ನವದೆಹಲಿ: ಕೊರೋನಾ ಎರಡನೇ ಅಲೆ ಸಂಪೂರ್ಣ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈ ಕಠಿಣ ಪರಿಸ್ಥಿತಿ ನಮ್ಮ ಧೈರ್ಯವನ್ನು ಪರೀಕ್ಷೆ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಈ ಬಾರಿಯ ಮನ್ ಕೀ ಬಾತ್ನಲ್ಲಿ ದೇಶವಾಸಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕೋವಿಡ್ 19 ನಮ್ಮ ಧೈರ್ಯ ಮತ್ತು ನೋವು ಸಹಿಸಿಕೊಳ್ಳುವ ಸಾಮರ್ಥ್ಯವನ್ನು ಪರೀಕ್ಷೆ ಮಾಡುತ್ತಿದೆ. ಈ ಸೋಂಕಿನಿಂದಾಗಿ ನಮ್ಮ ಪ್ರೀತಿ ಪಾತ್ರರನೇಕರು ನಮ್ಮನ್ನು ಅಕಾಲಿಕವಾಗಿ ಬಿಟ್ಟು ಹೋಗಿದ್ದಾರೆ. ಕೊರೋನಾ ಮೊದಲನೇ ಅಲೆ ಎದುರಿಸಿದ ಬಳಿಕ ನಮ್ಮೊಳಗಿನ ಆತ್ಮಸ್ಥೈರ್ಯ ಹೆಚ್ಚಾಗಿದೆ. ಆದರೂ ಎರಡನೇ ಅಲೆ ನಮ್ಮನ್ನೆಲ್ಲಾ ಬೆಚ್ಚಿ ಬೀಳಿಸುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಕೊರೋನಾ ನಿಯಂತ್ರಣ ಸಂಬಂಧ ತಜ್ಞರು, ಹಲವು ಕ್ಷೇತ್ರಗಳ ಅಧಿಕಾರಿಗಳು, ಔಷಧ ತಯಾರಕ ಉದ್ಯಮಿಗಳು, ಆಕ್ಸಿಜನ್ ಉತ್ಪಾದಕರು ಸೇರಿದಂತೆ ಇನ್ನೂ ಅನೇಕರ ಜೊತೆಗೆ ಅಗತ್ಯ ಚರ್ಚೆ ನಡೆಸಲಾಗಿದೆ. ಇಂತಹ ಕಠಿಣ ಸಂದರ್ಭದಲ್ಲಿ ವೈದ್ಯಕೀಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಹಾಗೆಯೇ ಕೊರೋನಾ ಸಂಬಂಧ ಈಗಾಗಲೇ ಹಲವಾರು ಸುಳ್ಳು ಸುದ್ದಿಗಳು ಹಬ್ಬುತ್ತಿವೆ. ಈ ಹಿನ್ನೆಲೆಯಲ್ಲಿ ವಿಶ್ವಾಸಾರ್ಹ ಮೂಲಗಳಿಂದ ಮಾತ್ರವೇ ಮಾಹಿತಿ ಪಡೆದುಕೊಳ್ಳಿ ಎಂದು ಪ್ರಧಾನಿ ಜನರಲ್ಲಿ ಮನವಿ ಮಾಡಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವೈದ್ಯರು ಸಹ ಅರಿವು ಮೂಡಿಸುತ್ತಿದ್ದಾರೆ. ಒಟ್ಟಾರೆ ಕೊರೋನಾ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರ ಗಳ ಜೊತೆಗೆ ಕೇಂದ್ರ ಸರ್ಕಾರ ಸಹ ಒಟ್ಟಾಗಿ ಶ್ರಮಿಸುತ್ತಿದೆ ಎಂದು ಅವರು ಹೇಳಿದರು.
ಕೊರೋನಾ ಲಸಿಕೆಗೆ ಸಂಬಂಧಿಸಿದಂತೆ ಸಹ ವದಂತಿಗಳು ಹರಿದಾಡುತ್ತಿವೆ. ಜನತೆ ಅಂತಹವುಗಳಿಗೆ ಕಿವಿಗೊಡಬಾರದು. ಸದ್ಯ 45 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ ವಿತರಣೆ ಮಾಡಲಾಗುತ್ತಿದೆ. ಹಾಗೆಯೇ ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಸಹ ಲಸಿಕೆ ನೀಡಲಾಗುತ್ತಿದ್ದು, ಎಲ್ಲಾ ಫಲಾನುಭವಿಗಳು ಲಸಿಕೆ ಪಡೆದುಕೊಳ್ಳುವಂತೆ ಅವರು ತಿಳಿಸಿದ್ದಾರೆ. ಕಾರ್ಪೊರೇಟ್ ವಲಯ ತಮ್ಮ ಉದ್ಯೋಗಿಗಳಿಗೆ ಲಸಿಕೆ ಹಾಕುವ ಮೂಲಕ ಈ ಅಭಿಯಾನದಲ್ಲಿ ಭಾಗವಹಿಸಬಹುದು ಎಂದು ಪ್ರಧಾನಿ ಹೇಳಿದ್ದಾರೆ. ಕೊರೋನಾ ಹೋರಾಟದಲ್ಲಿ ಆಂಬುಲೆನ್ಸ್ ಚಾಲಕರ ಸೇವೆಯನ್ನು ಸಹ ಪ್ರಧಾನಿ ಈ ಸಂದರ್ಭದಲ್ಲಿ ಶ್ಲಾಘಿಸಿದ್ದು, ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.