ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಮಾತುಕತೆಗಳು ಕೇಳಿ ಬರುತ್ತಿರುವ ನಡುವೆಯೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಮಾತನಾಡಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ಸಾಧ್ಯತೆಗಳಿಲ್ಲ ಎಂದು ತಿಳಿಸುವ ಮೂಲಕ ಈ ಊಹಾಪೋಹಕ್ಕೆ ತೆರೆ ಎಳೆದಿದ್ದಾರೆ.
ರಾಜ್ಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಬೇಕಾದ ಎಲ್ಲಾ ರೀತಿಯ ಕ್ರಮಗಳನ್ನು ಅವರು ಕೈಗೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ನಾಯಕತ್ವ, ಸಿಎಂ ಬದಲಾವಣೆಯ ಯಾವುದೇ ಪ್ರಶ್ನೆ ಇಲ್ಲ ಎಂದು ಅರುಣ್ ಸಿಂಗ್ ಸ್ಪಷ್ಟವಾಗಿ ನುಡಿದಿದ್ದಾರೆ. ಆ ಮೂಲಕ ಇದೇ ಮೊದಲ ಬಾರಿಗೆ ರಾಜ್ಯ ರಾಜಕಾರಣದ ಬಗೆಗೆ ಬಿಜೆಪಿ ಪಕ್ಷದ ಪ್ರಧಾನ ರಾಷ್ಟ್ರೀಯ ಕಾರ್ಯದರ್ಶಿ ಮಾತನಾಡಿದ್ದಾರೆ.
ಇದಕ್ಕೂ ಮೊದಲು ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಎದ್ದಿದ್ದ ಊಹಾಪೋಹಗಳಿಗೆ ಹಲವಾರು ರಾಜ್ಯ ಬಿಜೆಪಿ ನಾಯಕರು ತೆರೆ ಎಳೆಯುವ ನಿಟ್ಟಿನಲ್ಲಿ ಪ್ರಯತ್ನ ಮಾಡಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಇನ್ನೂ ಹಲವು ನಾಯಕರು ‘ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದಾರೆ’ ಎಂಬ ಮಾಹಿತಿಯನ್ನು ಸಹ ನೀಡಿದ್ದರು.
ಇದೀಗ ಅರುಣ್ ಸಿಂಗ್ ಅವರೂ ಇದೇ ಮಾತನ್ನು ನುಡಿದಿದ್ದು, ಯಡಿಯೂರಪ್ಪ ಅವರು ಸಾಮೂಹಿಕ ನಾಯಕ. ಸಮಾಜದ ಪ್ರತಿ ವರ್ಗಗಳ ಏಳಿಗೆಗೂ ಅವರು ಏಕ ಭಾವದಿಂದ, ಸಮಾನ ಆಸಕ್ತಿ ವಹಿಸುತ್ತಿದ್ದಾರೆ. ಪಕ್ಷದ ಬಲವರ್ಧನೆಯ ಸದಾಶಯದಿಂದ ಸಾಕಷ್ಟು ಸಭೆ ಸಮಾರಂಭಗಳನ್ನು ನಡೆಸುತ್ತಿದ್ದಾರೆ. ಅವರನ್ನು ಬದಲಾಯಿಸುವ ಯಾವುದೇ ಯೋಚನೆ ಹೈಕಮಾಂಡ್ಗೆ ಇಲ್ಲ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಹೇಳಿಕೆ ನೀಡುವುದು ಬಿಜೆಪಿ ಸಂಸ್ಕೃತಿಯಲ್ಲ ಎಂದು ಸಿಂಗ್ ನುಡಿದಿದ್ದಾರೆ.
ಹಾಗೆಯೇ ಇಂತಹ ವಿಚಾರಗಳನ್ನು ಬಹಿರಂಗವಾಗಿ ಚರ್ಚಿಸುವ ಹವ್ಯಾಸವನ್ನು ಕೈಬಿಡಬೇಕು. ಪಕ್ಷದೊಳಗೆ ಚರ್ಚಿಸುವ ವಿಚಾರಗಳನ್ನು ಸಾರ್ವಜನಿಕವಾಗಿ ಮಾತನಾಡಬಾರದು ಎಂದು ಅರುಣ್ ಸಿಂಗ್ ತಿಳಿಸಿದರು. ಕ್ಯಾಬಿನೆಟ್ ವಿಸ್ತರಣೆಯ ಬಗೆಗೂ ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಇದು ಮುಖ್ಯಮಂತ್ರಿ ಅವರ ಅಧಿಕಾರವಾಗಿದ್ದು ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆಯೂ ನಡೆಯಲಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.