ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಪತ್ರವನ್ನು ಬರೆದಿದ್ದು, ಕಾಂಗ್ರೆಸ್ ಪಕ್ಷವು ದೇಶದಲ್ಲಿ ಕೋವಿಡ್-19 ವಿರುದ್ಧದ ಹೋರಾಟವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಯೊಂದಿಗೆ ಸಮನ್ವಯವನ್ನು ಸಾಧಿಸಿ ಕೊರೋನಾವೈರಸ್ ಅನ್ನು ಸೋಲಿಸಲು ಶತಪ್ರಯತ್ನವನ್ನು ನಡೆಸುತ್ತಿದ್ದಾರೆ ಎಂದು ನಡ್ಡಾ ಹೇಳಿದ್ದಾರೆ.
“ಆದ್ಯತೆಯ ಪ್ರದೇಶಗಳಲ್ಲಿ ವೈದ್ಯಕೀಯ ಸಾಮರ್ಥ್ಯವನ್ನು ಹೆಚ್ಚಿಸಲು ಮತ್ತು ಪೀಡಿತರಾದವರಿಗೆ ಸಮರ್ಪಕ ಸೌಲಭ್ಯವನ್ನು ಒದಗಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೋವಿಡ್-19 ಎದುರಿಸಲು ದೇಶದ ಪ್ರತಿ ಭಾಗಕ್ಕೂ ಸಮರ್ಪಕ ವೈದ್ಯಕೀಯ ಪರಿಕರ ಮತ್ತು ಔಷಧಿಗಳನ್ನು ಖಚಿತಪಡಿಸುವ ಪ್ರಯತ್ನಗಳು ಜಾರಿಯಲ್ಲಿವೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷ ಮತ್ತು ಅದರ ಕೆಲವು ಮುಖ್ಯಮಂತ್ರಿಗಳು ಜನರನ್ನು ದಾರಿತಪ್ಪಿಸುತ್ತಿದ್ದಾರೆ, ಆತಂಕವನ್ನು ಸೃಷ್ಟಿ ಮಾಡುತ್ತಿದ್ದಾರೆ ಮತ್ತು ತಮ್ಮ ರಾಜಕೀಯ ಬೇಳೆ ಬೇಯಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿರುವ ನಡ್ಡಾ, ನಿಮ್ಮ ಪಕ್ಷದ ಕೆಲವು ಸದಸ್ಯರು ನಿಜಕ್ಕೂ ಅಭೂತಪೂರ್ವವಾದ ಕಾರ್ಯವನ್ನು ಮಾಡಿ ಜನರಿಗೆ ಸಹಾಯ ಮಾಡುತ್ತಿದ್ದಾರೆ, ಆದರೆ ನಿಮ್ಮ ಪಕ್ಷದವರು ಹರಡುತ್ತಿರುವ ಋಣಾತ್ಮಕತೆಯಿಂದಾಗಿ ಅವರ ಕಾರ್ಯಗಳು ಕೂಡ ಮುಸುಕಾಗಿವೆ ಎಂದಿದ್ದಾರೆ.
ಆರಂಭದಲ್ಲಿ ಕೋವ್ಯಾಕ್ಸಿನ್ ಲಸಿಕೆ ಬಗ್ಗೆ ಕಾಂಗ್ರೆಸ್ ಹರಡಿದ ಊಹಾಪೋಹಗಳ ಜನರನ್ನು ಲಸಿಕೆ ಪಡೆಯಲು ಹಿಂಜರಿಯುವಂತೆ ಮಾಡಿತು ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದ ಮುಖಂಡ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ನಡ್ಡಾ, ಲಾಕ್ಡೌನ್ ಬಗ್ಗೆ ಅವರು ನೀಡುತ್ತಿರುವ ದ್ವಂದ್ವ ಹೇಳಿಕೆಗಳ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ನೂತನ ಸಂಸತ್ ಕಟ್ಟಡವನ್ನು ನಿರ್ಮಾಣ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ, ಆದರೆ ಕಾಂಗ್ರೆಸ್ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದು ವಿಪರ್ಯಾಸ. ಕಾಂಗ್ರೆಸ್ ಆಡಳಿತ ಇರುವ ಛತ್ತಿಸ್ಗಢ ಕೂಡ ಹೊಸ ವಿಧಾನಸೌಧ ನಿರ್ಮಾಣ ಮಾಡುತ್ತಿದೆ ಎಂದಿದ್ದಾರೆ.
ಕೊರೋನಾವೈರಸ್ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ ಕಟಿಬದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.