ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತೊಡಗಿದಂತೆ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ಫೆ. 5 ರ ವರೆಗೆ ಈ ಅಧಿವೇಶನ ನಡೆಯಲಿದೆ.
ಈ ಅಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಿದ ರಾಜ್ಯಪಾಲ ವಜೂಭಾಯ್ ವಾಲಾ ಅವರು, ಕೊರೋನಾ ಸಂದರ್ಭದಲ್ಲಿ ರಾಜ್ಯ ಸರ್ಕಾರ ತನ್ನ ದಿಟ್ಟ ನಿಲುವುಗಳ ಮೂಲಕ ಸಮರ್ಥವಾಗಿ ಹೋರಾಟ ನಡೆಸಿದೆ. ಆ ಮೂಲಕ ಕೊರೋನಾ ನಿಗ್ರಹ ವಿಚಾರದಲ್ಲಿ ಕೈಗೊಂಡ ಕ್ರಮಗಳು ಇಡೀ ದೇಶಕ್ಕೇ ಮಾದರಿಯಾಗಿರುವುದಾಗಿಯೂ ತಿಳಿಸಿದ್ದಾರೆ.
ಕೊರೋನಾ ಹಿನ್ನೆಲೆಯಲ್ಲಿ ತಮ್ಮ ಜೀವವನ್ನೇ ಪಣವಾಗಿಟ್ಟುಕೊಂಡು ಕರ್ತವ್ಯ ನಿರ್ವಹಿಸಿದ ಕೊರೋನಾ ವಾರಿಯರ್ಸ್ ಮೃತಪಟ್ಟರೆ ಅವರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ಧನ ಒದಗಿಸುವ ನಿಟ್ಟಿನಲ್ಲಿಯೂ ಸರ್ಕಾರ ಕ್ರಮ ಕೈಗೊಂಡಿತ್ತು. ಅದರೊಂದಿಗೆ, ಕೊರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಸರ್ಕಾರ ತೆಗೆದುಕೊಂಡ ನಿರ್ಧಾರಗಳು ಅನುಕರಣೀಯವಾಗಿದ್ದವು. ಹಾಗೆಯೇ ಕೊರೋನಾದಿಂದಾಗಿ ಜನಸಾಮಾನ್ಯರು ಅನೇಕ ಸಮಸ್ಯೆಗಳಿಗೆ ಒಳಗಾಗುವ ಸನ್ನಿವೇಶ ಸೃಷ್ಟಿಯಾಗಿತ್ತು. ಬಡ ಜನರು ಸರಿಯಾದ ಕೆಲಸವಿಲ್ಲದೆ, ಆಹಾರ ಸಂಪಾದಿಸಿಕೊಳ್ಳುವುದಕ್ಕೂ ಕಷ್ಟ ಪಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿಕೊಡುವ ಮೂಲಕ ಪ್ರಶಂಸನೀಯ ಕಾರ್ಯ ಮಾಡಿದೆ ಎಂದು ಅವರು ಹೇಳಿದ್ದಾರೆ.
ಕೊರೋನಾ ಸಂದರ್ಭದಲ್ಲಿ ಮಾದರಿ ಪರೀಕ್ಷೆಯಲ್ಲಿ, ಸೋಂಕಿತರಿಗೆ ಪೂರಕ ಚಿಕಿತ್ಸೆ ನೀಡುವಲ್ಲಿಯೂ ದೇಶದಲ್ಲೇ ರಾಜ್ಯ ಮುಂಚೂಣಿಯಲ್ಲಿತ್ತು. ಇದೀಗ ಕೊರೋನಾ ಸೋಂಕಿನ ವಿರುದ್ಧ ಹೋರಾಡಲು ವ್ಯಾಕ್ಸಿನ್ ಬಂದಿದ್ದು, ಈ ಲಸಿಕೆ ವಿತರಣೆಯಲ್ಲಿಯೂ ರಾಜ್ಯ ಮೊದಲ ಸ್ಥಾನದಲ್ಲಿದೆ. ಆ ಮೂಲಕ ಇತರ ರಾಜ್ಯಗಳಿಗೆ ಮಾದರಿಯಾಗಿರುವುದು ಸಂತಸದ ವಿಚಾರ ಎಂದ ರಾಜ್ಯಪಾಲರು ನುಡಿದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.