ಬೆಂಗಳೂರು: ರಾಜ್ಯದಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದನೆ ಮಾಡುವವರಿಗೆ ವಿವಿಧ ರೀತಿಯಲ್ಲಿ ಆರ್ಥಿಕ ಪ್ರೋತ್ಸಾಹ ನೀಡುವ ಯೋಜನೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.
ಈ ಸಂಬಂಧ ಮಾತನಾಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯನ್ನು ಇಡೀ ರಾಜ್ಯ ಎದುರಿಸಿತ್ತು. ಪ್ರಸ್ತುತ ರಾಜ್ಯದಲ್ಲಿ 9 ಆಮ್ಲಜನಕ ಉತ್ಪಾದನಾ ಘಟಕಗಳಿವೆ, 815 ಮೆಟ್ರಿಕ್ ಟನ್ ಉತ್ಪಾದನಾ ಸಾಮರ್ಥ್ಯ ಇದ್ದು, 5,700 ಮೆಟ್ರಿಕ್ ಟನ್ ದಾಸ್ತಾನು ಸಾಮರ್ಥ್ಯವಿದೆ. ಇವೆರಡನ್ನೂ ಹೆಚ್ಚಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಹೂಡಿಕೆ ಮಾಡಲು ಬರುವ ಉದ್ಯಮಿಗಳಿಗೆ ರಿಯಾಯಿತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಆಕ್ಸಿಜನ್ ಉತ್ಪಾದನಾ ವಲಯದಲ್ಲಿ ಹೂಡಿಕೆ ಮಾಡುವವರಿಗೆ 25% ಗಳಷ್ಟು ಸಹಾಯ ಧನ ನೀಡಲಾಗುತ್ತದೆ. ಹೂಡಿಕೆದಾರರು ಕನಿಷ್ಠ 10 ಕೋಟಿ ಹೂಡಿಕೆ ಮಾಡಬೇಕು. ಘಟಕ ಆರಂಭವಾಗಿ ಮೂರು ವರ್ಷಗಳ ವರೆಗೆ ವಿದ್ಯುತ್ ಮೇಲಿನ ಸುಂಕ 100% ಗಳಷ್ಟು ರಿಯಾಯಿತಿ ನೀಡಲಾಗುತ್ತದೆ. ವಿದ್ಯುತ್ ದರ ಪಾವತಿ ಮೇಲೆ ಪ್ರತಿ ಟನ್ ಆಮ್ಲಜನಕ ಉತ್ಪಾದನೆಗೆ 1000 ರೂ. ಸಬ್ಸಿಡಿ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ನೋಂದಣಿ ಮತ್ತು ಮುದ್ರಾಂಕದ ಸ್ಟ್ಯಾಂಪ್ ಡ್ಯೂಟಿಯಲ್ಲಿ 100% ವಿನಾಯಿತಿ, ಭೂ ಪರಿವರ್ತನೆಗಾಗಿ 100% ಪಾವತಿ ಶುಲ್ಕ ಮರುಪಾವತಿಗೂ ಒಪ್ಪಿಗೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಹಾಗೆಯೇ ಕಂದಾಯ ಇಲಾಖೆಯಲ್ಲಿ ಭಡ್ತಿಗಾಗಿ ಸಾಮಾನ್ಯ ಹಿರಿತನ ಪಟ್ಟಿ ಸಿದ್ಧಪಡಿಸುವುದು, 139 ಕೈದಿಗಳಿಗೆ ಸನ್ನಡತೆ ಆಧಾರದಲ್ಲಿ ಬಿಡುಗಡೆ, ಜೆಒಸಿ, ಪಿಯುಸಿಗೆ ತತ್ಸಮಾನ ಎಂದು ಪರಿಗಣಿಸುವುದಕ್ಕೂ ಇಂದು ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.
ಹಾಗೆಯೇ ರಾಯಚೂರು ಜಿಲ್ಲೆಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೆಜು ಕಟ್ಟಡ ನಿರ್ಮಾಣಕ್ಕೆ 58 ಕೋಟಿ ರೂ. ಆಡಳಿತಾತ್ಮಕ ಅನುಮೋದನೆ, ಮಂಗಳೂರು ಮತ್ತು ಬೆಳಗಾವಿಯಲ್ಲಿ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಯ ಕಟ್ಟಡ ನಿರ್ಮಾಣಕ್ಕೆ 31.66 ಕೋಟಿ ರೂ. ಆಡಳಿತಾತ್ಮಕ ಅನುಮೋದನೆ ಸೇರಿದಂತೆ ಇನ್ನೂ ಹಲವಾರು ಯೋಜನೆಗಳಿಗೆ ಈ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.