ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯದಲ್ಲಿ ಮುಂದಿನ ವರ್ಷದ ನವೆಂಬರ್ 1 ರ ವರೆಗೆ ಕನ್ನಡ ಕಾಯಕ ವರ್ಷವನ್ನಾಗಿ ಆಚರಣೆ ಮಾಡಲು ಮುಂದಾಗಿರುವ ಬೆನ್ನಲ್ಲೇ, ಕನ್ನಡದ ಅಭಿವೃದ್ಧಿಯ ಸದಾಶಯದ ಜೊತೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿವೆ.
ರಾಜ್ಯದಲ್ಲಿನ ಕನ್ನಡೇತರರಿಗೆ ಕನ್ನಡ ಕಲಿಸುವ ನಿಟ್ಟಿನಲ್ಲಿ ಪ್ರಾಧಿಕಾರ ಈಗಾಗಲೇ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದೀಗ ಆಯಾ ತಾಲೂಕು, ಜಿಲ್ಲಾ ಮಟ್ಟಗಳಲ್ಲಿ ಡಿಸಿಗಳ ಅಧ್ಯಕ್ಷತೆಯಲ್ಲಿ ಕನ್ನಡ ಭಾಷಾಭಿವೃದ್ಧಿಗೆ ಕನ್ನಡ ವರ್ಕ್ ಫೋರ್ಸ್ (ಕನ್ನಡ ಕಾರ್ಯ ಪಡೆ) ರಚನೆ ಮಾಡಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ಪ್ರಾಧಿಕಾರದ ಅಧ್ಯಕ್ಷ ನಾಗಾಭರಣ ಅವರು ಮಾಹಿತಿ ನೀಡಿದ್ದು, ಕನ್ನಡ ಭಾಷೆಯ ಮೇಲೆ, ರಾಜ್ಯದ ಮೇಲೆ ಪ್ರೀತಿ ಹೊಂದಿದ ಯಾರೇ ಆದರೂ ಈ ತಂಡದಲ್ಲಿ ಸದಸ್ಯರಾಗಬಹುದು ಎಂದು ತಿಳಿಸಿದ್ದಾರೆ. ಸ್ವಯಂಪ್ರೇರಿತರಾಗಿ ಇದರಲ್ಲಿ ತೊಡಗಿಸಿಕೊಳ್ಳುವುದಕ್ಕೆ ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ಸದಸ್ಯರಿಗೆ ಗುರುತಿನ ಸಂಖ್ಯೆ ನೀಡಲಾಗುವುದು. ಕನ್ನಡ ಭಾಷೆಯನ್ನು ಜನಪ್ರಿಯ ಮಾಡುವುದು ಮತ್ತು ಅವಕಾಶವಿದ್ದಲ್ಲೆಲ್ಲಾ ಕನ್ನಡವನ್ನು ಬಳಕೆ ಮಾಡುವುದು ಈ ಯೋಜನೆಯ ಪ್ರಮುಖ ಉದ್ದೇಶ ಎಂದು ತಿಳಿಸಿದ್ದಾರೆ. ವಿಸಿಟಿಂಗ್ ಕಾರ್ಡ್, ಆಮಂತ್ರಣ ಪತ್ರಿಕೆಗಳು, ನಾಮ ಫಲಕಗಳಲ್ಲಿ ಕನ್ನಡ ಭಾಷಾ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿಯೂ ಇದು ಸಹಕಾರಿಯಾಗಲಿದೆ. ಜನರನ್ನು ಒತ್ತಾಯಿಸದೆಯೇ, ಅವರಲ್ಲಿ ಕನ್ನಡ ಬಳಕೆಯ ಆಸಕ್ತಿ ಹುಟ್ಟಿಸುವಂತೆ ಮಾಡುವುದಕ್ಕೆ ಪ್ರಯತ್ನ ಮಾಡುವಂತೆ ಸದಸ್ಯರು ಕಾರ್ಯ ನಿರ್ವಹಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಅದರೊಂದಿಗೆ ಬೀದಿ ಬದಿಯಲ್ಲಿನ ಅಂಗಡಿಗಳ ನಾಮ ಫಲಕಗಳು, ಸರ್ಕಾರಿ ಕಛೇರಿಗಳ ನಾಮ ಫಲಕಗಳಲ್ಲಿ ಕನ್ನಡದ ಬಳಕೆ ಇಲ್ಲದಿರುವುದು ಅಥವಾ ಬಳಕೆ ತಪ್ಪಾಗಿರುವುದು ಕಂಡುಬಂದಲ್ಲಿ ಪ್ರಾಧಿಕಾರದ ಗಮನಕ್ಕೆ ತರುವಂತೆಯೂ ಕಾರ್ಯ ಪಡೆಯ ಸದಸ್ಯರಿಗೆ ಸೂಚಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.