ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಆರ್ಥಿಕ ಮತ್ತು ಸೈಬರ್ ಅಪರಾಧಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಇನ್ನಷ್ಟು ಆಧುನಿಕ ರೀತಿಯ ತಂತ್ರಜ್ಞಾನ, ಹೆಚ್ಚಿನ ತರಬೇತಿಯನ್ನು ನೀಡುವತ್ತ ಗಮನ ಹರಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ, ಪೊಲೀಸ್ ಪದಕ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ, ರಾಜ್ಯದ ಪೊಲೀಸರಿಗೆ ಆಧುನಿಕ ತಂತ್ರಜ್ಞಾನಗಳನ್ನು ಒದಗಿಸಿಕೊಡುವ ಮೂಲಕ ಹೆಚ್ಚಿನ ಶಕ್ತಿ ತುಂಬುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ. ರಾಜ್ಯದ ಪೊಲೀಸ್ ಪಡೆಗೆ ದೇಶದಲ್ಲಿಯೇ ಉತ್ತಮ ಹೆಸರಿದೆ. ರಾಷ್ಟ್ರದಲ್ಲಿಯೇ ಅತ್ಯುತ್ತಮವಾದ ಪೊಲೀಸ್ ಪಡೆ ಎಂಬ ಕೀರ್ತಿಗೂ ರಾಜ್ಯ ಪೊಲೀಸ್ ಇಲಾಖೆ ಭಾಜನವಾಗಿದೆ. ಇಲಾಖೆಯನ್ನು ಮತ್ತಷ್ಟು ಬಲಗೊಳಿಸುವುದಕ್ಕೆ ಅಗತ್ಯವೆನಿಸುವ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಿಕೊಡುವ ಪ್ರಾಮಾಣಿಕ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.
ಪೊಲೀಸ್ ಪದಕ ಪ್ರಧಾನಿಸಿ ಮಾತನಾಡಿದ ರಾಜ್ಯಪಾಲ ವಜೂಭಾಯಿ ವಾಲಾ, ಸಮಾಜದಲ್ಲಿನ ಶಿಷ್ಟರ ರಕ್ಷಣೆಗಾಗಿ ದುರ್ಜನರಿಗೆ ಶಿಕ್ಷೆ ನೀಡುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡುತ್ತಿದೆ. ರಾಜ್ಯದಲ್ಲಿ ಶಾಂತಿ ಕಾಪಾಡುವ ಮಹತ್ವದ ಜವಾಬ್ದಾರಿಯನ್ನು ಪೊಲೀಸ್ ಇಲಾಖೆ ಹೊಂದಿದ್ದು, ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿಯೂ ಪೊಲೀಸ್ ಇಲಾಖೆ ಉತ್ತಮವಾಗಿ ಕೆಲಸ ಮಾಡುತ್ತಿದೆ. ಜನರಿಗೆ ಪೊಲೀಸರೆಂದರೆ ಭಯ ಹುಟ್ಟಬಾರದು, ಬದಲಾಗಿ ಅವರ ಮೇಲೆ ಗೌರವ ಹುಟ್ಟಬೇಕು. ಆ ರೀತಿಯಲ್ಲಿ ಸಮಾಜದ ಸ್ವಾಸ್ಥ್ಯ ಕಾಪಾಡುವ ಕೆಲಸವನ್ನು ಪೊಲೀಸರು ಮಾಡಬೇಕು ಎಂದು ನುಡಿದಿದ್ದಾರೆ.
ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಿಶೇಷ ಸೇವೆ ಸಲ್ಲಿಸಿದ ನಾಲ್ಕು ಮಂದಿ ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ, 74 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಪೊಲೀಸ್ ಪದಕಗಳನ್ನು ಪ್ರದಾನಿಸಿ ಗೌರವಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.