂದಿನ ಸಂಪುಟ ಸಭೆಯಲ್ಲಿ ವಿಜಯ ನಗರ ಪ್ರತ್ಯೇಕ ಜಿಲ್ಲೆ ರಚನೆಗೆ ಅನೌಪಚಾರಿಕ ಒಪ್ಪಿಗೆ ದೊರೆತಿದೆ.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಜಯ ನಗರ ಜಿಲ್ಲೆ ರಚನೆಯ ಸಂಬಂಧ ಅಧಿಕೃತ ಘೋಷಣೆಯಾಗಲಿದೆ. ಆ ಮೂಲಕ ರಾಜ್ಯದ 31 ನೇ ಜಿಲ್ಲೆಯಾಗಿ ವಿಜಯ ನಗರ ಎದ್ದು ನಿಂತಿದೆ. ಈ ಸಂಬಂಧ ಕಳೆದ ವರ್ಷ ಸಿಎಂ ಯಡಿಯೂರಪ್ಪ ಅವರು ವಿಜಯ ನಗರವನ್ನು ಜಿಲ್ಲೆಯನ್ನಾಗಿ ಮಾಡಲಾಗುವುದು ಎಂಬ ಹೇಳಿಕೆಯನ್ನೂ ನೀಡಿದ್ದರು.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಜಯ ನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಅವರ ಬೇಡಿಕೆಯಂತೆ ವಿಜಯ ನಗರ ಜಿಲ್ಲೆ ರಚನೆಯ ಸಂಬಂಧ ಚರ್ಚೆ ನಡೆಯಿತು. ಈ ಬೇಡಿಕೆ ಹತ್ತಾರು ವರ್ಷಗಳ ಹಿಂದಿನಿಂದಲೇ ಕೇಳಿ ಬರುತ್ತಿದ್ದು, ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ, ಹೊಸಪೇಟೆಯನ್ನು ಕೇಂದ್ರವಾಗಿರಿಸಿಕೊಂಡು ಹೊಸ ಜಿಲ್ಲೆ ರಚಿಸುವಂತೆ ಒತ್ತಾಯಿಸಲಾಗಿತ್ತು.
ಇದರನ್ವಯ ಇದೀಗ ಸಂಪುಟ ಸಭೆಯಲ್ಲಿ ವಿಜಯ ನಗರ ಜಿಲ್ಲೆ ರಚನೆಗೆ ಅನೌಪಚಾರಿಕ ಸಮ್ಮತಿ ದೊರಕಿದೆ. ಇದಕ್ಕಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಶಾಸಕ ಆನಂದ ಸಿಂಗ್ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಅಲ್ಲದೆ ಹೊಸ ಜಿಲ್ಲೆಯಾಗಲಿರುವ ವಿಜಯ ನಗರ ಜಿಲ್ಲೆಯನ್ನು ಅಭಿವೃದ್ಧಿ ವಿಚಾರವಾಗಿ ಮಾದರಿ ಜಿಲ್ಲೆಯನ್ನಾಗಿ ಮಾಡುವ ಭರವಸೆಯನ್ನು ಸಹ ಅವರು ನೀಡಿದ್ದಾರೆ. ಅಲ್ಲದೆ ಈ ನಿರ್ಧಾರ ಐತಿಹಾಸಿಕ ತೀರ್ಮಾನವಾಗಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಈ ನಿರ್ಣಯಕ್ಕೆ ಸಚಿವ ಶ್ರೀರಾಮುಲು ಸಹ ಸಂತಸ ವ್ಯಕ್ತಪಡಿಸಿದ್ದು, ಎಲ್ಲರೂ ಒಗ್ಗಟ್ಟಾಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.