ಬೆಂಗಳೂರು : ರಾಜ್ಯಸಭೆಯಲ್ಲಿ ಇಂದು ಭಾಷಣ ಮಾಡಿದ ಜನಪ್ರಿಯ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (ಎಪಿಎಂಸಿ) ಆಧುನೀಕರಣ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಮುಂದುವರಿಕೆ, 80 ಕೋಟಿ ಬಡವರಿಗೆ ಕಡಿಮೆ ದರದಲ್ಲಿ ಪಡಿತರ ವಿತರಣೆ ಮುಂದುವರಿಯುವುದೆಂದು ಹೇಳಿರುವುದು ಅವರಿಗೆ ಬಡವರ ಕುರಿತು ಇರುವ ಕಳಕಳಿಗೆ ಸ್ಪಷ್ಟ ಉದಾಹರಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೆಚ್ಚುಗೆ ವ್ಯಕ್ತಪಡಿಸಿದರು.
ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಈ ಕಾಯಿದೆಗಳ ಅನುಷ್ಠಾನ ಅನಿವಾರ್ಯ ಎಂಬುದನ್ನು ಪ್ರತಿಭಟನಾಕಾರರಿಗೆ ಅರ್ಥ ಮಾಡಿಸಿ, ದೇಶವನ್ನು ಮುಂದಕ್ಕೆ ಕೊಂಡೊಯ್ಯಬೇಕಾಗಿದೆ. ಈ ವಿಚಾರದಲ್ಲಿ ವಿರೋಧ ಪಕ್ಷಗಳ ಸಹಕಾರ ಬೇಕಿದೆ ಎಂದು ಪ್ರಧಾನಿ ತಿಳಿಸಿದ್ದಾರೆ. ಸಣ್ಣ ರೈತರ ಪರಿಸ್ಥಿತಿ ಸುಧಾರಣೆಗಾಗಿ ರಸಗೊಬ್ಬರ ಸರಿಯಾಗಿ ದೊರೆಯುವಂತೆ ನೋಡಿಕೊಳ್ಳಲಾಗಿದೆ. ದಾಖಲೆಯ ಉತ್ಪಾದನೆಯೂ ನಮ್ಮದಾಗಿದೆ. ರೈತರಿಂದ ಉತ್ಪನ್ನಗಳ ದಾಖಲೆ ಪ್ರಮಾಣದ ಖರೀದಿಯೂ ನಡೆದಿದೆ ಎಂದು ಪ್ರಧಾನಿಯವರು ತಿಳಿಸಿದ್ದು ಇದನ್ನು ನಳಿನ್ ಕುಮಾರ್ ಸ್ವಾಗತಿಸಿದ್ದಾರೆ.
ಫಸಲ್ ಬಿಮಾ ಯೋಜನೆಯಡಿ ರೈತರಿಗೆ 90,000 ಕೋಟಿ ರೂಪಾಯಿ ನೀಡಲಾಗಿದೆ. ಪ್ರತಿ ರೈತರಿಗೆ ಕ್ರೆಡಿಟ್ ಕಾರ್ಡ್ ನೀಡುತ್ತಿರುವುದು, ಮೀನುಗಾರರಿಗೂ ಇಂಥ ಸೌಲಭ್ಯಗಳ ವಿಸ್ತರಣೆ ಕುರಿತು ಪ್ರಧಾನಿ ಮೋದಿ ತಿಳಿಸಿದ್ದಾರೆ. ಕೃಷಿ ಮಾರುಕಟ್ಟೆಯ ನ್ಯೂನತೆಗಳನ್ನು ನಿವಾರಿಸುವ ದೃಷ್ಟಿಯಿಂದ ಹಿಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಇದೇ ಮಾದರಿಯ ಕೃಷಿ ಸುಧಾರಣೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದುದನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ. ಹಾಗೆಯೇ ನೇತಾಜಿಯವರ ತತ್ವ ಹಾಗೂ ಆದರ್ಶಗಳನ್ನು ನಾವು ಮರೆಯುತ್ತಿರುವ ಕುರಿತು ಬೇಸರ ವ್ಯಕ್ತಪಡಿಸಿದ ಪ್ರಧಾನಿಗಳು, ಜಲ, ಭೂಮಿ, ಆಕಾಶ, ಬಾಹ್ಯಾಕಾಶ ಸೇರಿದಂತೆ ಸರ್ವ ಕ್ಷೇತ್ರಗಳಲ್ಲಿ ತನ್ನನ್ನು ರಕ್ಷಿಸಿಕೊಳ್ಳುವ ಶಕ್ತಿಯನ್ನು ಭಾರತ ಹೊಂದಿದೆ ಎಂದು ಹೇಳುವ ಅವರನ್ನು ನೆನಪಿಸಿಕೊಂಡಿದ್ದಾಗಿಯೂ ಕಟೀಲ್ ತಿಳಿಸಿದ್ದಾರೆ.
ಸರ್ಜಿಕಲ್ ದಾಳಿ ಅಥವಾ ವೈಮಾನಿಕ ದಾಳಿಗಳಲ್ಲಿ ದೇಶದ ಸಾಮರ್ಥ್ಯ ಸಾಬೀತಾಗಿದೆ. ಭಾರತದ ರಾಷ್ಟ್ರೀಯತೆಯು ಸಂಕುಚಿತತೆಯನ್ನು ಹೊಂದಿಲ್ಲ. ಸ್ವಾರ್ಥ ಅಥವಾ ಆಕ್ರಮಣಕಾರಿಯಾಗಿಲ್ಲ. ಆದ್ದರಿಂದ ನಮ್ಮ ರಾಷ್ಟ್ರೀಯತೆಯ ಮೇಲೆ ನಡೆಯುತ್ತಿರುವ ದಾಳಿಯ ವಿರುದ್ಧ ಪ್ರತ್ಯುತ್ತರ ನೀಡುವುದು ಅವಶ್ಯಕ. ದೇಶದ ವಿದೇಶಿ ವಿನಿಮಯ ಸಂಗ್ರಹವು ಗರಿಷ್ಠ ಮಟ್ಟದಲ್ಲಿದೆ. ಮೊಬೈಲ್ ಉತ್ಪಾದನೆ ಹಾಗೂ ಇಂಟರ್ನೆಟ್ ಬಳಕೆ ವಿಚಾರದಲ್ಲೂ ಜಾಗತಿಕವಾಗಿ ಎರಡನೇ ಸ್ಥಾನದಲ್ಲಿ ಇರುವುದನ್ನು ಪ್ರಧಾನಿಗಳು ಜನತೆಗೆ ವಿವರಿಸಿದ್ದಾರೆ ಎಂದು ಹೇಳಿದ್ದಾಗಿ ರಾಜ್ಯಾಧ್ಯಕ್ಷರು ಹೇಳಿದ್ದಾರೆ.
ದೇಶದ 75ನೇ ಸ್ವಾತಂತ್ರ್ಯದ ಹಬ್ಬವನ್ನು ತಾಯಿ ಭಾರತಿಯ ಮಕ್ಕಳಂತೆ ನಾವು ಆಚರಿಸಬೇಕು. ಕೊರೋನಾ ಸಮರದಲ್ಲಿ ನಮ್ಮ ಗೆಲುವು ದೇಶದ ಎಲ್ಲಾ ನಾಗರಿಕರ ಗೆಲುವು ಎಂದು ಪ್ರಧಾನಿಗಳು ತಿಳಿಸಿದ್ದಾರೆ ಎಂದು ತಿಳಿಸಿದ್ದಾರೆ.
ಕೊರೋನಾ ವಿರುದ್ಧ ದೇಶದ ಜನರು ಹೊಸ ಹುಮ್ಮನಸ್ಸಿನೊಂದಿಗೆ ಹೋರಾಡಿ ಗೆದ್ದಿದ್ದಾರೆ ಎಂದು ಪ್ರಧಾನಿಗಳು ನುಡಿದಿದ್ದಾರೆ ಎಂದು ತಿಳಿಸಿರುವ ಕಟೀಲ್ ಅವರು, ಈ ಭಾಷಣಕ್ಕೆ ಸಂಬಂಧಿಸಿ ಪ್ರಧಾನಿಯವರನ್ನು ಅಭಿನಂದಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.