ಬೆಂಗಳೂರು: ರಾಜ್ಯದಲ್ಲಿ ಸಕಾಲ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಧಿಕಾರಿಗಳು ಹೆಚ್ಚು ಗಮನ ವಹಿಸಬೇಕು ಎಂದು ಸಕಾಲ ಸಚಿವರೂ ಆಗಿರುವ, ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಅವರು ವಿಧಾನಸೌಧದಲ್ಲಿ ‘ಸಕಾಲ ಸಪ್ತಾಹ’ಕ್ಕೆ ಇಂದು ಚಾಲನೆ ನೀಡಿ ಮಾತನಾಡಿದರು.
ಸಕಾಲ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ರೀತಿಯ ವೈಫಲ್ಯ ಕಂಡು ಬರಬಾರದು. 2012 ರ ಎಪ್ರಿಲ್ 2 ರಂದು ಈ ಯೋಜನೆ ಆರಂಭಗೊಂಡು ಈ ವರೆಗೆ ಸುಮಾರು 22,88,81,652 ಅರ್ಜಿಗಳನ್ನು ಸಕಾಲದ ಮೂಲಕ ಸ್ವೀಕರಿಸಲಾಗಿದೆ. ಅವುಗಳಲ್ಲಿ 22,82,55,866 ಅರ್ಜಿಗಳ ವಿಲೇವಾರಿ ಪ್ರಕ್ರಿಯೆಯನ್ನು ಸಂಪೂರ್ಣ ಮಾಡಲಾಗಿದೆ. ಈ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ದೃಷ್ಟಿಯಿಂದ ಈ ಸಪ್ತಾಹ ಆಚರಿಸಲು ಮುಂದಾಗಿರುವುದಾಗಿ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಯೋಜನೆಯ ಮುಖಾಂತರ ಆರಂಭದಲ್ಲಿ 151 ಸೇವೆಗಳನ್ನು ನೀಡಲಾಗುತ್ತಿತ್ತು. ಸದ್ಯ 1,025 ಕ್ಕೂ ಅಧಿಕ ಸೇವೆಯನ್ನು ನೀಡಲಾಗುತ್ತಿದೆ. ಕೊರೋನಾ ಸಂಕಷ್ಟದಿಂದ ಹಿನ್ನಡೆಯಾಗಿರುವ ಈ ಸೇವೆಯನ್ನು ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ ಎಂದು ಸಚಿವರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದಂತೆ ಇರುವ ಎಲ್ಲಾ ಅಧಿಕಾರಿಗಳು ಸಹ ಹೆಚ್ಚು ಗಮನವಹಿಸಿ ಕಾರ್ಯ ನಿರ್ವಹಿಸುವಂತಾಗಬೇಕು ಎಂದು ಅವರು ಸೂಚಿಸಿದ್ದಾರೆ.
ಅನೇಕ ಕಚೇರಿಗಳಲ್ಲಿ ಸಕಾಲದ ಬಗ್ಗೆ ಜನರಿಗೆ ಮಾಹಿತಿ ನೀಡುವ ಫಲಕಗಳೇ ಕಾಣಿಸುವುದಿಲ್ಲ. ಆದ್ದರಿಂದ ಈ ಸಪ್ತಾಹದ ಅವಧಿಯಲ್ಲಿ ಎಲ್ಲಾ ಇಲಾಖೆಗಳು ಕಡ್ಡಾಯವಾಗಿ ಫಲಕಗಳನ್ನು ಅಳವಡಿಸುವಂತೆಯೂ ಸುರೇಶ್ ಕುಮಾರ್ ಸೂಚಿಸಿದ್ದಾರೆ. ಜೊತೆಗೆ ಯೋಜನೆಯ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡುವ ನಿಟ್ಟಿನಲ್ಲಿ ಸಹ ಕಾರ್ಯ ಪ್ರವೃತ್ತರಾಗಬೇಕು. ಜೊತೆಗೆ ಅವರಿಂದ ಅಭಿಪ್ರಾಯ ಸಂಗ್ರಹಿಸುವ ಕೆಲಸಗಳನ್ನು ಮಾಡುವಂತೆಯೂ ಅವರು ತಿಳಿಸಿದ್ದಾರೆ.
ಸಕಾಲವನ್ನು ಸಮರ್ಥವಾಗಿ ಪರಿಣಾಮಕಾರಿ ಯೋಜನೆಯಾಗಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಜಿಲ್ಲಾಧಿಕಾರಿಗಳು ಪರಸ್ಪರ ಒಮ್ಮತ, ಹೊಂದಾಣಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಇದೇ ಸಂದರ್ಭದಲ್ಲಿ ಸಚಿವರು ಕಿವಿಮಾತು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.