ಬೆಂಗಳೂರು: ರಾಜ್ಯದಲ್ಲಿನ ನರ್ಸಿಂಗ್ ಮತ್ತು ಅರೆವೈದ್ಯಕೀಯ ಕಾಲೇಜುಗಳಿಗೆ ನೀಡಿರುವ ಪರವಾನಗಿ, ಮೂಲಸೌಕರ್ಯ ಕೊರತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಮಗ್ರ ತನಿಖೆಗೆ ಜಂಟಿ ಸದನ ಸಮಿತಿ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಧಾನ ಪರಿಷತ್ನಲ್ಲಿಂದು ಪ್ರಕಟಿಸಿದರು.
ಈ ವಿಚಾರದಲ್ಲಿ ಸದನ ಸಮಿತಿ ತನಿಖೆಗೆ ಆಗ್ರಹಿಸಿ ಕಳೆದ ಗುರುವಾರದಿಂದಲೂ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಪಕ್ಷ ಜೆಡಿಎಸ್ ಸದಸ್ಯರ ಬೇಡಿಕೆಗೆ ಮಣಿದ ಮುಖ್ಯಮಂತ್ರಿ, ಜಂಟಿ ಸದನ ಸಮಿತಿ ನೇಮಿಸಲಾಗುವುದು ಎಂದು ಹೇಳಿದರು.
ಪ್ರತಿಪಕ್ಷ ನಾಯಕ ಎಸ್ .ಆರ್. ಪಾಟೀಲ್, ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ, ಮತ್ತಿತರರು ಮುಖ್ಯಮಂತ್ರಿಗಳ ಕ್ರಮವನ್ನು ಸ್ವಾಗತಿಸಿ, ಜಂಟಿ ಸದನ ಸಮಿತಿಯಲ್ಲಿ ಪರಿಷತ್ ಸದಸ್ಯರೇ ಅಧ್ಯಕ್ಷರಾಗಲಿ ಎಂದು ಮನವಿ ಮಾಡಿದರು.
ಇದಕ್ಕೂ ಮುನ್ನ ಸದನ ಆರಂಭವಾಗುತ್ತಿದ್ದಂತೆ ಜೆಡಿಎಸ್ ಸದಸ್ಯರು, ಕಳೆದ ಕೆಲ ದಿನಗಳಿಂದ ನಡೆಸುತ್ತಿದ್ದ ಧರಣಿಯನ್ನು ಮುಂದುವರೆಸಿ, ಸದನ ಸಮಿತಿ ರಚಿಸುವಂತೆ ಪಟ್ಟು ಹಿಡಿದಿದ್ದರು.
ಆಗ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾತನಾಡಿ, ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವುದಾಗಿ ಭರವಸೆ ನೀಡಿದರು. ಇದಕ್ಕೆ ಜೆಡಿಎಸ್ ಸದಸ್ಯರು ಒಪ್ಪದಿದ್ದಾಗ, ಸದನವನ್ನು ಕೆಲ ಕಾಲ ಮುಂದೂಡಲಾಯಿತು. ಮತ್ತೆ ಸದನ ಆರಂಭವಾದಾಗ, ಜೆಡಿಎಸ್ ಸದಸ್ಯರು, ಸದನ ಸಮಿತಿಗಾಗಿ ಬಿಗಿ ಪಟ್ಟು ಹಿಡಿದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ಇದುವರೆಗೂ ಅನುಮತಿ ನೀಡಿರುವ ನರ್ಸಿಂಗ್ ಮತ್ತು ಅರೆವೈದ್ಯಕೀಯ ನರ್ಸಿಂಗ್ ಕಾಲೇಜುಗಳ ಸಮಗ್ರ ತನಿಖೆಗೆ ಜಂಟಿ ಸದನ ಸಮಿತಿ ರಚಿಸುವುದಾಗಿ ಪ್ರಕಟಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.