ಬೆಂಗಳೂರು : ಕೇಂದ್ರ ರೈಲ್ವೆ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರು ರಾಜ್ಯ ಮತ್ತು ಬೆಳಗಾವಿಯಲ್ಲಿ ಅತ್ಯದ್ಭುತವಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅದರ ಫಲವಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಗಳಾ ಅಂಗಡಿ ಅವರನ್ನು ಜನರು ಅತ್ಯಧಿಕ ಮತದಿಂದ ಗೆಲ್ಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದರು.
ಬೆಳಗಾವಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರೇಶ್ ಅಂಗಡಿ ಅವರು ಸರಳ ಸಜ್ಜನ ರಾಜಕಾರಣಿ. ಅವರ ಅವಧಿಯಲ್ಲಿ ಬೆಳಗಾವಿ ಸ್ಮಾರ್ಟ್ ಸಿಟಿ ಕಾಮಗಾರಿ ಮಂಜೂರಾಗಿದೆ. ಉಡಾನ್ ಯೋಜನೆಯಡಿ ಪೈಲಟ್ಗಳ ತರಬೇತಿಗೆ ಸಂಬಂಧಿಸಿ ಉತ್ತರ ಕರ್ನಾಟಕದ ಬೆಳಗಾವಿ ಮತ್ತು ಕಲಬುರ್ಗಿಗೆ ವೈಮಾನಿಕ ಶಾಲೆಯೂ ಮಂಜೂರಾಗಿದೆ. ಬೆಂಗಳೂರು ನಗರದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರ ಸುಗಮ ಸಂಚಾರದ ದೃಷ್ಟಿಯಿಂದ ಬೆಂಗಳೂರು ವಿಮಾನ ನಿಲ್ದಾಣದ ಬಳಿ ರೈಲ್ವೆ ಸ್ಟೇಷನ್ ಸ್ಥಾಪಿಸಲಾಗಿದೆ. ಉಪನಗರ ಪ್ರಯಾಣಿಕರ ರೈಲು ಯೋಜನೆ ಜಾರಿಗೊಳಿಸಲಾಗಿದೆ. ಈ ಎಲ್ಲಾ ಅಭಿವೃದ್ಧಿ ಕಾರ್ಯಗಳಿಂದಾಗಿ ಶ್ರೀಮತಿ ಮಂಗಳಾ ಅಂಗಡಿ ಅವರ ಗೆಲುವು ಖಚಿತ ಎಂದರು.
ಕಾಂಗ್ರೆಸ್ ಪಕ್ಷವು ಸತೀಶ್ ಜಾರಕಿಹೊಳಿ ಅವರ ರಾಜಕೀಯ ಅಂತ್ಯಕ್ಕಾಗಿಯೇ ಅವರಿಗೆ ಬೆಳಗಾವಿಯಲ್ಲಿ ಟಿಕೆಟ್ ನೀಡಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಜೊತೆಗೂಡಿ ಈ ತಂತ್ರ ಹೆಣೆದಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ಅನನುಭವಿ ಮಹಿಳೆಯೊಬ್ಬರನ್ನು ಕಣಕ್ಕಿಳಿಸಿದೆ. ಸಂಸತ್ತಿನಲ್ಲಿ ಅವರೇನು ಮಾಡಬಲ್ಲರು ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಅವರು ಮಹಿಳೆಯರಿಗೆ ಅವಮಾನ ಮಾಡಿದ್ದಾರೆ ಎಂದು ಆಕ್ಷೇಪಿಸಿದ ರಾಜ್ಯ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಬೆಳಗಾವಿಯು ಕಿತ್ತೂರು ಚೆನ್ನಮ್ಮನ ನಾಡಾಗಿದೆ ಎಂದು ನೆನಪಿಸಿದರು.
ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದ ಸೋನಿಯಾ ಗಾಂಧಿ, ನೆಹರೂ ನಿಧನ ನಂತರ ರಾಷ್ಟ್ರದ ಪ್ರಧಾನಿಗಳಾಗಿ ಕಾರ್ಯನಿರ್ವಹಿಸಿದ್ದ ಇಂದಿರಾ ಗಾಂಧಿ ಅನನುಭವಿ ಆಗಿರಲಿಲ್ಲವೇ ಎಂದು ಅವರು ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸಂಜಯ್ ಪಾಟೀಲ್, ಬೆಳಗಾವಿ ಮಹಾನಗರ ಜಿಲ್ಲಾಧ್ಯಕ್ಷರಾದ ಶಶಿಕಾಂತ್ ಪಾಟೀಲ್, ಯುವಮೋರ್ಚಾ ರಾಜ್ಯ ಅಧ್ಯಕ್ಷರಾದ ಸಂದೀಪ್ ಕುಮಾರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.