ಬೆಂಗಳೂರು: ರಾಜ್ಯದ ಅನುದಾನಿತ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಿಸುವ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪ್ರಸ್ತಾವನೆ ಸಲ್ಲಿಸಿ, ಚರ್ಚೆ ನಡೆಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಸಂಬಂಧ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮತ್ತು ಶಿಕ್ಷಕರ ಸಂಘಗಳ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ಶಿಕ್ಷಕರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ. ಶಿಕ್ಷಕರ ಸಂಘಟನೆಗಳು ಸರ್ಕಾರದ ಮೇಲೆ ನಂಬಿಕೆ ಇರಿಸಿ ಪ್ರತಿಭಟನೆ ಕೈ ಬಿಡಬೇಕು ಎಂದು ಮನವಿ ಮಾಡಿದರು.
ಈ ಹಿಂದಿನಿಂದಲೇ ಜಾರಿಯಲ್ಲಿದ್ದ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮುಂದುವರಿಸುವುದು ನೀತಿ ನಿರೂಪಣಾ ವಿಚಾರವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಎಲ್ಲಾ ಇಲಾಖೆಗಳು ಸೇರಿ ನಿರ್ಧಾರಕ್ಕೆ ಬರಬೇಕಾಗಿದೆ. ದೈಹಿಕ ಶಿಕ್ಷಣ ಶಿಕ್ಷಕರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಡಾ.ವೈದ್ಯನಾಥನ್ ವರದಿಯ ಅನುಷ್ಠಾನಕ್ಕೆ ವೃಂದ ಮತ್ತು ನೇಮಕಾತಿ ವಿಚಾರಗಳಿಗೆ ತಿದ್ದುಪಡಿ ಕ್ರಮ ಕೈಗೊಳ್ಳುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ. 2015 ರ ನಂತರದ ನೇಮಕಾತಿಗೆ ಸಂಬಂಧಿಸಿದಂತೆ ಅನುದಾನಿತ ಶಾಲಾ, ಕಾಲೇಜುಗಳ ತೆರವಾಗಿರುವ ಹುದ್ದೆಗಳ ಭರ್ತಿಗೆ, ಸದ್ಯ ಆರ್ಥಿಕ ಇಲಾಖೆಯ ನಿರ್ಬಂಧ ತೆರವಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಅನುಪಾತ 1:70 ರಿಂದ 1:50 ಕ್ಕೆ ಬದಲಾವಣೆ ಮಾಡುವ ಸಂಬಂಧ ಆಡಳಿತಾತ್ಮಕ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಲಾಯಿತು. ಅದರೊಂದಿಗೆ ಧಾರವಾಡ ವಿಭಾಗದಲ್ಲಿ 100 ಕ್ಕಿಂತ ಕಡಿಮೆ ಮಕ್ಕಳನ್ನು ಹೊಂದಿರುವ ಶಾಲೆಗಳ ನೋಂದಣಿ ರದ್ದತಿ ಆದೇಶವನ್ನು ಹಿಂಪಡೆಯುವಂತೆ ಸಚಿವರು ಸೂಚಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.