ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ನಗರಗಳಿಂದ ತಮ್ಮ ತಮ್ಮ ಊರುಗಳಿಗೆ ತೆರಳಿದವರ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ.
ನಗರಗಳಿಂದ ತಮ್ಮ ತಮ್ಮ ಗ್ರಾಮಗಳಿಗೆ ವಾಪಾಸ್ಸಾಗಿರುವವರಿಗೆ ಸಾಮಾಜಿಕ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಸಮೀಕ್ಷೆ ನಡೆಸಲು ಮುಂದಾಗಿದೆ. ಈ ಯೋಜನೆಯನ್ನು ಕಾರ್ಯಗತಗೊಳಿಸುವ ಸಂಪೂರ್ಣ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗಳ ಸುಪರ್ದಿಗೆ ವಹಿಸಿದೆ. ಈ ಯೋಜನೆ ಒಂದು ತಿಂಗಳ ಹಿಂದೆಯೇ ಕಾರ್ಯಗತವಾಗಬೇಕಿತ್ತು. ಆದರೆ ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ಕೊಂಚ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಯೋಜನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ನಗರಗಳಿಂದ ಗ್ರಾಮಗಳಿಗೆ ವಾಪಸ್ಸಾಗಿರುವ ಜನರ ಹೆಸರು, ವಿಳಾಸ, ನಗರ, ಅವರು ಈ ಹಿಂದೆ ಮಾಡುತ್ತಿದ್ದ ನೌಕರಿ, ಸದ್ಯದ ಉದ್ಯೋಗ ಮೊದಲಾದ ವಿಚಾರಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕಲಿದ್ದಾರೆ. ಈ ವರೆಗೆ ಸುಮಾರು 3.5 ಲಕ್ಷ ಜನರು ಹಳ್ಳಿಗಳಿಗೆ ವಾಪಾಸಾಗಿರುವ ಬಗ್ಗೆ ಅಂಕಿ ಅಂಶಗಳು ಸರ್ಕಾರದ ಬಳಿ ಲಭ್ಯವಿದೆ ಎಂದು ಸಂಬಂಧಿಸಿದ ಮೂಲಗಳು ಮಾಹಿತಿ ನೀಡಿವೆ.
ವಲಸಿಗರ ಆರ್ಥಿಕ ಸ್ಥಿತಿಗತಿಗಳ ಬಗೆಗೂ ಮಾಹಿತಿ ಕಲೆಹಾಕಲಿದ್ದು, ಅವರ ಅಗತ್ಯತೆಗಳನ್ನು ಗುರುತಿಸುವ ನಿಟ್ಟಿನಲ್ಲಿ ಇದು ಸಹಕಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ವಲಸಿಗರ ಟ್ರ್ಯಾಕಿಂಗ್ ಮತ್ತು ಸಾಮಾಜಿಕ ಸಂರಕ್ಷಣಾ ಚೌಕಟ್ಟು ಎಂಬ ಆ್ಯಪ್ ಅನ್ನು ಅಭಿವೃದ್ಧಿ ಮಾಡಲಾಗಿರುವುದಾಗಿಯೂ ಸರ್ಕಾರ ಮಾಹಿತಿ ನೀಡಿದೆ. ಗ್ರಾಮೀಣಾಭಿವೃದ್ಧಿ ಸಿಬ್ಬಂದಿಗಳಿಗೆ ಈ ಮೊಬೈಲ್ ಆ್ಯಪ್ ಗೆ ವಿವರಗಳನ್ನು ಸೇರಿಸುವ ಕೆಲಸವನ್ನು ವಹಿಸಲಾಗಿದೆ. ಈ ಸಮೀಕ್ಷೆ 15 ದಿನಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಪಂಚಾಯತ್ ರಾಜ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.