ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ದೇಶದ ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಿದರು. ದೇಶದಲ್ಲಿ ಆಮ್ಲಜನಕದ ಲಭ್ಯತೆ, ಔಷಧಿಗಳು, ಆರೋಗ್ಯ ಮೂಲಸೌಕರ್ಯ ಇತ್ಯಾದಿಗಳಿಗೆ ಸಂಬಂಧಿಸಿದ ಪರಿಸ್ಥಿತಿಯ ಬಗ್ಗೆ ಅವರು ಅವಲೋಕನ ಪಡೆದರು.
ಆಮ್ಲಜನಕ ಪೂರೈಕೆಯನ್ನು ಹೆಚ್ಚಿಸುವ ಕೆಲಸ ಮಾಡುತ್ತಿರುವ ಸಶಕ್ತ ಗುಂಪು ದೇಶದಲ್ಲಿ ಆಮ್ಲಜನಕದ ಲಭ್ಯತೆ ಮತ್ತು ಪೂರೈಕೆಯನ್ನು ಹೆಚ್ಚಿಸಲು ಕೈಗೊಂಡಿರುವ ಪ್ರಯತ್ನಗಳ ಬಗ್ಗೆ ಪ್ರಧಾನ ಮಂತ್ರಿಯವರಿಗೆ ವಿವರಿಸಿತು. ರಾಜ್ಯಗಳಿಗೆ ಆಮ್ಲಜನಕದ ಹಂಚಿಕೆಯನ್ನು ಹೆಚ್ಚಿಸಿರುವ ಬಗ್ಗೆ ಪ್ರಧಾನಿಯವರಿಗೆ ಮಾಹಿತಿ ನೀಡಿತು. ದೇಶದಲ್ಲಿ ದ್ರವೀಕೃತ ವೈದ್ಯಕೀಯ ಆಮ್ಲಜನಕ (ಎಲ್ಎಂಒ) ಉತ್ಪಾದನೆಯು ಆಗಸ್ಟ್ 2020 ರಲ್ಲಿ ದಿನಕ್ಕೆ 5,700 ಮೆ.ಟನ್ ಇತ್ತು. ಈಗ ಅದು 8,922 ಮೆ.ಟನ್ (2021 ಏಪ್ರಿಲ್ 25 ರಂದು) ಗೆ ಏರಿದೆ ಎಂದು ತಿಳಿಸಲಾಯಿತು. ದೇಶೀಯ ಎಲ್ಎಂಒ ಉತ್ಪಾದನೆಯು ಏಪ್ರಿಲ್ 2021 ರ ಅಂತ್ಯದ ವೇಳೆಗೆ ದಿನಕ್ಕೆ 9,250 ಮೆ.ಟನ್ ದಾಟಲಿದೆ.
ಪಿಎಸ್ಎ ಆಕ್ಸಿಜನ್ ಘಟಕಗಳನ್ನು ಶೀಘ್ರವಾಗಿ ಪ್ರಾರಂಭಿಸಲು ರಾಜ್ಯ ಸರ್ಕಾರಗಳೊಂದಿಗೆ ನಿಕಟವಾಗಿ ಕೆಲಸ ಮಾಡುವಂತೆ ಪ್ರದಾನಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಿಎಸ್ಎ ಆಕ್ಸಿಜನ್ ಘಟಕಗಳನ್ನು ಸ್ಥಾಪಿಸಲು ರಾಜ್ಯಗಳನ್ನು ಪ್ರೋತ್ಸಾಹಿಸುತ್ತಿರುವುದಾಗಿ ಅಧಿಕಾರಿಗಳು ಪ್ರಧಾನಿಯವರಿಗೆ ತಿಳಿಸಿದರು.
ಆಕ್ಸಿಜನ್ ಎಕ್ಸ್ಪ್ರೆಸ್ ರೈಲ್ವೆ ಸೇವೆಯ ಕಾರ್ಯವೈಖರಿ ಮತ್ತು ಆಮ್ಲಜನಕ ಟ್ಯಾಂಕರ್ಗಳನ್ನು ಸಾಗಿಸಲು ಭಾರತೀಯ ವಾಯುಪಡೆ (ಐಎಎಫ್) ಕೈಗೊಂಡ ದೇಶೀಯ ಮತ್ತು ಅಂತರರಾಷ್ಟ್ರೀಯ ಕ್ರಮಗಳ ಬಗ್ಗೆ ಪ್ರಧಾನ ಮಂತ್ರಿಯವರಿಗೆ ವಿವರಿಸಲಾಯಿತು.
ವೈದ್ಯಕೀಯ ಮೂಲಸೌಕರ್ಯ ಮತ್ತು ಕೋವಿಡ್ ನಿರ್ವಹಣೆಯಲ್ಲಿ ಕೆಲಸ ಮಾಡುವ ಸಶಕ್ತ ಗುಂಪು ಹಾಸಿಗೆಗಳು ಮತ್ತು ಐಸಿಯುಗಳ ಲಭ್ಯತೆಯನ್ನು ಹೆಚ್ಚಿಸಲು ಕೈಗೊಳ್ಳುತ್ತಿರುವ ಪ್ರಯತ್ನಗಳ ಕುರಿತು ಪ್ರಧಾನ ಮಂತ್ರಿಗೆ ವಿವರಿಸಿತು. ಸೋಕಿನ ಪ್ರಸರಣ ಸರಪಳಿಯನ್ನು ಮುರಿಯುವ ಪ್ರಯತ್ನಗಳ ಬಗ್ಗೆಯೂ ಪ್ರಧಾನಿವರಿಗೆ ಮಾಹಿತಿ ನೀಡಲಾಯಿತು. ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ನಿರ್ದಿಷ್ಟ ಮಾರ್ಗಸೂಚಿಗಳು ಮತ್ತು ಕಾರ್ಯತಂತ್ರಗಳನ್ನು ರಾಜ್ಯಗಳ ಸಂಬಂಧಿತ ಏಜೆನ್ಸಿಗಳು ಸರಿಯಾಗಿ ಕಾರ್ಯಗತಗೊಳಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕಾದ ಅಗತ್ಯವನ್ನು ಪ್ರಧಾನಿಯವರು ಒತ್ತಿ ಹೇಳಿದರು.
ಸಂವಹನ ಕುರಿತ ಸಶಕ್ತ ಗುಂಪು ಕೋವಿಡ್ ಸಂಬಂಧಿತ ನಡವಳಿಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕೈಗೊಳ್ಳುತ್ತಿರುವ ಪ್ರಯತ್ನಗಳ ಬಗ್ಗೆ ಪ್ರಧಾನ ಮಂತ್ರಿಯವರಿಗರ ವಿವರಿಸಿತು.
ಸಭೆಯಲ್ಲಿ ಸಂಪುಟ ಕಾರ್ಯದರ್ಶಿ, ಗೃಹ, ಆರೋಗ್ಯ, ವಾರ್ತಾ ಮತ್ತು ಪ್ರಸಾರ, ಔಷಧ, ಜೈವಿಕ ತಂತ್ರಜ್ಞಾನ ಸಚಿವಾಲಯಗಳ ಕಾರ್ಯದರ್ಶಿಗಳು, ನೀತಿ ಆಯೋಗದ ಸದಸ್ಯ, ಐಸಿಎಂಆರ್ ಮಹಾನಿರ್ದೆಶಕರು ಮತ್ತಿತರ ಹಿರಿಯ ಅಧಿಕಾರಿಗಳು ಪಾಲ್ಗೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.