ಬೆಂಗಳೂರು: ರಾಜ್ಯದಲ್ಲಿ ಯುವ ಜನರಲ್ಲಿನ ಕೌಶಲಾಭಿವೃದ್ಧಿಯಾದಲ್ಲಿ ಮಾತ್ರ ‘ಕೌಶಲ ಕರ್ನಾಟಕ’ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಅವರು ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಇಂದು ನಡೆದ ‘ವಿಶ್ವ ಯುವ ಕೌಶಲ’ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ದೇಶವೊಂದರ ಅಭಿವೃದ್ಧಿ ಅಲ್ಲಿರುವ ಯುವ ಶಕ್ತಿಯ ಕೌಶಲಗಳನ್ನು ಆಧರಿಸಿದೆ ಎಂದು ಅವರು ತಿಳಿಸಿದ್ದಾರೆ.
ಹಾಗೆಯೇ ರಾಜ್ಯ ಸರ್ಕಾರ ಯುವಕರಲ್ಲಿ ಕೌಶಲಗಳನ್ನು ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಕಳೆದ ಎರಡು ವರ್ಷಗಳಿಂದ ಪ್ರಮುಖ ಯೋಜನೆಗಳನ್ನು ರೂಪಿಸಿದೆ. ರಾಜ್ಯದ ಸರ್ಕಾರಿ ಐಟಿಐ ಗಳನ್ನು ಉನ್ನತೀಕರಿಸಿ, ಅಲ್ಲಿನ ಮೂಲಸೌಕರ್ಯಗಳನ್ನು ಹೆಚ್ಚಿಸುವ ಮೂಲಕ ವಿದ್ಯಾರ್ಥಿಗಳಿಗೆ ಮತ್ತಷ್ಟು ಪರಿಣಾಮಕಾರಿ ತರಬೇತಿಗಳನ್ನು ನೀಡುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನ ನಡೆಸುತ್ತಿದೆ. ಇದಕ್ಕಾಗಿ ಒಡಂಬಡಿಕೆಗಳನ್ನು ಮಾಡಿಕೊಳ್ಳಲಾಗಿದ್ದು, ಉನ್ನತೀಕರಣ ಕಾರ್ಯವನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ ಮುಂದಿನ ಸೆಪ್ಟೆಂಬರ್ ವೇಳೆಗೆ ಅವುಗಳನ್ನು ಉದ್ಘಾಟಿಸಲು ಕ್ರಮ ಕೈಗೊಳ್ಳುವ ಭರವಸೆಯನ್ನು ಅವರು ಇದೇ ಸಂದರ್ಭದಲ್ಲಿ ನೀಡಿದ್ದಾರೆ.
ಕೊರೋನಾ ಬಳಿಕ ಇತರ ರಾಜ್ಯಗಳ ವಲಸಿಗ ಕಾರ್ಮಿಕರು ಮತ್ತೆ ಇತ್ತ ಮುಖ ಮಾಡುತ್ತಿದ್ದಾರೆ. ಅವರಿಗೆ ತರಬೇತಿ, ಉದ್ಯೋಗ ದೊರೆಯುವಂತೆ ಮಾಡುವ ನಿಟ್ಟಿನಲ್ಲೂ ಸರ್ಕಾರ ಕೌಶಲ್ಕರ್- ಡಾಟ್.ಕಾಂ ವೆಬ್ ಪೋರ್ಟಲ್ ಅಭಿವೃದ್ಧಿ ಮಾಡಿದೆ ಎಂದು ತಿಳಿಸಿದ್ದಾರೆ. ಕೈಗಾರಿಕೆಗಳಲ್ಲಿನ ಉದ್ಯೋಗಾವಕಾಶಗಳಿಗನುಗುಣವಾಗಿ ಸ್ಕಿಲ್ ಕನೆಕ್ಟ್ ವೆಬ್ ಪೋರ್ಟಲ್ ಮೂಲಕ ಯುವಕರಿಗೆ ಉದ್ಯೋಗ ಒದಗಿಸಲು ಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿದ್ದಾರೆ.
ಹಾಗೆಯೇ ವಿದೇಶದಲ್ಲಿನ ಉದ್ಯೋಗಗಳಿಗೆ ನುರಿತ ಮಾನವ ಸಂಪನ್ಮೂಲಗಳನ್ನು ಒದಗಿಸಲು ಅಂತರಾಷ್ಟ್ರೀಯ ವಲಸೆ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಜೊತೆಗೆ ಬ್ರಿಟನ್ಗೆ ರಾಜ್ಯದ ದಾದಿಯರನ್ನು ಕಳುಹಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ತಾಂತ್ರಿಕ ಕೌಶಲ ತರಬೇತಿ ನೀಡುವ ಹಿನ್ನೆಲೆಯಲ್ಲಿ ಈ ವರ್ಷ ನಾಲ್ಕು ಹೊಸ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಡಿಪ್ಲೊಮಾಗಳನ್ನು ಆರಂಭಿಸಲಾಗುವುದು. ಮಹಿಳಾ ಸ್ವಸಹಾಯ ಗುಂಪುಗಳಿಗೆ ಗ್ರಾಮ ಮಟ್ಟದ ಒಕ್ಕೂಟಗಳ ಮೂಲಕ ಹೂಡಿಕೆ ನಿಧಿಯಾಗಿ 400 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ಅವರು ಮಾತನಾಡಿ, ರಾಜ್ಯದಲ್ಲಿ ಒಂದು ಕೋಟಿ ಉದ್ಯೋಗ ಸೃಷ್ಟಿಗೆ ಪೂರಕವಾಗಿ ವಿವಿಧ ಉಪಕ್ರಮಗಳನ್ನು ಕೈಗೊಳ್ಳಲಾಗುವುದು. ಮಿಷನ್ ಯುವ ಸಮೃದ್ಧಿ ಯೋಜನೆ ಆರಂಭಿಸಲಾಗುವುದು ಇದೊಂದು ಕ್ರಾಂತಿಕಾರಕ ಉಪಕ್ರಮವಾಗಿದ್ದು, ಇದಕ್ಕೆ ಪೂರಕವಾಗಿ ಕಾರ್ಯಪಡೆಗಳನ್ನು ರಚಿಸುವುದಾಗಿ ತಿಳಿಸಿದ್ದಾರೆ. ಕೊರೋನಾದಿಂದ ಹದೆಗೆಟ್ಟ ಆರ್ಥಿಕತೆಯನ್ನು ಮೇಲೆತ್ತಲು ಆರ್ಥಿಕ ಅವಕಾಶ ಸೃಷ್ಟಿ ಯೋಜನೆ ಕೈಗೆತ್ತಿಕೊಳ್ಳಲಾಗುವುದು. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಪೈಲಟ್ ಪ್ರಾಜೆಕ್ಟ್ ಆರಂಭ ಮಾಡುವುದಾಗಿ ಅವರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರ ಮತ್ತು ಖಾಸಗಿ ಕ್ಷೇತ್ರಗಳ ನಡುವೆ ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಇದಲ್ಲದೆ ರಾಜ್ಯದಲ್ಲಿ ಸಮಗ್ರವಾಗಿ ಕೌಶಲಾಭಿವೃದ್ಧಿ, ಉದ್ಯೋಗ ಸೃಷ್ಟಿಗೆ ಸಂಬಂಧಿಸಿದಂತೆ ಕೈಗೊಳ್ಳಲಿರುವ ಹಲವು ಯೋಜನೆಗಳಿಗೆ ಸಂಬಂಧಿಸಿದಂತೆ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ಅವರು ವರದಿ ನೀಡಿದರು.
ಮುಖ್ಯಮಂತ್ರಿ @BSYBJP ರವರು ಇಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಆಯೋಜಿಸಿದ್ದ ವಿಶ್ವ ಯುವ ಕೌಶಲ್ಯ ದಿನಾಚರಣೆಯನ್ನು ಉದ್ಘಾಟಿಸಿದರು.
ಉಪಮುಖ್ಯಮಂತ್ರಿ ಹಾಗೂ ಕೌಶಲ್ಯಾಭಿವೃದ್ಧಿ, ಸಚಿವ @drashwathcn, ಇಲಾಖೆ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.#YouthSkillDay pic.twitter.com/TC763aeuEM
— CM of Karnataka (@CMofKarnataka) July 15, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.