ಬೆಂಗಳೂರು: ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿರುವ ಕೊರೋನಾಗೆ ಮತ್ತೆ ಶಾಲೆಗಳು ಮುಚ್ಚುವ ಪರಿಸ್ಥಿತಿಗೆ ಬರುವ ಮೊದಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ 6 – 9 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆಗಳನ್ನು ನಡೆಸುವುದಕ್ಕೆ ಅವಕಾಶ ಕಲ್ಪಿಸುವಂತೆ ರಾಜ್ಯದ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್) ವಿನಂತಿಸಿಕೊಂಡಿದೆ.
ಈ ಸಂಬಂಧ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿರುವ ಶಿಕ್ಷಣ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಅವರು, ಪರೀಕ್ಷೆ ನಡೆಸುವುದಕ್ಕೆ ಪೂರಕವಾದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮುಂದಿನ ಶೈಕ್ಷಣಿಕ ವರ್ಷಾರಂಭದ ಹಿನ್ನೆಲೆಯಲ್ಲಿಯೂ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿದೆ. ಇದಕ್ಕಾಗಿ ಸಮಯಾವಕಾಶವೂ ಬೇಕಾಗಿದೆ. ಆದ್ದರಿಂದ ಪರೀಕ್ಷೆ ನಡೆಸುವುದಕ್ಕೆ ಅನುಮತಿ ನೀಡಬೇಕು ಎಂದು ಅಭಿಪ್ರಾಯಕ್ಕಾಗಿ ಸರ್ಕಾರಕ್ಕೆ ಪತ್ರ ಬರೆದಿದೆ.
ರಾಜ್ಯದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಜೂನ್ ತಿಂಗಳಿನಿಂದಲೇ ಆನ್ಲೈನ್ ಶಿಕ್ಷಣ ಆರಂಭ ಮಾಡಲಾಗಿದೆ. ಪಠ್ಯದ ಪುನರಾವರ್ತನೆಯನ್ನೂ ಮುಗಿಸಲಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಕಲಿತ ವಿಚಾರಗಳು ವ್ಯರ್ಥವಾಗಬಾರದು ಎಂಬ ಉದ್ದೇಶದಿಂದ ಪರೀಕ್ಷೆಗಳನ್ನು ನಡೆಸುವುದಕ್ಕೆ ಅನುಮತಿ ನೀಡುವಂತೆ ಮನವಿಯಲ್ಲಿ ತಿಳಿಸಿವೆ. ಕೊರೋನಾದಿಂದ ಮತ್ತೆಲ್ಲಿ ಶಾಲೆಗಳು ನಡೆಯದೇ ವಿದ್ಯಾರ್ಥಿಗಳಿಗೆ ಈ ಶೈಕ್ಷಣಿಕ ವರ್ಷವೇ ವ್ಯರ್ಥವಾಗುವುದೋ ಎಂಬ ಭೀತಿ ಕಾಣಲಾರಂಭಿಸಿದೆ ಎಂದು ಒಕ್ಕೂಟ ಅಭಿಪ್ರಾಯ ವ್ಯಕ್ತಪಡಿಸಿದೆ. ಮಕ್ಕಳಿಗೆ ತಕ್ಷಣವೇ ಪರೀಕ್ಷೆ ನಡೆಸುವ ಅಭಿಪ್ರಾಯ ಪೋಷಕರದ್ದೂ ಆಗಿದೆ ಎಂದು ಕ್ಯಾಮ್ಸ್ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.