ಉಡುಪಿ: ಜಿಲ್ಲೆಯ ಅಲ್ಬಾಡಿ-ಆರ್ಡಿ ಗ್ರಾಮದ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢ ಶಾಲೆಯ 7 ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿಯವರ ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಈ ಶಾಲೆ, ತಮ್ಮ ವಿದ್ಯಾರ್ಥಿಗಳ ಉತ್ಸಾಹಕ್ಕೆ ಸದಾ ಪ್ರೋತ್ಸಾಹ ನೀಡುವ ಕಾಯಕವನ್ನು ಶಾಲಾ ಆರಂಭದಿಂದಲೂ ಮಾಡಿಕೊಂಡು ಬಂದಿದೆ. ಆ ಮೂಲಕ ಶಾಲೆಯ ಶಿಕ್ಷಕರು ಇತರ ಶಿಕ್ಷಕರಿಗೆ ಮಾದರಿಯಾಗಿದ್ದಾರೆ. ಅಲ್ಲದೇ ಇಲ್ಲಿನ ಶಿಕ್ಷಕ ಸುರೇಶ್ ಮರಕಾಲ ಅವರು 2019 ರಲ್ಲಿ ಉತ್ತಮ ಶಿಕ್ಷಕ ಎಂಬ ರಾಷ್ಟ್ರಪತಿ ಪುರಸ್ಕಾರವನ್ನು ಪಡೆದಿದ್ದಾರೆ.
ತಮ್ಮ ಶಾಲೆಯ ವಿದ್ಯಾರ್ಥಿಗಳು ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಭಾಗವಹಿಸಿ, ಪ್ರಧಾನಿಯರ ಪ್ರೋತ್ಸಾಹದಾಯಕ ಮಾತುಗಳಿಂದ ತಮ್ಮ ಓದಿನಲ್ಲಿ ಹೆಚ್ಚಿನ ಆಸಕ್ತಿ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ಇರುವ ಭಯವನ್ನು ನಿವಾರಿಸಿಕೊಳ್ಳವ ಮೂಲಕ ಉತ್ತಮ ಅಂಕಗಳನ್ನು ಪಡೆಯುವ ಉದ್ದೇಶ ಹೊಂದಿದ್ದಾರೆ.
ಆನ್ಲೈನ್ ಮೂಲಕ ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ದ ಈ ವಿದ್ಯಾರ್ಥಿಗಳು ಪ್ರಧಾನಿಯವರ ಸ್ಪೂರ್ತಿದಾಯಕ ಮಾತುಗಳಿಗೆ ಕಾತುರರಾಗಿದ್ದಾರೆ.
ಈ ಬಾರಿ ಸಂವಾದ ಕಾರ್ಯಕ್ರಮದಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸುವ ಅವಕಾಶವನ್ನು ಒದಗಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವವರ ಪೈಕಿ 2 ಸಾವಿರ ಅಭ್ಯರ್ಥಿಗಳು ಪರೀಕ್ಷಾ ಪೇ ಚರ್ಚಾ ಸಂವಾದಲ್ಲಿ ಭಾಗಿಯಾಗಲಿದ್ದಾರೆ ಎಂದು ಶಾಲಾ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ.
ಶಿಕ್ಷಕ ಸುರೇಶ್ ಮರಕಾಲ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷಾ ಭಯದಿಂದ ಆತ್ಯಹತ್ಯೆ ಅಂತಹ ಹಾದಿ ಹಿಡಿಯುತ್ತಿದ್ದಾರೆ. ಈ ಕಾರಣದಿಂದಾಗಿ ವಿದ್ಯಾರ್ಥಿಗಳಲ್ಲಿರುವ ಪರೀಕ್ಷಾ ಭಯ ಹೋಗಲಾಡಿಸಲು ಪ್ರಧಾನಿಯವರ ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಈ ಮೂಲಕ ದೇಶದ ವಿದ್ಯಾರ್ಥಿಗಳು , ಪೋಷಕರು ಹಾಗೂ ಶಿಕ್ಷಕರೊಂದಿಗೆ ಪ್ರಧಾನಿಯವರು ಸಂವಾದ ನಡೆಸಲಿದ್ದಾರೆ. ಎಲ್ಲರೂ ಅರ್ಜಿ ಸಲ್ಲಿಸುವ ಮೂಲಕ ಸಂವಾದದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ವಿದ್ಯಾರ್ಥಿನಿ ಅನುಶ್ರೀ, ವಿನಯಶ್ರೀ, ಸಂತೋಷ ಕುಲಾಲ, ಶಕೀಲಾ, ಅನಿತಾ ಮೊದಲಾದ ವಿದ್ಯಾರ್ಥಿಗಳು ಪರೀಕ್ಷಾ ಪೇ ಚರ್ಚಾ ದಲ್ಲಿ ಭಾಗವಹಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.