ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತ್ಗಳಿಗೆ ಚುನಾಯಿತರಾಗಿರುವ ಸದಸ್ಯರಿಗೆ ತರಬೇತಿ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಯೋಜನೆಯೊಂದನ್ನು ಹಾಕಿಕೊಂಡಿದೆ.
ಜನವರಿ 19 ರಿಂದ ತೊಡಗಿದಂತೆ ಮಾರ್ಚ್ 26 ರ ವರೆಗೆ ರಾಜ್ಯದಲ್ಲಿ ಈ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ತಂಡಗಳನ್ನು ರಚನೆ ಮಾಡಲಾಗುವುದಾಗಿಯೂ ಅವರು ತಿಳಿಸಿದ್ದಾರೆ. ರಾಜ್ಯದ 5 ಸಾವಿರಕ್ಕೂ ಅಧಿಕ ಗ್ರಾಮ ಪಂಚಾಯತ್ಗಳಿಗೆ ಸಂಬಂಧಿಸಿದಂತೆ 92,121 ಸದಸ್ಯರಿಗೆ ತರಬೇತಿ ನೀಡುವ ನಿಟ್ಟಿನಲ್ಲಿ ಈ ತರಬೇತಿ ನೀಡಲಾಗುತ್ತಿದೆ. ಸುಮಾರು 27 ಕೋಟಿ ರೂ. ಗಳಲ್ಲಿ ಈ ತರಬೇತಿ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಇಲಾಖೆ ಮಾಹಿತಿ ನೀಡಿದೆ.
ಈ ಯೋಜನೆಯಂತೆ ಪಂಚಾಯತ್ ಸದಸ್ಯರಿಗೆ ಬೆಳಗ್ಗೆ 10.30 ರಿಂದ ಸಂಜೆ 4 ರ ವರೆಗೆ ಪಂಚಾಯತ್ನಲ್ಲಿ ನಡೆಯುವ ನಿಧಿ ಕ್ರೋಢೀಕರಣ ಮತ್ತು ಆಡಳಿತಕ್ಕೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ. ಸುಮಾರು 15 ವಿಷಯಗಳಿಗೆ ಸದಸ್ಯರಿಗೆ ತರಬೇತಿ ನೀಡಲಾಗುತ್ತಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಕಾರ್ಯಕ್ರಮ ನಡೆಯಲಿದೆ ಎಂದು ಇಲಾಖೆ ತಿಳಿಸಿದೆ. ಹಿಂದಿನ ಬಾರಿ ನಡೆಸಲಾಗಿರುವ ತರಬೇತಿ ಕಾರ್ಯಕ್ರಮಕ್ಕಿಂತ ಭಿನ್ನವಾದ ನೆಲೆಯಲ್ಲಿ ಈ ಬಾರಿಯ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುವುದು ಎಂದು ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.
ಸರ್ಕಾರದ ಅನುದಾನದ ಹೊರತಾಗಿ ರಾಜ್ಯದ ಪಂಚಾಯತ್ಗಳು ಸ್ವಾವಲಂಬಿಗಳಾಗುವುದು ಹೇಗೆ ಎಂಬುದಕ್ಕೆ ಪೂರಕವಾಗಿ ಈ ತರಬೇತಿಯನ್ನು ನೀಡಲಾಗುತ್ತದೆ. ಪಂಚಾಯತ್ನ ಆಡಳಿತ ವೈಖರಿ, ಗ್ರಾಮ ಸಭೆ, ತೆರಿಗೆ ಸಂಗ್ರಹ, ಸಂಪನ್ಮೂಲ ಕ್ರೋಢೀಕರಣಕ್ಕೆ ಸಂಬಂಧಿಸಿದಂತೆಯೂ ಈ ತರಬೇತಿ ಯೋಜನೆ ಪೂರಕವಾಗಿರಲಿದೆ ಎಂದು ಇಲಾಖೆ ತರಬೇತಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.