ಬೆಂಗಳೂರು: ಈ ಹಿಂದೆ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಹಕಾರ ಇಲಾಖೆಯ ಕಾರ್ಯದರ್ಶಿಗೆ ಬರೆದಿದ್ದ ಪತ್ರವೊಂದನ್ನು ವಿಧಾನ ಸಭೆಯ ಅಧಿವೇಶನದಲ್ಲಿ ಬಿಜೆಪಿ ಬಹಿರಂಗಪಡಿಸಿದ್ದು, ಆ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕೆ ಈಡು ಮಾಡಿತು.
ರೈತರು ಬೆಳೆದ ಹಣ್ಣು ತರಕಾರಿಗಳನ್ನು ಎಪಿಎಂಸಿ ವ್ಯಾಪ್ತಿಯಿಂದ ಹೊರಗೆ ಮಾರಾಟ ಮಾಡುವ ಅವಕಾಶವನ್ನು ರೈತರಿಗೆ ಮಾಡಿ ಕೊಡಬೇಕು. ಎಪಿಎಂಸಿ ವ್ಯಾಪ್ತಿಯಿಂದ ಕೃಷಿ ಉತ್ಪನ್ನಗಳಿಗೆ ಸ್ವಾತಂತ್ರ್ಯ ಕಲ್ಪಿಸಬೇಕು ಎಂಬುದಾಗಿ ತಮ್ಮ ಅಧಿಕಾರಾವಧಿಯಲ್ಲಿ ಸಿದ್ದರಾಮಯ್ಯ ಈ ಪತ್ರ ಬರೆದಿದ್ದರು.
ಕನಿಷ್ಠ ಬೆಂಬಲ ಬೆಲೆಯ ಸಂಬಂಧ ಮಾತನಾಡುವಾಗ ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಟೀಕಿಸಿದರು. ಇದೇ ಸಂದರ್ಭದಲ್ಲಿ ಕಾನೂನು ಸಚಿವ ಮಾಧುಸ್ವಾಮಿ ಅವರು ಮಾತನಾಡಿ, ಕಾಂಗ್ರೆಸ್ ನೂತನ ಕೃಷಿ ಕಾಯ್ದೆಯ ಪರವೋ, ವಿರೋಧವೋ ಎಂದು ಪ್ರಶ್ನಿಸಿದರು. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾವು ಈ ಕಾಯ್ದೆಗೆ ವಿರುದ್ಧ ಎಂದು ನುಡಿದರು. ಇದೇ ಸಂದರ್ಭದಲ್ಲಿ 2013 ರಲ್ಲಿ ಸಿದ್ದರಾಮಯ್ಯ ಅವರು ಬರೆದ ಈ ಪತ್ರವನ್ನು ಮಾಧುಸ್ವಾಮಿ ಓದಿದರು.
ಇದರಿಂದ ಸಿದ್ದರಾಮಯ್ಯ ಮುಜುಗರಕ್ಕೆ ಒಳಗಾದರು ಮತ್ತು ಪತ್ರದ ವಿಚಾರಕ್ಕೆ ತೇಪೆ ಹಾಕಲು ಮುಂದಾದರು. ಜೊತೆಗೆ ಸಮರ್ಥನೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಿದರು. ಇದೇ ಸಂದರ್ಭದಲ್ಲಿ ಮಾಧುಸ್ವಾಮಿ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು. ರಾಜಕೀಯ ವಿರೋಧಕ್ಕಾಗಿ ಕಾಂಗ್ರೆಸ್ ರೈತರಿಗೆ ಅನ್ಯಾಯವೆಸಗಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಸಹ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ದ್ವಿವಿಧ ನೀತಿಯನ್ನು ಪ್ರಶ್ನಿಸಿದರು. ಹಾಗೆಯೇ ಕಾಂಗ್ರೆಸ್ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ರೈತರನ್ನು ಹಾದಿ ತಪ್ಪಿಸುತ್ತಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.