ಬೆಂಗಳೂರು: ಕೊರೋನಾ ಕಾರಣದಿಂದ ಶಾಲಾರಂಭ ಆಗದೇ ಇರುವ ಹಿನ್ನೆಲೆಯಲ್ಲಿ, ಶೈಕ್ಷಣಿಕ ವಿಚಾರಕ್ಕೆ ಯಾವುದೇ ರೀತಿಯ ಸಮಸ್ಯೆ ಉಂಟಾಗಬಾರದು ಎಂಬ ದೃಷ್ಟಿಯಿಂದ ರಾಜ್ಯ ಸರ್ಕಾರ ವಿದ್ಯಾಗಮ ಯೋಜನೆಯನ್ನು ಪರಿಷ್ಕರಿಸಿ ಸುಧಾರಣಾ ಕ್ರಮಗಳ ಜೊತೆಗೆ ಹೊಸ ರೀತಿಯಲ್ಲಿ ಅನುಷ್ಠಾನ ಮಾಡಲು ಮುಂದಾಗಿದೆ.
ಆಗಸ್ಟ್ ತಿಂಗಳಲ್ಲಿ ಆರಂಭಿಸಲಾಗಿದ್ದ ಈ ಯೋಜನೆಯನ್ನು ಕಾರಣಾಂತರಗಳಿಂದ ಅಕ್ಟೋಬರ್ 10 ರಂದು ಸ್ಥಗಿತ ಮಾಡಲಾಗಿತ್ತು. ಶೈಕ್ಷಣಿಕ ವರ್ಷ ಆರಂಭವಾಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ ಮೊದಲಾದ ಪಿಡುಗುಗಳು ಹೆಚ್ಚಾಗುವ ಆತಂಕವಿದ್ದು, ಈ ಹಿನ್ನೆಲೆಯಲ್ಲಿ ಪರಿಷ್ಕೃತ ರೂಪದಲ್ಲಿ ವಿದ್ಯಾಗಮ ಜಾರಿಗೆ ಮುಂದಾಗುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಹೈಕೋರ್ಟ್ ಅಪೇಕ್ಷೆಯಂತೆ ಸದ್ಯ ಸ್ಥಗಿತವಾಗಿರುವ ವಿದ್ಯಾಗಮ ಯೋಜನೆಯನ್ನು ಹೊಸ ಕ್ರಮಗಳೊಂದಿಗೆ ಜಾರಿ ಗೊಳಿಸಲು ಮುಂದಾಗಿದೆ. ಅದರೊಂದಿಗೆ ಆನ್ಲೈನ್ ತರಗತಿಗಳು, ಚಂದನ ವಾಹಿನಿಯಲ್ಲಿ ಪ್ರಸಾರವಾಗುವ ಪಾಠಗಳು ಸಹ ಯಥಾವತ್ತಾಗಿ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.
ಈ ಪರಿಷ್ಕೃತ ವಿದ್ಯಾಗಮದಲ್ಲಿ ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಶಾಲೆಗೆ ಬರುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು (ಪೋಷಕರ ಅನುಮತಿ ಪತ್ರ ಕಡ್ಡಾಯ), ಮಕ್ಕಳ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್, ಸೋಪುಗಳ ಬಳಕೆ ನೈರ್ಮಲ್ಯೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುವುದಕ್ಕೂ ಮಹತ್ವ ನೀಡಲಾಗಿದೆ. ಲಭ್ಯ ಶಿಕ್ಷಕರ ಮತ್ತು ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ಮಕ್ಕಳ ತಂಡ ರಚನೆ ಮಾಡುವಂತೆಯೂ ಸೂಚಿಸಲಾಗಿದೆ. ಜೊತೆಗೆ ಮನೆಯಿಂದಲೇ ಕುಡಿಯುವ ನೀರನ್ನು ತರುವಂತೆಯೂ ಮಕ್ಕಳಿಗೆ ತಿಳಿಸಲಾಗಿದ್ದು, ಇಂತಹ ಹತ್ತು ಹಲವು ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಯೋಜನೆಯ ಸಂಪೂರ್ಣ ಜವಾಬ್ದಾರಿಯನ್ನು ಆಯಾ ಜಿಲ್ಲೆಗಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ವಹಿಸಲಿದ್ದಾರೆ. ಈ ಯೋಜನೆಯಲ್ಲಿ ಬೆಳಗ್ಗೆ ತಲಾ 45 ನಿಮಿಷಗಳಂತೆ 3 ತರಗತಿಗಳು ಮತ್ತು ಮಧ್ಯಾಹ್ನದ ಬಳಿಕ 3 ತರಗತಿಗಳನ್ನು ನಡೆಸಲಾಗುತ್ತದೆ. ದಿನಕ್ಕೆ 7-8 ತಂಡಗಳಲ್ಲಿ ವಿದ್ಯಾರ್ಥಿಗಳು ಆಗಮಿಸಲು ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.