ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷಗಳು ತುಂಬಿದ್ದು, ಈ ಹಿನ್ನೆಲೆಯಲ್ಲಿ ನಡೆದ ಸಾಧನಾ ಸಮಾವೇಶ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಅವರು ಮಾತನಾಡಿದರು.
ಶಿಕಾರಿಪುರದಲ್ಲಿ ಬಿಜೆಪಿಯಿಂದ ನನ್ನ ರಾಜಕೀಯ ಜೀವನ ಆರಂಭ ಮಾಡಿದ್ದೇನೆ. ಶಿಕಾರಿಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕನಾಗಿ ಕಾರ್ಯ ನಿರ್ವಹಿಸಿ, ಚುನಾವಣೆಯಲ್ಲಿ ಸ್ಪರ್ಧಿಸಿ, ಗೆದ್ದು, ಘಟಕದ ಅಧ್ಯಕ್ಷನಾಗಿ, ವಿಧಾನ ಸಭಾ ವಿಪಕ್ಷ ನಾಯಕನಾಗಿ, ಮುಖ್ಯಮಂತ್ರಿಯಾಗಿ ಹೀಗೆ ಬೇರೆ ಬೇರೆ ಜವಾಬ್ದಾರಿಗಳನ್ನು ಹೊತ್ತು ಅವುಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಪಕ್ಷವನ್ನು ಕಟ್ಟಿ ಬೆಳೆಸಿದ ತೃಪ್ತಿ ನನಗಿದೆ ಎಂದು ಅವರು ತಿಳಿಸಿದ್ದಾರೆ.
ಶಿವಮೊಗ್ಗದ ಶಿಕಾರಿಪುರ ಜನತೆ ನನ್ನನ್ನು ಏಳು ಬಾರಿ ಚುನಾವಣೆಯಲ್ಲಿ ಗೆಲ್ಲಿಸಿದ್ದಾರೆ. ಪಕ್ಷದ ರಾಷ್ಟ್ರೀಯ ನಾಯಕರ ಬೆಂಬಲ ನನಗೆ ದೊರೆತಿದೆ. ಬಿಜೆಪಿ ನನಗೆ ಒದಗಿಸಿಕೊಟ್ಟ ಸ್ಥಾನ, ಅವಕಾಶಗಳಿಗೆ ನಾನು ಚಿರ ಋಣಿ ಎಂದು ಭಾವುಕರಾಗಿದ್ದಾರೆ.
ಪ್ರಧಾನಿ ಮೋದಿ ಅವರು ಮತ್ತೆ ಲೋಕಸಭೆಯಲ್ಲಿ ಗೆದ್ದು ಬರಬೇಕು. ದೇಶವನ್ನು ವಿಶ್ವಮಟ್ಟದಲ್ಲಿ ತೆಗೆದುಕೊಂಡು ಹೋಗುವ ಅವರ ಶಕ್ತಿ ಮತ್ತಷ್ಟು ಹೆಚ್ಚಬೇಕು ಎಂದು ಅವರು ತಿಳಿಸಿದ್ದಾರೆ. ಹಾಗೆಯೇ ಕಾರ್ಗಿಲ್ ವಿಜಯ ದಿವಸ್ ಹಿನ್ನೆಲೆಯಲ್ಲಿ ಶುಭಾಶಯ ತಿಳಿಸಿರುವ ಅವರು, ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ, ಹುತಾತ್ಮರಾದ ಯೋಧರಿಗೆ ಪ್ರಣಾಮಗಳನ್ನು ಅರ್ಪಿಸಿದ್ದಾರೆ. ಹಾಗೆಯೇ ಟೊಕಿಯೋ ಒಲಿಂಪಿಕ್ಸ್ನಲ್ಲಿ ಭಾಗವಹಿಸುತ್ತಿರುವ ದೇಶದ, ರಾಜ್ಯದ ಕ್ರೀಡಾಪಟುಗಳಿಗೆ ಅವರು ಶುಭಕಾಮನೆಗಳನ್ನು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ತನಗೆ ಈ ವರೆಗೆ ರಾಜಕೀಯದಲ್ಲಿ ಎಲ್ಲಾ ರೀತಿಯ ಅನುಕೂಲಗಳನ್ನು ಒದಗಿಸಿಕೊಟ್ಟ ಪಕ್ಷದ ಹೈಕಮಾಂಡ್, ಹಿರಿಯರು, ಕಾರ್ಯಕರ್ತರು, ಹಿತೈಷಿಗಳಿಗೆ ಧನ್ಯವಾದ ಸಮರ್ಪಿಸಿರುವ ಅವರು, ಭಾವುಕರಾಗಿ ಇಂದು ತಾವು ರಾಜೀನಾಮೆ ನೀಡುತ್ತಿರುವುದಾಗಿಯೂ ಘೋಷಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.