ನವದೆಹಲಿ: ಕೊರೋನಾ ಎರಡನೇ ಅಲೆ ದೇಶವನ್ನು ಕಂಗೆಡಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ.
ಕೊರೋನಾ ವಿರುದ್ಧ ದೇಶ ಮತ್ತೊಂದು ಸುತ್ತಿನ ಹೋರಾಟ ನಡೆಸುತ್ತಿದೆ. ಕೊರೋನಾ ಮೊದಲನೇ ಅಲೆಯಲ್ಲಿಯೂ ದೇಶದ ವೈದ್ಯಕೀಯ ಸಿಬ್ಬಂದಿ, ಕೊರೋನಾ ವಾರಿಯರ್ಸ್ಗಳು ಜೀವ ಪಣಕ್ಕಿಟ್ಟು ದುಡಿದಿದ್ದಾರೆ. ಈ ಬಾರಿಯೂ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಕೊರೋನಾ ಸಂದರ್ಭವನ್ನು ನಾವೆಲ್ಲರೂ ಒಟ್ಟಾಗಿ ಎದುರಿಸಬೇಕಿದೆ ಎಂದು ತಿಳಿಸಿದ್ದಾರೆ.
ಸದ್ಯ ದೇಶದಲ್ಲಿ ಕೊರೋನಾ ಸೋಂಕಿತರ ಜೀವ ಉಳಿಸುವ ನಿಟ್ಟಿನಲ್ಲಿ ಆಕ್ಸಿಜನ್ ಅಗತ್ಯತೆ ಎದುರಾಗಿದೆ. ಎಲ್ಲಾ ರಾಜ್ಯಗಳಿಗೂ ಆಕ್ಸಿಜನ್ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪ್ರಯತ್ನ ನಡೆಸುತ್ತಿದೆ. ಔಷಧ ಉತ್ಪಾದನಾ ಕಂಪೆನಿಗಳಲ್ಲಿಯೂ ಉತ್ಪಾದನಾ ಪ್ರಮಾಣ ಹೆಚ್ಚಿಸುವಂತೆ ಮನವಿ ಮಾಡಲಾಗಿದೆ. ವಿಶ್ವದ ಇತರ ದೇಶಗಳಿಗಿಂತ ನಮ್ಮ ದೇಶಲದಲ್ಲಿ ಉತ್ತಮ ಗುಣಮಟ್ಟದ ಲಸಿಕೆ ಸಂಶೋಧಿಸಲಾಗಿದೆ. ಅತ್ಯಂತ ಕಡಿಮೆ ದರದಲ್ಲಿ ಈ ಲಸಿಕೆಯನ್ನು ವಿತರಣೆ ಮಾಡುವ ಕೆಲಸವನ್ನು ಸಹ ಮಾಡಲಾಗುತ್ತಿದೆ. ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ನೀಡಲಾಗುತ್ತಿದ್ದು, ಎಲ್ಲರೂ ಕೊರೋನಾ ಲಸಿಕೆ ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ.
ಲಸಿಕೆ ಅಭಿಯಾನದಡಿ ಕೊರೋನಾ ಲಸಿಕೆಯನ್ನು ಶೀಘ್ರ ಪೂರೈಕೆ ಮಾಡಲಾಗುತ್ತಿದೆ. ಜೊತೆಗೆ ಅರ್ಹರಿಗೆ ಉಚಿತ ಲಸಿಕೆ ನೀಡಲಾಗುತ್ತಿದೆ. ಎಲ್ಲರೂ ಲಸಿಕೆ ಪಡೆಯುವಂತೆ ಅವರು ತಿಳಿಸಿದ್ದಾರೆ. ಕೊರೋನಾ ಕಾರಣಕ್ಕೆ ಶ್ರಮಿಕರು ನಗರಗಳಿಂದ ಹಳ್ಳಿಗಳತ್ತ ತೆರಳದಂತೆಯೂ ಅವರು ಮನವಿ ಮಾಡಿದ್ದಾರೆ. ಈಗ ಕೊರೋನಾ ಮೊದಲ ಅಲೆಯ ಸಂದರ್ಭದಲ್ಲಿ ಇದ್ದಂತಹ ಪರಿಸ್ಥಿತಿ ಇಲ್ಲ. ಕೊರೋನಾ ಟೆಸ್ಟಿಂಗ್ ಲ್ಯಾಬ್ಗಳು ಹೆಚ್ಚಾಗಿವೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಬಗ್ಗೆಯೂ ತಿಳುವಳಿಕೆ ಬಂದಿದೆ. ಜನರ ಸಹಕಾರದಿಂದ ಈ ಬಾರಿಯೂ ಕೊರೋನಾವನ್ನು ಸಮರ್ಥವಾಗಿ ಎದುರಿಸಲಿದ್ದೇವೆ ಎಂದು ಮೋದಿ ತಿಳಿಸಿದ್ದಾರೆ.
ಕೊರೋನಾ ತಡೆಯುವ ನಿಟ್ಟಿನಲ್ಲಿ ಹಲವು ಸ್ವಯಂ ಸೇವಾ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಇವರೆಲ್ಲರ ಸೇವೆಯನ್ನು ಪರಿಗಣಿಸಬೇಕು. ಜೊತೆಗೆ ಕೊರೋನಾ ಹಿನ್ನೆಲೆಯಲ್ಲಿ ಯಾರೂ ಅನಾವಶ್ಯಕವಾಗಿ ಸಾರ್ವಜನಿಕವಾಗಿ ಓಡಾಡುವುದನ್ನು ನಿಲ್ಲಿಸುವ ಮೂಲಕ ಆರೋಗ್ಯ ಕಾಳಜಿ ವಹಿಸಬೇಕು. ಮಕ್ಕಳ ಬಗೆಗೂ ಎಚ್ಚರಿಕೆ ವಹಿಸಬೇಕಾಗುತ್ತದೆ. ಕೊರೋನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕಠಿಣ ಸಂದರ್ಭದಲ್ಲಿ ಕೊರೋನಾ ಲಾಕ್ಡನ್ ಕೊನೆಯ ಅಸ್ತ್ರವಾಗಲಿ. ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಧೈರ್ಯ, ಸ್ಥೈರ್ಯಗಳ ಮೂಲಕ, ಕೊರೋನಾ ನಿಯಮಗಳನ್ನು ಪಾಲಿಸಬೇಕು. ಆ ಮೂಲಕ ಕೊರೋನಾ ಗೆಲ್ಲಬೇಕು ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.