ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಬೆಂಗಳೂರು ಟೆಕ್ ಸಮ್ಮಿಟ್ 2020 ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಆಗಿ ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ನಾವು ಮಾಹಿತಿ ತಂತ್ರಜ್ಞಾನ ಯುಗದ ಮಧ್ಯ ಭಾಗದಲ್ಲಿದ್ದೇವೆ. ಇಲ್ಲಿ ಯಾರು ಮೊದಲು ಹೆಜ್ಜೆ ಇರಿಸುತ್ತಾರೆ ಎಂಬುದಕ್ಕಿಂತ ಯಾರ ಹೆಜ್ಜೆ ಅತ್ಯಂತ ಉತ್ತಮವಾಗಿದೆ ಎಂಬುದು ಹೆಚ್ಚು ಮುಖ್ಯವಾಗುತ್ತದೆ. ಕೇಂದ್ರ ಸರ್ಕಾರ ತಂತ್ರಜ್ಞಾನ ಅಭಿವೃದ್ಧಿಯ ವಿಚಾರಕ್ಕೆ ಸಂಬಂಧಿಸಿದಂತೆ ಅನೇಕ ಕ್ರಮಗಳನ್ನು ಕೈಗೊಂಡಿದೆ. ಡಿಜಿಟಲ್ ಇಂಡಿಯಾ ದೇಶದ ಜನರ ಭಾಗವಾಗಿರುವುದೇ ಇದಕ್ಕೆ ಸಾಕ್ಷಿ ಎಂದು ಅವರು ತಿಳಿಸಿದ್ದಾರೆ.
ದೇಶದಲ್ಲಿ ಡಿಜಿಟಲ್ ಮತ್ತು ಟೆಕ್ ಸೊಲ್ಯೂಷನ್ಸ್ಗಾಗಿ ಕೇಂದ್ರ ಸರ್ಕಾರ ಮಾರುಕಟ್ಟೆ ಸೃಷ್ಟಿಸಿದೆ. ಸರ್ಕಾರದ ಎಲ್ಲಾ ಯೋಜನೆಗಳ, ಆಡಳಿತದ ಭಾಗವಾಗಿ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತಿವೆ. ಈ ವಿಚಾರದಲ್ಲಿ ದೇಶದ ಯುವ ಜನತೆಯ ಸಾಮರ್ಥ್ಯ, ಪ್ರತಿಭೆಗೆ ಸಿಗುವ ಅವಕಾಶವೂ ಏರಿಕೆಯಾಗಿದೆ. ನಮ್ಮಲ್ಲಿರುವ ಅಸಾಧಾರಣ ಯುವ ಶಕ್ತಿಯನ್ನು ಬಳಕೆ ಮಾಡುವ ನಿಟ್ಟಿನಲ್ಲಿಯೂ ನಾವು ಚಿಂತಿಸಬೇಕಿದೆ ಎಂದು ನಮೋ ನುಡಿದಿದ್ದಾರೆ.
ಐದು ವರ್ಷಗಳ ಹಿಂದೆ ನಾವು ಡಿಜಿಟಲ್ ಇಂಡಿಯಾ ಮಿಷನ್ ಆರಂಭಿಸಿದೆವು. ಆದರೆ ಇಂದು ಡಿಜಿಟಲ್ ಇಂಡಿಯಾ ಕೇವಲ ಒಂದು ಸಾಮಾನ್ಯ ಸರಕಾರಿ ಕಾರ್ಯಕ್ರಮವಾಗಿ ಉಳಿದಿಲ್ಲ. ವಿಶೇಷವಾಗಿ ಬಡವರಿಗೆ, ಮಧ್ಯಮವರ್ಗದವರಿಗೆ ಮತ್ತು ಸರ್ಕಾರದಲ್ಲಿ ಇರುವವರಿಗೆ ಜೀವನ ವಿಧಾನವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿ, ರಾಜ್ಯವನ್ನು ಹೂಡಿಕೆ, ಅಭಿವೃದ್ಧಿ ಹೊಂದಿದ ಉನ್ನತ ಮಟ್ಟದ ತಾಂತ್ರಿಕತೆಗಳಲ್ಲಿ ಪ್ರಮುಖ ಆಕರ್ಷಣೆಯನ್ನಾಗಿ ಮಾಡಲು ಬೇಕಾದ ಎಲ್ಲಾ ರೀತಿಯ ಕ್ರಮಗಳನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು. 2025 ರ ಅವಧಿಯ ವೇಳೆಗೆ ಭಾರತದ ಆರ್ಥಿಕತೆಯನ್ನು 5 ಟ್ರಿಲಿಯನ್ ಡಾಲರ್ಗಳಷ್ಟು ಹೆಚ್ಚಿಸಲು ಮತ್ತು ಆರ್ಥಿಕವಾಗಿ ಬಲಿಷ್ಠ ದೇಶವನ್ನಾಗಿ ಮಾಡಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ಉತ್ಸಾಹ ತೋರಿದೆ. ಇದಕ್ಕೆ ರಾಜ್ಯ ಸರ್ಕಾರ ಸಹ ಬದ್ಧವಾಗಿದೆ ಎಂದು ಅವರು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.