ಬೆಂಗಳೂರು: ಭಾರತೀಯ ಸಂವಿಧಾನದಲ್ಲಿ 22 ಭಾಷೆಗಳಿಗೆ ಮಾನ್ಯತೆ ನೀಡಿದ್ದರೂ ಸಹ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್), ಸಾರ್ವಜನಿಕ ವಲಯದ ಬ್ಯಾಂಕುಗಳ (ಪಿಎಸ್ ಬಿ) ಗುಮಾಸ್ತರ ವೃಂದ(ಕ್ಲರಿಕಲ್ ಕೇಡರ್) ನೇಮಕಕ್ಕೆ ಕೇವಲ ಎರಡು ಭಾಷೆಗಳಲ್ಲಿ ಅಂದರೆ ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಮಾತ್ರ ನಡೆಸಲಾಗುತ್ತಿದ್ದು, ಪರೀಕ್ಷೆಗಳನ್ನು ಸ್ಥಳೀಯ ಭಾಷೆಗಳಲ್ಲೂ ನಡೆಸುವಂತೆ ಸಾರ್ವಜನಿಕ ವಲಯದಿಂದ ಕೂಗು ಕೇಳಿ ಬಂದಿದೆ.
ಈ ಸಂಬಂಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಬ್ಯಾಂಕಿಂಗ್ ಪರೀಕ್ಷೆಗಳನ್ನು (IBPS) ಸ್ಥಳೀಯ ಭಾಷೆಗಳಲ್ಲಿಯೇ ನಡೆಸುವ ಕುರಿತು ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಸ್ಥಳೀಯ ಭಾಷೆಗಳಲ್ಲಿಯೇ ಪರೀಕ್ಷೆಗಳನ್ನು ನಡೆಸುವ ದೃಷ್ಟಿಯಿಂದ ಒಂದು ಸಮಿತಿಯನ್ನು ರಚಿಸುವುದಾಗಿ ಭರವಸೆಯನ್ನು ನೀಡಿದ್ದಾಗಿ ಜೋಶಿ ತಿಳಿಸಿದ್ದಾರೆ.
ಹಾಗೆಯೇ ಈ ವಿಚಾರಕ್ಕೆ ಸಂಬಂಧಿಸಿದಂತೆ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ. ಅಲ್ಲಿಯವರೆಗೆ ಆಯ್ಕೆ ಪರೀಕ್ಷೆಗಳನ್ನು ತಡೆಹಿಡಿಯಲಾಗುವುದು ಎಂದು ವಿತ್ತ ಸಚಿವರು ತಿಳಿಸಿರುವುದಾಗಿಯೂ ಜೋಶಿ ಅವರು ಟ್ವೀಟ್ನಲ್ಲಿ ಹೇಳಿದ್ದಾರೆ.
ಅದರ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳುವದಾಗಿ ಭರೆವಸೆ ನೀಡಿದ್ದು, ಅಲ್ಲಿಯವರೆಗೆ ಆಯ್ಕೆ ಪರೀಕ್ಷೆಯನ್ನು ತಡೆ ಹಿಡಿಯಲಾಗುವದು. ವಿತ್ತ ಸಚಿವರಿಗೆ ಧನ್ಯವಾದಗಳು.
ಈಗಾಗಲೇ ಗ್ರಾಮೀಣ ಮತ್ತು ಪ್ರಾದೇಶಿಕ ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೇ ನಡೆಸಲಾಗುತ್ತಿದೆ.— Pralhad Joshi (@JoshiPralhad) July 13, 2021
ಇತ್ತೀಚೆಗೆ ಮಾಧ್ಯಮದ ಕೆಲವು ವಿಭಾಗಗಳಲ್ಲಿ ಪ್ರಕಟವಾದ ವರದಿಗೆ ಹಣಕಾಸು ಸಚಿವಾಲಯವು ಸ್ಪಷ್ಟನೆ ನೀಡಿದೆ.
ಹಣಕಾಸು ಸಚಿವರ ಹೇಳಿಕೆ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು (ಆರ್ ಆರ್ ಬಿ)ಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಈ ಮೂಲಕ ತಿಳಿಸಲಾಗಿದೆ. ಸ್ಥಳೀಯ ಯುವಕರಿಗೆ ಸಮಾನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ಸರ್ಕಾರ 2019ರಲ್ಲಿ ಆರ್ ಆರ್ ಬಿಗಳ ಕಚೇರಿ ಸಹಾಯಕ ಮತ್ತು ಅಧಿಕಾರಿ ವೃಂದ-1 ಇವುಗಳ ನೇಮಕಾತಿಗೆ ಹಿಂದಿ ಮತ್ತು ಇಂಗ್ಲಿಷ್ ಮಾತ್ರವಲ್ಲದೆ, ಕೊಂಕಣಿ ಮತ್ತು ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿತ್ತು. ಅದರನ್ವಯ ಈ ನೇಮಕಾತಿಗಳಿಗೆ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲೂ ಸಹ ನಡೆಸಲಾಗುತ್ತಿದೆ.
ಸಾರ್ವಜನಿಕ ವಲಯದ ಬ್ಯಾಂಕುಗಳ (ಪಿಎಸ್ ಬಿಗಳ) ಗುಮಾಸ್ತರ ವೃಂದದ ನೇಮಕಾತಿಗೆ ಸ್ಥಳೀಯ/ಪ್ರಾದೇಶಿಕ ಭಾಷೆಗಳಲ್ಲೇ ಪರೀಕ್ಷೆಗಳನ್ನು ನಡೆಸಬೇಕೆಂಬ ಬೇಡಿಕೆಯ ಬಗ್ಗೆ ಸಮಗ್ರವಾಗಿ ಪರಿಶೀಲಿಸಲು ಸಮಿತಿಯೊಂದನ್ನು ರಚಿಸಲಾಗಿದೆ. ಆ ಸಮಿತಿ 15 ದಿನಗಳೊಳಗೆ ತನ್ನ ಶಿಫಾರಸ್ಸುಗಳನ್ನು ಸಲ್ಲಿಸಲಿದೆ. ಹಾಗಾಗಿ ಪ್ರಸ್ತುತ ಐಬಿಪಿಎಸ್ ಆರಂಭಿಸಿದ್ದ ಪರೀಕ್ಷಾ ಪ್ರಕ್ರಿಯೆಯನ್ನು ಸಮಿತಿ ಶಿಫಾರಸ್ಸು ನೀಡುವವರೆಗೆ ತಡೆಹಿಡಿಯಲಾಗುವುದು ಎಂದು ವಿತ್ತ ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.