ಬೆಂಗಳೂರು: ಕಳೆದ ವಾರವಷ್ಟೇ ಮುಖ್ಯಮಂತ್ರಿ ಬಿಎಸ್ವೈ ಅವರು ಸಂಪುಟ ವಿಸ್ತರಣೆ ಮಾಡಿದ್ದು, ಪ್ರಮಾಣವಚನದ ಮೂಲಕ ನೂತನ ಸಚಿವರನ್ನು ತಮ್ಮ ಸಂಪುಟಕ್ಕೆ ಸೇರಿಸಿಕೊಂಡಿದ್ದರು. ಇದೀಗ ನೂತನ ಸಚಿವರಿಗೆ ನೀಡಲಾಗಿರುವ ಖಾತೆ ಹಂಚಿಕೆಯ ಪಟ್ಟಿಗೆ ರಾಜ್ಯಪಾಲರ ಅಂಕಿತ ಬಿದ್ದಿದೆ. ಆ ಮೂಲಕ ಖಾತೆ ಹಂಚಿಕೆಗೆ ಅಧಿಕೃತ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಖಾಲಿ ಉಳಿದಿದ್ದ ಏಳು ಸಚಿವ ಸ್ಥಾನಗಳಿಗೆ ಸಂಬಂಧಿಸಿದಂತೆ ನೂತನ ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. 5 ಮಂದಿ ಮೂಲ ಬಿಜೆಪಿಗರು ಮತ್ತು 2 ಮಂದಿ ವಲಸಿಗರಿಗೆ ಮುಖ್ಯಮಂತ್ರಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ನೂತನ ಸಚಿವರಾಗಿ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಎಸ್. ಅಂಗಾರ, ಮುರುಗೇಶ್ ನಿರಾಣಿ, ಸಿ. ಪಿ. ಯೋಗೀಶ್ವರ್, ಆರ್. ಶಂಕರ್, ಎಂ. ಟಿ. ಬಿ. ನಾಗರಾಜ್ ಪ್ರಮಾಣ ವಚನ ಸ್ವೀಕರಿಸಿದ್ದರು.
ಸಚಿವ ಉಮೇಶ್ ಕತ್ತಿ ಅವರಿಗೆ ಆಹಾರ, ನಾಗರಿಕ ಪೂರೈಕೆ ಇಲಾಖೆ, ಸಚಿವ ಅರವಿಂದ ಲಿಂಬಾವಳಿ ಅವರಿಗೆ ಅರಣ್ಯ ಇಲಾಖೆ, ಸಚಿವ ಎಸ್ ಅಂಗಾರ ಅವರಿಗೆ ಬಂದರು ಮತ್ತು ಮೀನುಗಾರಿಕೆ, ಒಳನಾಡು ಜಲಸಾರಿಗೆ ಇಲಾಖೆ, ಸಚಿವ ಮುರುಗೇಶ್ ನಿರಾಣಿ ಅವರಿಗೆ ಗಣಿ, ಭೂವಿಜ್ಞಾನ ಇಲಾಖೆ, ಸಚಿವ ಸಿ ಪಿ ಯೋಗೇಶ್ವರ್ ಅವರಿಗೆ ಸಣ್ಣ ನೀರಾವರಿ, ಸಚಿವ ಆರ್ ಶಂಕರ್ ಅವರಿಗೆ ಪೌರಾಡಳಿತ ಮತ್ತು ರೇಷ್ಮೆ ಇಲಾಖೆ, ಸಚಿವ ಎಂ ಟಿ ಬಿ ನಾಗರಾಜ್ ಅವರಿಗೆ ಅಬಖಾರಿ ಇಲಾಖೆಯ ಜವಾಬ್ದಾರಿಯನ್ನು ನೀಡಲಾಗಿದೆ.
ಇನ್ನು ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ, ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಗೃಹ, ಕಾನೂನು, ಸಂಸದೀಯ ವ್ಯವಹಾರ, ಸಚಿವ ಮಾಧುಸ್ವಾಮಿ ಅವರಿಗೆ ವೈದ್ಯಕೀಯ ಶಿಕ್ಷಣ, ಕನ್ನಡ-ಸಂಸ್ಕೃತಿ ಇಲಾಖೆ, ಸಚಿವ ಸಿಸಿ ಪಾಟೀಲ್ ಅವರಿಗೆ ವಾರ್ತಾ ಇಲಾಖೆ ಮತ್ತು ಸಣ್ಣ ಕೈಗಾರಿಕೆ, ಸಚಿವ ಡಾ. ಕೆ ಸುಧಾಕರ್ ಅವರಿಗೆ ಆರೋಗ್ಯ ಇಲಾಖೆ, ಸಚಿವ ಆನಂದ್ ಸಿಂಗ್ ಅವರಿಗೆ ಪ್ರವಾಸೋದ್ಯಮ ಮತ್ತು ಪರಿಸರ ಇಲಾಖೆ, ಸಚಿವ ಗೋಪಾಲಯ್ಯ ಅವರಿಗೆ ತೋಟಗಾರಿಕೆ ಮತ್ತು ಸಕ್ಕರೆ, ಸಚಿವ ಕೆ ಸಿ ನಾರಾಯಣ ಗೌಡ ಅವರಿಗೆ ಯುವ ಸಬಲೀಕರಣ, ಕ್ರೀಡೆ ಮತ್ತು ಹಜ್ ಮತ್ತು ವಕ್ಫ್ ಇಲಾಖೆಗಳ ಜವಾಬ್ದಾರಿ ವಹಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.