ಬೆಂಗಳೂರು: ರಾಮನಗರ ಮತ್ತು ಚನ್ನಪಟ್ಟಣ ನವನಗರಗಳ ನಿರ್ಮಾಣದ ದೃಷ್ಟಿಯಿಂದ ಜನತೆ ಈ ಬಾರಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂದು ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಇಂದು ವಿಶ್ವಾಸ ವ್ಯಕ್ತಪಡಿಸಿದರು.
ನಗರಸಭಾ ಚುನಾವಣೆಯ ಹಿನ್ನೆಲೆಯಲ್ಲಿ “ನವ ರಾಮನಗರ- ಚನ್ನಪಟ್ಟಣ: ಬಿಜೆಪಿ ವಾಗ್ದಾನ” ಪ್ರಣಾಳಿಕೆ ಬಿಡುಗಡೆ ಕುರಿತ ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈ ನಗರಗಳ ಸರ್ವತೋಮುಖ ಪ್ರಗತಿಗೆ ರಾಜ್ಯ ಸರಕಾರ ಬದ್ಧವಾಗಿದೆ ಎಂದರು,
ಇಲ್ಲಿನ ಜನಪ್ರತಿನಿಧಿಗಳು ಕೇವಲ ತಮ್ಮ ವೈಯಕ್ತಿಕ ಅಭಿವೃದ್ಧಿ, ಸ್ವಜನ ಪಕ್ಷಪಾತದಲ್ಲೇ ತೊಡಗಿದ್ದರು. ಇದರಿಂದಾಗಿ ಇಲ್ಲಿ ಅಭಿವೃದ್ಧಿ ಆಗಿಲ್ಲ ಎಂದು ಅವರು ತಿಳಿಸಿದರು.
ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ ಅರ್ಹರಿಗೆ ನಿವೇಶನ ಒದಗಿಸಿ ಮನೆ ನಿರ್ಮಾಣ ಮಾಡಿಕೊಡಲಾಗುವುದು. ಮನೆಮನೆಗೂ ಉದ್ಯೋಗಾವಕಾಶ ನೀಡಲಾಗುವುದು. ಸರ್ವರಿಗೂ ಆರೋಗ್ಯದ ಪರಿಕಲ್ಪನೆ ಸರಿಯಾಗಿ ಜಾರಿಗೊಳ್ಳಲಿದೆ ಎಂದರು.
ರಾಮನಗರಕ್ಕೆ ಪ್ರತ್ಯೇಕ ವಿಶ್ವವಿದ್ಯಾನಿಲಯ ಸ್ಥಾಪಿಸಲಾಗುವುದು. ಕೋವಿಡ್ ಅನ್ನು ರಾಜ್ಯ ಸರಕಾರ ಸಮರ್ಪಕವಾಗಿ ನಿರ್ವಹಿಸಿದೆ ಎಂದು ತಿಳಿಸಿದರು.
ಸಚಿವರಾದ ಸಿ.ಪಿ.ಯೋಗೇಶ್ವರ್ ಅವರು ಮಾತನಾಡಿ, ಬಿಜೆಪಿ ಅಭ್ಯರ್ಥಿಗಳು ಇಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದರಲ್ಲದೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರಚಿಸಲಾಗಿದೆ ಎಂದರು.
ಸಚಿವರಾದ ಡಾ. ಸುಧಾಕರ್ ಅವರು ರಾಜೀವ್ಗಾಂಧಿ ವಿವಿ ಕಟ್ಟಡ ಕಾಮಗಾರಿ ಶೀಘ್ರವೇ ಜಿಲ್ಲೆಯಲ್ಲಿ ಆರಂಭಿಸಲಾಗುವುದು. ರಾಮನಗರವನ್ನು ಆರೋಗ್ಯ ನಗರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದರು.
ಸಚಿವರಾದ ಬೈರತಿ ಬಸವರಾಜ್, ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್, ನಾರಾಯಣ ಗೌಡ, ಕರ ಕೌಶಲ್ಯ ನಿಗಮದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಬೇಲೂರು ಅವರು ಮಾತನಾಡಿ, ಸರ್ವ ಕ್ಷೇತ್ರಗಳ ಮತ್ತು ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಜನರು ಈ ಬಾರಿ ಬಿಜೆಪಿಯನ್ನು ಬೆಂಬಲಿಸುವ ವಿಶ್ವಾಸ ವ್ಯಕ್ತಪಡಿಸಿದರು, ನೀರಿನ ಸಮಸ್ಯೆ ಮತ್ತು ಒಳಚರಂಡಿ ಸಮಸ್ಯೆ ಪರಿಹಾರಕ್ಕಾಗಿ ಮತ್ತು ಜಿಲ್ಲೆಯ ವಿವಿಧ ಸಮಸ್ಯೆಗಳ ಪರಿಹಾರದ ದೃಷ್ಟಿಯಿಂದ ಮತದಾರರು ಬಿಜೆಪಿಗೆ ಗೆಲುವು ತಂದು ಕೊಡಲಿದ್ದಾರೆ ಎಂದು ಆಶಿಸಿದರು.
ಸಂಸದರಾದ ಪಿ.ಸಿ.ಮೋಹನ್, ಪಕ್ಷದ ಜಿಲ್ಲಾಧ್ಯಕ್ಷರಾದ ಹುಲುವಾಡಿ ದೇವರಾಜ್ ಮತ್ತು ಇತರ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.